Kundapra.com ಕುಂದಾಪ್ರ ಡಾಟ್ ಕಾಂ

ಅನರ್ಹ ಪಡಿತರ ಚೀಟಿ ಹಿಂತಿರುಗಿಸಲು ಏಪ್ರಿಲ್ ಅಂತ್ಯದವರೆಗೆ ಅವಕಾಶ: ಜಿಲ್ಲಾಧಿಕಾರಿ ಜಿ. ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರ ಗಮನಕ್ಕೆ ತರುವುದೇನೆಂದರೆ, ಸರ್ಕಾರಿ ನೌಕರರು/ವೇತನವನ್ನು ಗಣನೆಗೆ ತೆಗೆದುಕೊಳ್ಳದೇ , ಎಲ್ಲಾ ಖಾಸಗಿ ನೌಕರರು/ಸರ್ಕಾರಿ ಅನುದಾನಿತ ನೌಕರರು/ನಿಗಮಗಳು/ ಮಂಡಳಿಗಳು/ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ ಸೇವಾ ತೆರಿಗೆ/ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು, ಒಂದೇ ಕುಟುಂಬದಲ್ಲಿದ್ದರೂ/ ಒಟ್ಟಿಗೆ ವಾಸಿಸುತ್ತಿದ್ದರೂ ಪ್ರತ್ಯೇಕ ಪ್ರತ್ಯೇಕ ಪಡಿತರ ಚೀಟಿ ಹೊಂದಿರುವುದು, ಮೇಲ್ಕಂಡ ಮಾನದಂಡಗಳನ್ನು ಮೀರುವ ಈ ಮಾನದಂಡಗಳ ಅನ್ವಯ ಕುಟುಂಬಗಳು ಬಿಪಿಎಲ್ ವರ್ಗದ(ಎಎವೈ/ಪಿಎಚ್‌ಎಚ್) ಪಡಿತರ ಚೀಟಿಗಳನ್ನು ಹೊಂದಿರುವುದು ಕಾನೂನು ಬಾಹಿರವಾಗಿರುತ್ತದೆ.

ಹೀಗೆ ಅಕ್ರಮವಾಗಿ ಅನರ್ಹರು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ಸರ್ಕಾರಕ್ಕೆ ಹಿಂತಿರುಗಿಸಲು ಸರ್ಕಾರವು ಎಪ್ರಿಲ್ ಅಂತ್ಯದವರೆಗೆ ಮತ್ತೊಂದು ಅವಕಾಶವನ್ನು ನೀಡಿರುತ್ತದೆ.

ಅನರ್ಹರು ನಿಗದಿತ ದಿನಾಂಕದೊಳಗೆ ತಾವು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ತಾಲೂಕು ಕಛೇರಿಯಲ್ಲಿರುವ ಆಹಾರ ಶಿರಸ್ತೆದಾರ್/ಆಹಾರ ನಿರೀಕ್ಷಕರುಗಳನ್ನು ಸಂಪರ್ಕಿಸಿ ತಾವು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ಎಪಿಎಲ್ ವರ್ಗಕ್ಕಾಗಲಿ ಅಥವಾ ರದ್ದು ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ತಾವೇ ಸ್ವತ: ಪಡಿತರ ಚೀಟಿಗಳನ್ನು ಹಿಂತಿರುಗಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ.

ಅವಧಿ ಮುಗಿದ ನಂತರ ಇಲಾಖೆಯೇ ಕಾರ್ಯಾಚರಣೆ ನಡೆಸಿ ಅನರ್ಹರು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿದಾಗ ಅಂತಹ ಕುಟುಂಬಗಳು ತಾವು ಪಡಿತರ ಚೀಟಿಗಳನ್ನು ಹೊಂದಿದ ದಿನಾಂಕದಿಂದ ಪತ್ತೆ ಹಚ್ಚಿದ ದಿನಾಂಕದವರೆಗೆ ತಾವು ಪಡೆದ ಪಡಿತರ ಪದಾರ್ಥಗಳವಾರು ಪ್ರತಿ ಕೆ.ಜಿ.ಗೆ ಮುಕ್ತ ಮಾರುಕಟ್ಟೆಯ ಬೆಲೆಯ ಅನುಸಾರ ಹಣವನ್ನು ದಂಡವನ್ನಾಗಿ ವಸೂಲಿ ಮಾಡಲಾಗುವುದು. ಜೊತೆಗೆ ದಿ ಕರ್ನಾಟಕ ಪ್ರಿವೆನ್ಷನ್ ಆಫ್ ಅನ್ ಅಥರೈಜ್ಡ್ ಪೊಸಿಷನ್ ಆಫ್ ರೇಷನ್ ಕಾರ್ಡ್ ಆರ್ಡರ್ -1977 ರ ಅನ್ವಯ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಆದ್ದರಿಂದ ಅನರ್ಹರು ತಾವು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ತಕ್ಷಣವೇ ಸರ್ಕಾರಕ್ಕೆ ವಾಪಾಸು ನೀಡಿ ಕಾನೂನು ಕ್ರಮದಿಂದ ವಿಮುಕ್ತಿ ಹೊಂದುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version