Kundapra.com ಕುಂದಾಪ್ರ ಡಾಟ್ ಕಾಂ

ಹಾಲಾಡಿ ಶ್ರೀನಿವಾಸ ಶೆಟ್ಟರಿಗೆ ಕಾಂಗ್ರೆಸ್ ಸೇರುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಹ್ವಾನ!

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕಾಂಗ್ರೆಸ್ ಸೇರುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದ್ದಾರೆ. ಆದರೆ ಈವರೆಗೆ ’ಯಾವ ಪಕ್ಷ ಸೇರಬೇಕು ಎಂಬುದನ್ನು ನಿರ್ಧರಿಸಿಲ್ಲ. ಸೂಕ್ತ ಸಮಯದಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ.

ಕುಂದಾಪುರ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಕುರಿತು ಮಾಹಿತಿ ನೀಡಿದ್ದಾರೆ. ’ತಾನು ಬಿಜೆಪಿ ಬೆಂಬಲಿಸುತ್ತೇನೆ ಎಂದು ತಿಳಿದಿದ್ದರೂ ಸಿದ್ದರಾಮಯ್ಯ ಅವರು ಪಕ್ಷ ಸೇರುವಂತೆ ಆಹ್ವಾನ ನೀಡಿದ್ದಾರೆ’ ’ಬಿಜೆಪಿ ಅಥವಾ ಕಾಂಗ್ರೆಸ್ ಯಾವ ಪಕ್ಷ ಸೇರಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ. ಕುಂದಾಪುರದ ವಾಜಪೇಯಿ ಎಂದೇ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಸಿದ್ಧಿ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದರೂ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ಸೋಲಿನ ರುಚಿ ತೋರಿಸಿವಷ್ಟು ಜನ ಬೆಂಬಲ ಹಾಲಾಡಿ ಅವರಿಗಿದೆ. ಆದ್ದರಿಂದ, ಅವರನ್ನು ಪಕ್ಷಕ್ಕೆ ಸೆಳೆಯಲು ಎರಡೂ ಪಕ್ಷಗಳು ಪ್ರಯತ್ನ ನಡೆಸಿವೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

1999ರಲ್ಲಿ ರಾಜಕೀಯ ಜೀವನ ಆರಂಭಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಕಾಂಗ್ರೆಸ್ ಪ್ರಭಾವಿ ನಾಯಕ ಪ್ರತಾಪಚಂದ್ರ ಶೆಟ್ಟಿ, 2004ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಶೆಟ್ಟಿ, 2008ರಲ್ಲಿ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಸೋಲಿಸಿದ್ದರು. 2013ರ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ವರ್ಧಿಸಿದ್ದ ಅವರು ಕಾಂಗ್ರೆಸ್ ನಿಂದ ಮಲ್ಯಾಡಿ ಶಿವರಾಮ್ ಶೆಟ್ಟಿ ಹಾಗೂ ಬಿಜೆಪಿಯಿಂದ ಕಿಶೋರ್ ಕುಮಾರ್ ಅವರ ವಿರುದ್ಧ ಭಾರೀ ಅಂತರದಿಂದಲೇ ಗೆಲುವು ಪಡೆದಿದ್ದರು.

 

Exit mobile version