Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ತಾ.ಪಂ ಅಧ್ಯಕ್ಷರಾಗಿ ಶ್ಯಾಮಲ ಕುಂದರ್, ಉಪಾಧ್ಯಕ್ಷರಾಗಿ ರಾಮಕಿಶನ್ ಹೆಗ್ಡೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ತಾಲೂಕು ಪಂಚಾಯಿತ್ ನೂತನ ಅಧ್ಯಕ್ಷರಾಗಿ ಶ್ಯಾಮಲ ಎಸ್ ಕುಂದರ್, ಉಪಾಧ್ಯಕ್ಷರಾಗಿ ರಾಮಕಿಶನ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಲೂಕು ಪಂಚಾಯತ್ನಲ್ಲಿ ಜ.11ರಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶ್ಯಾಮಲ ಕುಂದರ್ ಹಾಗೂ ಮಾಲಿಕೆ ಕೆ ನಾಮಪತ್ರ ಸಲ್ಲಿಸಿದ್ದು, ಕೊನೆಯಲ್ಲಿ ನಾಮಪತ್ರ ಮಾಲಿನಿ ಕೆ ನಾಮಪತ್ರ ವಾಪಸ್ಸು ಪಡೆದ ಹಿನ್ನೆಲೆಯಲ್ಲಿ ಶ್ಯಾಮಲ ಕುಂದರ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ರಾಮಕಿಶನ್ ಹೆಗ್ಡೆ ಏಕಮಾತ್ರ ನಾಮ ಪತ್ರ ಸಲ್ಲಿಸಿದ್ದರಿಂದ ಅವರು ಅವಿತರೋಧವಾಗಿ ಆಯ್ಕೆಯಾಗಿದರು.

ಈ ಹಿಂದೆ ಅಧ್ಯಕ್ಷರಾಗಿದ್ದ ಜಯಶ್ರೀ ಮೊಗವೀರ ಹಾಗೂ ಉಪಾಧ್ಯಕ್ಷರಾಗಿದ್ದ ಪ್ರವೀಣ ಶೆಟ್ಟಿ ಅವರ ರಾಜೀನಾಮೆಯಿಂದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಖಾಲಿಯಾಗಿತ್ತು. ಪ್ರಾರಂಭದ ಒಪ್ಪಂದದಂತೆ ಮೊದಲ ಎರಡುವರೆ ವರ್ಷ ಕುಂದಾಪುರ ಕ್ಷೇತ್ರಕ್ಕೂ ನಂತರದ ಎರಡುವರೆ ವರ್ಷ ಬೈಂದೂರು ಕ್ಷೇತ್ರಕ್ಕೆ ಎನ್ನುವಂತೆ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿತ್ತು. ಅಧ್ಯಕ್ಷರಾಗಿ ಆಯ್ಕೆಯಾಗಿರುವಗ ಶ್ಯಾಮಲ ಎಸ್ ಕುಂದರ್ ಅವರು ಕಿರಿಮಂಜೇಶ್ವರ ತಾ.ಪಂ.ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ರಾಮಕಿಶನ್ ಹೆಗ್ಡೆ ಅವರು ಕುಂದಾಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಸ್ರೂರು ತಾ.ಪಂ. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಸಹಾಯಕ ಆಯುಕ್ತರಾದ ಟಿ.ಭೂಬಾಲನ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿರಣ್ ಪಡ್ನೆಕರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸುರೇಶ ಶೆಟ್ಟಿ ಕಾಡೂರು, ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಮೀನುಗಾರರ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಜಿ.ಪಂ.ಸದಸ್ಯರಾದ ಬಾಬು ಶೆಟ್ಟಿ, ಲಕ್ಷ್ಮೀ ಮಂಜು ಬಿಲ್ಲವ, ಸುರೇಶ ಬಟ್ವಾಡಿ, ಶ್ರೀಲತಾ ಸುರೇಶ ಶೆಟ್ಟಿ, ಶೋಭಾ ಜಿ.ಪುತ್ರನ್, ಬೈಂದೂರು ಕ್ಷೇತ್ರ ಬಿಜೆಪಿ ಕಾರ್ಯದರ್ಶಿ ದೀಪಕ್ ಕುಮಾರ್ ಶೆಟ್ಟಿ, ಕುಂದಾಪುರ ಕ್ಷೇತ್ರ ಬಿಜೆಪಿ ಕಾರ್ಯದರ್ಶಿ ಭಾಸ್ಕರ ಬಿಲ್ಲವ, ಶಂಕರ ಅಂಕದಕಟ್ಟೆ, ಮೀನುಗಾರರ ಪ್ರಕೋಷ್ಠದ ಅಧ್ಯಕ್ಷ ಸದಾನಂದ ಬಳ್ಕೂರು ಮೊದಲಾದವರು ಉಪಸ್ಥಿತರಿದ್ದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷೆ ಶ್ಯಾಮಲ ಕುಂದರ್ ಅವರು, ಎಲ್ಲರ ಸದಸ್ಯರ ಸಹಕಾರದೊಂದಿಗೆ, ಪ್ರಾಮಾಣಿಕವಾಗಿ ನನ್ನ ಜವಾಬ್ದಾರಿ ನಿರ್ವಹಿಸುತ್ತೇನೆ. ಎಲ್ಲಾ ಕ್ಷೇತ್ರಕ್ಕೂ ಸಮಾನವಾಗಿ ಅನುದಾನ ಹಂಚಿಕೆ ಮಾಡುವುದರೊಂದಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನಿಸುತ್ತೇನೆ. ಅಧಿಕಾರಿಗಳ ವಿಶ್ವಾಸ ಗಳಿಸಿಕೊಂಡು ತಾಲೂಕಿನ ಅಭಿವೃದ್ದಿಯಲ್ಲಿ ತೊಡಿಸಿಕೊಳ್ಳುವಲ್ಲಿ ಶ್ರಮಿಸುತ್ತೇನೆ ಎಂದರು.

ಉಪಾಧ್ಯಕ್ಷ ರಾಮಕಿಶನ್ ಹೆಗ್ಡೆ ಮಾತನಾಡಿ, ಹಿರಿಯರ ಮಾರ್ಗದರ್ಶನ ಪಡೆದುಕೊಂಡು ಉಪಾಧ್ಯಕ್ಷನಾಗಿ ನನ್ನ ಜವಾಬ್ದಾರಿ ನಿರ್ವಹಿಸುತ್ತೇನೆ. ತಾಲೂಕಿನಲ್ಲಿರುವ ಬೇಡಿಕೆಗಳು, ಅವಶ್ಯಕತೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸುತ್ತೇವೆ. ಇನ್ನಿರುವ ಎರಡುವರೆ ವರ್ಷದ ಅವಧಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತೇವೆ ಎಂದರು.

 

Exit mobile version