Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ ಬಸ್ ಬೈಕ್ ಅಪಘಾತ: ಚಿತ್ರಕಲಾ ಶಿಕ್ಷಕ ಭೋಜು ಹಾಂಡ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹೆಮ್ಮಾಡಿ ಬೈಪಾಸ್ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಚಿತ್ರಕಲಾ ಶಿಕ್ಷಕ ಭೋಜು ಹಾಂಡ (58) ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೈಕಿನ  ಹಿಂಬದಿಯಲ್ಲಿ ಕುಳಿತಿದ್ದ ಹುಡುಗಿ ಅರ್ಪಿತಾ (11) ಸಣ್ಣಪುಟ್ಟ ಗಾಯಗಳಾಗಿದ್ದ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಿಗ್ಗೆ ಯೋಗ ತರಬೇತಿ ನಡೆಸುವುದಕ್ಕಾಗಿ ಹೆಮ್ಮಾಡಿಯಿಂದ ಕಟ್‌ಬೆಲ್ತೂರಿಗೆ ತೆರಳಲು ಹೆಮ್ಮಾಡಿ ಬೈಪಾಸ್ ದಾಟುತ್ತಿದ್ದ ಸಂದರ್ಭದಲ್ಲಿ ಮಂಗಳೂರು ಕಡೆಗೆ ಸಾಗುತ್ತಿದ್ದ ಬಸ್ ಬೈಕಿಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಭೋಜ ಹಾಂಡ ಅವರಿಗೆ ಗಂಭೀರ ಗಾಯಗಳಾಗಿದ್ದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಯೋಗ ತರಬೇತಿಗಾಗಿ ಅವರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ಅರ್ಪಿತಾಗೂ ಸಣ್ಣಪುಟ್ಟ ಗಾಯಗಳಾಗಿದ್ದು ಕುಂದಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಂದಾಪುರ ಅತ್ಯುತ್ತಮ ಚಿತ್ರಕಲಾವಿದರಾಗಿದ್ದ ಭೋಜು ಹಾಂಡ, ಮೃದು ಸ್ವಭಾವದ ಕಲಾವಿದ. ತನ್ನ ಚಿತ್ರಗಳ ಮೂಲಕವೇ ಗುರುತಿಸಿಕೊಂಡಿದ್ದರು. ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದರು.

Exit mobile version