Kundapra.com ಕುಂದಾಪ್ರ ಡಾಟ್ ಕಾಂ

ಫಲನೀಡಿದ ಮತದಾರರ ಜಾಗೃತಿ ಅಭಿಯಾನ. ಕುಂದಾಪುರ ಬೈಂದೂರಿನಲ್ಲಿ ಮತದಾನದ ಪ್ರಮಾಣ ಹೆಚ್ಚಳ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆ ಸಮಿತಿ (ಸ್ವೀಪ್) ಮತದಾನದ ಪ್ರಮಾಣ ಹೆಚ್ಚಿಸಲು ಹಮ್ಮಿಕೊಂಡ ಕಾರ್ಯಕ್ರಮಗಳು ಫಲ ನೀಡಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತದಾನ ನಡೆದಿದೆ.

ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಅವರ ಅಧ್ಯಕ್ಷತೆಯ ಸ್ವೀಪ್ ಸಮಿತಿ ಜಿಲ್ಲೆಯಾದ್ಯಂತ ಮತದಾನ ಜಾಗೃತಿಗಾಗಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿತ್ತು.

ಕಾಲೇಜು ವಿದ್ಯಾರ್ಥಿಗಳನ್ನು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಮಾಡಿ ಯುವ ಮತದಾರರಿಗೆ ಮತದಾನದ ಮಹತ್ವದ ಸಂದೇಶ ತಲುಪಿಸಲಾಯಿತು. ಹೊಸ ಮತದಾರರ ಮೇಲೆ ಇದು ತುಂಬಾ ಪ್ರಭಾವ ಬೀರಿತು. ಸಾಂಪ್ರದಾಯಿಕ ಕಾರ್ಯಕ್ರಮಗಳ ಜೊತೆಗೆ ಕೆಲವು ವಿನೂತನ ಪ್ರಯತ್ನಗಳನ್ನು ಮಾಡಿದ್ದನ್ನು ಸ್ಮರಿಸಬಹುದು. ಅಂಗವಿಕಲರನ್ನು ಮತಗಟ್ಟೆಗೆ ಕರೆತರಲು ಯೋಜನೆ ರೂಪಿಸಲಾಯಿತು. ಅಂಗವಿಕಲರು ಹೆಚ್ಚಾಗಿರುವ 58 ಮತಗಟ್ಟೆಗಳನ್ನು ಗುರುತಿಸಿ ಅಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲಾಯಿತು. ಅಲ್ಲದೆ ಮತದಾನದ ಸಂದೇಶ ಎಲ್ಲ ಅಂಗವಿಕಲರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಯಿತು.

ಅಗತ್ಯಕ್ಕೆ ಅನುಗುಣವಾಗಿ ಮತಗಟ್ಟೆಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು. ಅಲ್ಲದೆ ಗುಡ್ಡಗಾಡು ಪ್ರದೇಶದಲ್ಲಿರುವ ಹಾಗೂ ತುಂಬಾ ದೂರ ನಡೆದುಕೊಂಡೇ ಬರಬೇಕಾದ ಪರಿಸ್ಥಿತಿ ಇದ್ದ ಕೆಲವು ಕಡೆ ವಾಹನ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು. ಎಲ್ಲ ಮತಗಟ್ಟೆಗಳಿಗೆ ಉತ್ತಮ ರೀತಿಯಲ್ಲಿ ಸೌಲಭ್ಯವನ್ನು ಸಹ ಕಲ್ಪಿಸಲಾಗಿತ್ತು.

Exit mobile version