ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಅಜ್ಜರಕಾಡು ಕ್ರೀಡಾಂಗ ಣದಲ್ಲಿ ಮಾರ್ಚ್ 17ರಿಂದ ನಡೆಯುವ ಭಾರತೀಯ ಸೇನಾ ನೇಮಕಾತಿ ರ್ಯಾಲಿಗೆ
ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಕಚೇರಿಯಲ್ಲಿ ಸೇನಾ ನೇಮಕಾತಿ ರ್ಯಾಲಿ ಕುರಿತು ಸೇನಾ ನೇಮಕಾತಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ಅಭ್ಯರ್ಥಿಗಳಿಗೆ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಯನ್ನು ನಗರಸಭೆ ನೋಡಿಕೊಳ್ಳುತ್ತಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕ್ರೀಡಾಂಗಣದಲ್ಲಿ ತುರ್ತು ಚಿಕಿತ್ಸೆಗೆ ಆಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿ ಹಾಗೂ ಅಂಕಪಟ್ಟಿಗಳ ಪರಿಶೀಲನೆಗೆ ಶಿಕ್ಷಣ ಇಲಾಖೆಯ 20 ಸಿಬ್ಬಂದಿ ನಿಯೋಜಿಸಲಾಗಿದೆ. ಅಗತ್ಯವಿದ್ದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ರ್ಯಾಲಿಯಲ್ಲಿ ಪ್ರತಿದಿನ 3,000 ಅಭ್ಯರ್ಥಿಗಳು ಬರಲಿದ್ದು, ನೂಕು ನುಗ್ಗಲು ತಪ್ಪಿಸಲು, ರ್ಯಾಲಿ ಸುಗಮವಾಗಿ ನಡೆಯಲು ಸೂಕ್ತ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. ಕ್ರೀಡಾಂಗಣಕ್ಕೆ ನಿರಂತರ ವಿದ್ಯುತ್ ಮತ್ತು ವೇಗದ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು ಎಂದು ಡಿಸಿ ಹೇಳಿದರು.
ಜಿಲ್ಲೆಯಲ್ಲಿ ನಡೆಯುವ ಸೇನಾ ನೇಮಕಾತಿ ರ್ಯಾಲಿಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಸೇನೆಯ ಅಧಿಕಾರಿಗಳು ಕೋರುವ ಎಲ್ಲ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸೇನಾ ನೇಮಕಾತಿ ವಿಭಾಗದ ಕರ್ನಲ್ ದುಬಾಷ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.