Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲೆಯಲ್ಲಿ 2,67450 ಮಕ್ಕಳಿಗೆ ಜಂತುಹುಳು ಮಾತ್ರೆ ವಿತರಣೆ: ಡಿಸಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಸೆ.20: ಜಿಲ್ಲೆಯಲ್ಲಿ ಸೆಪ್ಟಂಬರ್ ೨೫ ರಂದು ನಡೆಯುವ ಜಂತುಹುಳು ನಿವಾರಣಾ ದಿನದಂದು 1 ರಿಂದ 19 ವರ್ಷದೊಳಗಿನ 2,67450 ಮಕ್ಕಳಿಗೆ ಉಚಿತವಾಗಿ ಜಂತುಹುಳು ನಿವಾರಣಾ ಅಲ್ಬೇಂಡಾಝೋಲ್ ಮಾತ್ರೆ ವಿತರಿಸುವ ಗುರಿ ಹೊಂದಿದ್ದು, ಸಂಬಂದಪಟ್ಟ ಎಲ್ಲಾ ಇಲಾಖೆಗಳು 100% ಗುರಿ ಸಾಧನೆಗೆ ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ೬೩೯೧೦ ಅಂಗನವಾಡಿ ಮಕ್ಕಳು, ೧ ರಿಂದ ೧೦ ನೇ ತರಗತಿವರೆಗಿನ ೧೫೯೫೨೧ , ಪಿಯುಸಿಯ ೨೯೦೪೦, ಶಾಲೆಯಿಂಧ ಹೊರಗುಳಿದಿರುವ ೧೮೨೯ , ಡಿಪ್ಲಮೋದ ೨೨೧೦, ಐಟಿಐ ಕಾಲೇಜಿನ ೧೮೭೦, ನರ್ಸಿಂಗ್ ಕಾಲೇಜಿನ ೧೧೩೫ ಹಾಗೂ ೭೭೪೫ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಗುರಿ ಹೊಂದಲಾಗಿದೆ ಎಂದು ಡಿಸಿ ಹೇಳಿದರು.

ಜಂತುಹುಳು ಸಮಸ್ಯೆಯಿಂದ ಮಕ್ಕಳಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ರಕ್ತಹೀನತೆ ಅಪೌಷ್ಠಿಕತೆ, ಓದಿನಲ್ಲಿ ಏಕಾಗ್ರತೆ ಕಡಿಮೆ, ಅನಾರೋಗ್ಯದ ಸಮಸ್ಯೆಗಳು ಬರಲಿದ್ದು, ಇದರಿಂದ ಮಕ್ಕಳ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಅಲ್ಲದೇ ಅನಾರೋಗ್ಯದ ಕಾರಣ ಶಾಲೆಗೆ ಗೈರು ಹಾಜರಾಗುವುದರಿಂದ ವಿಧ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ. ಆದ್ದರಿಂಧ ಜಿಲ್ಲೆಯಲ್ಲಿನ ಎಲ್ಲಾ ಸರಕಾರಿ,ಖಾಸಗಿ, ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಲ್ಲಿ ಜಂತುಹುಳು ಮಾತ್ರೆ ನೀಡಲು ಸಿದ್ದತೆ ಮಾಡಿದ್ದು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸಹ ಈ ಕುರಿತು ತರಬೇತಿ ನೀಡಲಾಗಿದೆ, ಎಲ್ಲಾ ಶಾಲೆಗಳ ಶಿಕ್ಷಕರಿಗೆ ಸಹ ಅಗತ್ಯ ತರಬೇತಿಯನ್ನು ಆರೋಗ್ಯ ಇಲಾಖೆಯ ಮೂಲಕ ನೀಡಲಾಗುತ್ತಿದ್ದು, ಮಾತ್ರೆಗಳನ್ನು ಸರಬರಾಜು ಮಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಹಾಗೂ ಸುರಕ್ಷಿತ ಕೈ ತೊಳೆಯುವ ವಿಧಾನದ ಬಗ್ಗೆ ಸಹ ಪ್ರಾತ್ಯಕ್ಷಿಕೆ ನೀಡಲಾಗುವುದು ಎಂದು ಡಿಸಿ ಹೇಳಿದರು.

ಜಂತುಹುಳು ನಿವಾರಣಾ ಮಾತ್ರೆಗಳು ಯಾವುದೇ ಅಡ್ಡ ಪರಿಣಾಮ ಬೀರದೆ , ಸಂಪೂರ್ಣ ಸುರಕ್ಷತೆಯಿಂದ ಕೂಡಿದ್ದು, ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ತೆಗೆದುಕೊಳ್ಳು ಸೂಚಿಸುವಂತೆ ತಿಳಿಸಿದ ಡಿಸಿ, ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಜಂತುಹುಳು ನಿವಾರಣಾ ಅಲ್ಬೇಂಡಾಝೋಲ್ ಮಾತ್ರೆ ಲಭ್ಯವಿದ್ದು , ಜಿಲ್ಲೆಯ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ತಿಳಿಸಿದರು.

ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ, ಯಾವುದೇ ಜಂತುಹುಳು ನಿವಾರಣಾ ಮಾತ್ರೆಯಿಂದ ಯಾರೂ ವಂಚಿಂತರಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಡಿಸಿ ಜಗದೀಶ್ ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶೋಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ. ರಾಮ , ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Exit mobile version