Kundapra.com ಕುಂದಾಪ್ರ ಡಾಟ್ ಕಾಂ

ವನಮಹೋತ್ಸವ ಹಾಗೂ ಲಕ್ಷವೃಕ್ಷ ಅಭಿಯಾನ

ಬೈಂದೂರು: ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಪರಿಸರ ಸಮತೋಲನ ಕಾಯ್ದುಕೊಳ್ಳುತ್ತದೆ. ಪ್ರತಿಯೊಬ್ಬರೂ ಮನೆಗೊಂದು ಗಿಡವನ್ನು ನೆಟ್ಟು ನಮ್ಮ ಪರಿಸರವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗೋಪಾಲ ಪೂಜಾರಿ ಹೇಳಿದರು.

ಅವರು ಕುಂದಾಪುರ ಅರಣ್ಯ ವಿಭಾಗದ ಬೈಂದೂರು ವಲಯ ಹಾಗೂ ಕೊಲ್ಲೂರು ವನ್ಯಜೀವಿ ವಲಯದ ಸಂಯುಕ್ತಾಶ್ರಯದಲ್ಲಿ ಬೈಂದೂರು ಸಮೀಪದ ಮದ್ದೋಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ವನಮಹೋತ್ಸವ ಹಾಗೂ ಲಕ್ಷವೃಕ್ಷ ಅಭಿಯಾನವನ್ನು ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬೈಂದೂರು ವಲಯ ವ್ಯಾಪ್ತಿಯಲ್ಲಿ  ವನ್ಯಪ್ರಾಣಿಗಳಿಂದ ಆದ ಬೆಳೆ ಹಾನಿಗೆ ಹಾಗೂ ಮಾನವ ಹಾನಿಗೆ ಅರಣ್ಯ ಇಲಾಖೆ ವತಿಯಿಂದ ನೀಡಲಾದ ಪರಿಹಾರ ಮೊತ್ತದ ಚೆಕ್ ಹಾಗೂ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಲ್ಲಿ ಸಸಿಗಳನ್ನು ಪಡೆದುಕೊಂಡು ನೆಟ್ಟು ಬೆಳೆಸಿದ ರೈತರಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಲಾಯಿತು.

ಲಕ್ಷವೃಕ್ಷ ಕಾರ್ಯಕ್ರಮದ ಅಡಿಯಲ್ಲಿ ಸಾಂಕೇತಿಕವಾಗಿ ಸ್ಥಳೀಯ ಸಾರ್ವಜನಿಕರಿಗೆ ಗಿಡಗಳನ್ನು ವಿತರಿಸಲಾಯಿತು ಹಾಗೂ ಮಗುವಿಗೊಂದು ಮರ ಶಾಲೆಗೊಂದು ವನ ಕಾರ್ಯಕ್ರಮದಡಿಯಲ್ಲಿ ಶಾಲಾ ವಿಧ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು.

ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಸದಸ್ಯ ರಾಜು ಪೂಜಾರಿ, ಎಐಸಿಸಿ ಸದಸ್ಯ ಮಂಜಯ್ಯ ಶೆಟ್ಟಿ, ಯಡ್ತರೆ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಎಂ.ಡಿ. ಜೈಸನ್, ಮದ್ದೋಡಿ ಶಾಲಾ ಮುಖ್ಯೋಪಧ್ಯಾಯ ಹಾಗೂ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು ಉಪಸ್ಥಿತರಿದ್ದರು. ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್. ನೆಟಾಲ್ಕರ್, ಕೊಲ್ಲೂರು ವನ್ಯಜೀವಿ ವಲಯ ಅರಣ್ಯಾಧಿಕಾರಿ ಶಿವರಾಮ ಆಚಾರ್, ಬೈಂದೂರು ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಮೊದಲಾದವರು ಹಾಜರಿದ್ದರು.

Exit mobile version