Kundapra.com ಕುಂದಾಪ್ರ ಡಾಟ್ ಕಾಂ

ಮೀನುಗಾರರ ಸಾಲಮನ್ನ ಗೊಂದಲ ಬೇಡ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೀನುಗಾರರ ಸಾಲ ಮನ್ನಾದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಕೆಲವೇ ದಿನಗಳಲ್ಲಿ ಉಡುಪಿ ಜಿಲ್ಲೆಯ 20,197 ಮೀನುಗಾರರ 55 ಕೋಟಿ ರೂ ಸಾಲ ಸಂಪೂರ್ಣ ಮನ್ನಾ ಆಗಲಿದ್ದು, ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಅವರು ಶನಿವಾರ ವಂಡ್ಸೆ ಪ್ರೌಢಶಾಲಾ ವಠಾರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 387 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ವೀನುಗಾರರ ಸಾಲಮನ್ನ ವಿಳಂಬವಾಗಿರುವ ಬಗ್ಗೆ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಮಹಿಳಾ ಸಬಲೀಕರಣದ ಉದ್ಧೇಶದಿಂದ, ಸ್ತ್ರೀಶಕ್ತಿ ಸಂಘಗಳನ್ನು ಬಲಗೊಳಿಸಲು ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗುವುದು ಎಂದು

ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೆತ್ರವನ್ನಾಗಿ ಅಭಿವೃದ್ದಿಪಡಿಸುವ ಉದ್ದೇಶದಿಂದ ನಡೆಯುತ್ತಿರುವ 387 ಕೋಟ ರೂ ಮೊತ್ತದ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ಅನುಷ್ಠಾನಗೊಳಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು, ತಮ್ಮ ಸರ್ಕಾರದ ಅವಧಿಯಲ್ಲಿ ಕಳಪೆ ಕಾಮಗಾರಿಗಳನ್ನು ನಿರ್ಮಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದರು.

ಬೈಂದೂರು ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳ ಅಭಿವೃದ್ದಿಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ವಿವರಿಸಿ, ಕ್ಷೇತ್ರದ ಸರ್ವಾಂಗೀಣ ಅಭಿವೃಧ್ದಿಗೆ ತಾನು ಬದ್ದನಾಗಿದ್ದು, ಕ್ಷೇತ್ರದ ಜನತೆಗೆ ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ಗಳನ್ನು ವಿತರಿಸಲಾಗುತ್ತಿದ್ದು , ಮೀನುಗಾರಿಕಾ ರಸ್ತೆಗಳ ಅಭಿವೃದ್ದಿ, ಶಾಲೆಗಳ ದುರಸ್ತಿ ಮತ್ತು ಕೊಠಡಿಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದು ಹೇಳಿದರು.

ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಬೈಂದೂರು ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುವುದು ನನ್ನ ಕನಸಾಗಿದ್ದು, ಆ ದಿಸೆಯಲ್ಲಿ ನಿರಂತರವಾಗಿ ಶ್ರಮಿಸಲಾಗಿತ್ತಿದೆ. ಹಂತ ಹಂತವಾಗಿ ಮುಖ್ಯಮಂತ್ರಿಗಳು ಹಾಗೂ ಸಂಸದರ ಸಹಕಾರದೊಂದಿಗೆ ಬೈಂದೂರನ್ನು ಮಾದರಿ ಕ್ಷೇತ್ರವಾಗಿ ರೂಪಿಸಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ಟಿ. ಬಾಬು ಶೆಟ್ಟಿ, ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ವಾಗತಿಸಿದರು.

Exit mobile version