Kundapra.com ಕುಂದಾಪ್ರ ಡಾಟ್ ಕಾಂ

ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನೊಬ್ಬ ಅಸಮಾನ್ಯನಾಗಿ ಬೆಳೆಯಬಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪಕ್ಷದ ತತ್ವ ಸಿದ್ದಾಂತಗಳ ಆಧಾರದಲ್ಲಿ ಕೆಲಸ ಮಾಡುವ ಸಾಮಾನ್ಯ ಕಾರ್ಯಕರ್ತನನ್ನೂ ಅಸಮಾನ್ಯನಾಗಿ ಬೆಳೆಯಲು ಬಿಜೆಪಿ ಪಕ್ಷ ಅತ್ಯುತ್ತಮ ತಳಹದಿ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿದ್ದ ನರೇಂದ್ರ ಮೋದಿ ದೇಶದ ಪ್ರಧಾನ ಮಂತ್ರಿ ಹುದ್ದೆಗೇರಿದ್ದು ಇದಕ್ಕೊಂದು ಸ್ಪಷ್ಟ ನಿದರ್ಶನ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ಶ್ಯಾಮಲಾ ಕುಂದರ್ ಹೇಳಿದರು.

ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಭಾರತ ಮಾತೆಗೆ ಪುಪ್ಪಾರ್ಪಣೆ ಮಾಡಿ ಉದ್ಘಾಟಿಸಿ ಮಾತನಾಡಿದ ಅವರು ಅನೇಕ ಹಿರಿಯ ನಾಯಕರ ಶ್ರಮದಿಂದ ಬಿಜೆಪಿ ದೊಡ್ಡ ಪಕ್ಷವಾಗಿ ಬೆಳೆದು ನಿಂತಿದೆ. ಅದನ್ನು ಸಮರ್ಥವಾಗಿ ಮುನ್ನೆಡೆಸುವ ಜವಾಬ್ದಾರಿ ನೂತನ ಪದಾಧಿಕಾರಿಗಳ ಹೆಗಲ ಮೇಲಿದೆ. ಒಳಿತು ಕೆಡುಕುಗಳನ್ನು ಆಂತರಿಕವಾಗಿಯೇ ಚರ್ಚಿಸಿ, ಪಕ್ಷದ ತಳಹದಿಯನ್ನು ಗಟ್ಟಿಗೊಳಿಸಿಕೊಳ್ಳುವ ಜವಾಬ್ದಾರಿ ಪ್ರತಿ ಕಾರ್ಯಕರ್ತನ ಮೇಲೂ ಇದೆ.

ಉಡುಪಿ ಜಿಲ್ಲೆ ಬಿಜೆಪಿ ಉಪಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಪದಗ್ರಹಣ ನೆರೆವೇರಿಸಿದರು. ನಿರ್ಗಮಿತ ಅಧ್ಯಕ್ಷ ರಾಜೇಶ್ ಕಾವೇರಿ ಅವರು ನೂತನ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ ಅವರಿಗೆ ಪಕ್ಷದ ಶಾಲು ತೊಡಿಸುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ನೂತನ ಅಧ್ಯಕ್ಷರಾಗಿ ಕಾಡೂರು ಸುರೇಶ್ ಶೆಟ್ಟಿ, ಪ್ರಧಾನ ಕಾರ‍್ಯದರ್ಶಿಗಳಾಗಿ ಶಂಕರ ಅಂಕದಕಟ್ಟೆ, ಭಾಸ್ಕರ ಬಿಲ್ಲವ ಅಧಿಕಾರ ಸ್ವೀಕರಿಸಿದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಕಾರ‍್ಯಕಾರಿಣಿ ಸದಸ್ಯ ಕಿರಣ್ ಕೊಡ್ಗಿ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಮೆಂಡನ್, ಮಾಜಿ ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಗಣಪತಿ ಶ್ರೀಯಾನ್, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ‍್ಯದರ್ಶಿ ಗೋಪಾಲ ಕಳಂಜೆ ಮೊದಲಾದವರು ಉಪಸ್ಥಿತರಿದ್ದರು/ಕುಂದಾಪ್ರ ಡಾಟ್ ಕಾಂ ಸುದ್ದಿ/

Kundapura Block BJP President Installation ceremony at BJP Office (2)

Exit mobile version