Kundapra.com ಕುಂದಾಪ್ರ ಡಾಟ್ ಕಾಂ

ಕೆಎಸ್‌ಆರ್‌ಟಿಸಿ ಅಧ್ಯಕ್ಷರಾಗಿ ಶಾಸಕ ಕೆ. ಗೋಪಾಲ ಪೂಜಾರಿ ನೇಮಕ

ಕುಂದಾಪ್ರಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಅಧ್ಯಕ್ಷ ರಾಗಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಬಂಗಾರಪ್ಪ ನೇತೃತ್ವದ ಕರ್ನಾಟಕ ಕ್ರಾಂತಿರಂಗ ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಗೋಪಾಲ ಪೂಜಾರಿ ಅವರು ಬಳಿಕ ಕಾಂಗ್ರೆಸ್‌ ಪಕ್ಷ ಕ್ಕೆ ಸೇರ್ಪಡೆಗೊಂಡು ಬೈಂದೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದರು.

ಬಂಗಾರಪ್ಪನವರ ಕರ್ನಾಟಕ ಕ್ರಾಂತಿರಂಗದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಅವರು 1996ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಕ್ಕೆ ಸೇರ್ಪಡೆಗೊಂಡು ಜಯ ಗಳಿಸಿದ್ದರು. ನಂತರ 1998, 2003ರಲ್ಲಿ ವಿಜಯಿಯಾಗಿದ್ದರು. 2008ರಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಷ್ಮೀನಾರಾಯಣ ವಿರುದ್ಧ ಸೋತಿದ್ದ ಪೂಜಾರಿ 2014ರಲ್ಲಿ ಅವರ ವಿರುದ್ಧ 33 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರಾಗಿಯೂ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗೆ ಶ್ರಮಿಸಿದ್ದ ಅವರು ಸಿದ್ದರಾಮಯ್ಯ ಮಂತ್ರಿ ಮಂಡಲದಲ್ಲಿ ಮಂತ್ರಿ ಪದವಿ ಪಡೆಯುವರು ಎಂಬ ನಂಬಿಕೆ ಕಾರ್ಯಕರ್ತರಲ್ಲಿ, ಅಭಿಮಾನಿಗಳಲ್ಲಿ ಬಲವಾಗಿ ಬೀರೂರಿತ್ತು. ಆದರೆ ಸಚಿವ ಸ್ಥಾನ ಕೈತಪ್ಪಿ ಹೋಗಿತ್ತು. ವಿನಯಕುಮಾರ ಸೊರಕೆ ಮಂತ್ರಿಯಾದರು. ಪೂಜಾರಿಯವರಿಗೆ ಸಚಿವ ಸ್ಥಾನ ದಕ್ಕದಿರುವುದಕ್ಕೆ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಬೇಸರ ಮೂಡಿತ್ತು.

ಮಂತ್ರಿಮಂಡಲ ಪುನರಾಚನೆ ವೇಳೆ ಸಚಿವ ಸ್ಥಾನದ ಆಸೆ ಗರಿಗೆದರಿದಾಗ ಸಚಿವ ಸ್ಥಾನ ದಕ್ಕದೆ ಅದು ಉಡುಪಿ ಶಾಸಕ ಪ್ರಮೋದ್‌ ಮಧ್ವರಾಜ್‌ ಅವರ ಪಾಲಾಗಿತ್ತು. ಇದಕ್ಕೆ ಪೂಜಾರಿಯವರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿ ನಂತರ ಪಕ್ಷ ದ ಹಿತದೃಷ್ಟಿಯಿಂದ ಮೌನ ವಹಿಸಿದ್ದರು. ತದನಂತರ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಟ್ಟ ಒದಗಿಬಂದರೂ ಅದನ್ನು ನಯವಾಗಿ ತಿರಸ್ಕರಿಸಿದ್ದರು. ಬೈಂದೂರು ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಶ್ರಮಿಸುತ್ತಿರುವ ಶಾಸಕ ಎಂಬ ಹೆಗ್ಗಳಿಕೆ ಹೊತ್ತಿರುವ ಅವರನ್ನು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ರನ್ನಾಗಿ ನೇಮಕಗೊಳಿಸಲಾಗಿದೆ. ಜ.19ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಕುಂದಾಪ್ರಡಾಟ್ ಕಾಂ ಸುದ್ದಿ.

ಕೆಲವು ದಿನಗಳ ಹಿಂದಷ್ಟೇ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ನೇಮಸಿದ್ದರೂ ಶಾಸಕರು ಆ ಹುದ್ದೆಯಲ್ಲಿ ತಿರಸ್ಕರಿಸಿದ್ದರು.

Exit mobile version