Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರದಲ್ಲಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಸಾರ್ವಜನಿಕ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮರಳಿನ ಅಭಾವದಿಂದ ಕರಾವಳಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ನಿರ್ಮಾಣ ಕಾರ್ಯಗಳಿಗೂ ಮರಳಿಲ್ಲದೆ ಮಂದಗತಿಯಲ್ಲಿ ಸಾಗುತ್ತಿದೆ. ಕಾನೂನು ತೊಡಕಿರುವುದರಿಂದ ಸ್ಪಷ್ಟವಾದ ಮರಳು ನೀತಿಯನ್ನು ರೂಪಿಸಲು ಸಾಧ್ಯವಾಗಿಲ್ಲ ಎಂದು ಯುವಜನ, ಕ್ರೀಡೆ, ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಇಲ್ಲಿನ ಆರ್.ಎನ್. ಶೆಟ್ಟಿ ಮಿನಿ ಹಾಲ್‌ನಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ಸರಕಾರ ಕರಾವಳಿಗೆ ಪ್ರತ್ಯೇಕ ಮರಳು ನೀತಿಯನ್ನು ರೂಪಿಸಲು ಬದ್ಧವಾಗಿದ್ದು, ಶೀಘ್ರದಲ್ಲಿಯೇ ಕಾನೂನು ಸಚಿವರೊಡಗೂಡಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಕರ್ನಾಟಕದಲ್ಲಿ ದೇವರಾಜು ಅರಸು ಅವರ ಬಳಿಕ ಹಿಂದುಳಿದವರ ಪರ ಕಾರ್ಯಕ್ರಮಗಳನ್ನು ರೂಪಿಸಿದ ಏಕೈಕ ಮುಖ್ಯಮಂತ್ರಿಯಿದ್ದರೆ ಅದು ಸಿದ್ಧರಾಮಯ್ಯ ಮಾತ್ರ. ಕಳೆದ ಮೂರು ವರ್ಷಗಳಲ್ಲಿ ಅವರು ಜಾರಿಗೆ ತಂದ ಹತ್ತಾರು ಜನಪರ ಯೋಜನೆಗಳು ಬಡವರ ಬದುಕಿಗೆ ಆಶಾಕಿರಣವಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ ಮಾತನಾಡಿ ಪ್ರಥಮ ಭಾರಿಗೆ ಶಾಸಕರಾಗಿ ಮಂತ್ರಿ ಪದವಿ ಅಲಂಕರಿಸಿರುವ ಪ್ರಮೋದ್ ಮಧ್ವರಾಜ್ ಅವರಲ್ಲಿ ರಾಜಕೀಯ ಮುತ್ಸದ್ದಿತನವಿದೆ. ಅವರ ಕಾಳಜಿ, ದೂರದರ್ಶಿತ್ವ ಉಜ್ವಲ ರಾಜಕೀಯ ಭವಿಷ್ಯವನ್ನು ಸೂಚಿಸುತ್ತದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ಹಿರಿಯಣ್ಣ, ಬ್ರಹ್ಮಾವರ ಕ್ಷೇತ್ರದ ಮಾಜಿ ಶಾಸಕ ಪಿ. ಬಸವರಾಜ್, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಾಕೋಬ್ ಡಿಸೋಜಾ, ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ವಿಕಾಸ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ಕೆಡಿಪಿ ಸದಸ್ಯ ದೇವಾನಂದ ಶೆಟ್ಟಿ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕೋಣೆ ನಾರಾಯಣ ಆಚಾರ್ಯ ನಿರ್ವಹಿಸಿ, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರುಗಾರ್ ವಂದಿಸಿದರು.

Exit mobile version