Site icon Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನ ಐಇಸಿ/ಎಸ್‌ಬಿಸಿಸಿಯ ಕಾರ್ಯಕ್ರಮದಡಿ ನೆಹರು ಯುವ ಕೇಂದ್ರ ಹಾಗೂ ಯುವಸಂಘಗಳ ಪ್ರತಿನಿಧಿಗಳಿಗೆ ಉಡುಪಿ ತಾಲೂಕು ಮಟ್ಟದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರವು ಪೇತ್ರಿ ಚೇರ್ಕಾಡಿಯ ಸಮೃದ್ಧಿ ಮಹಿಳಾ ಮಂಡಳಿಯಲ್ಲಿ ನಡೆಯಿತು.

ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ, ವಿಲ್ಫೆಡ್ ಡಿ’ಸೋಜ, ಕಾರ್ಯಕ್ರಮ ಉದ್ಘಾಟಿಸಿ, ಸರಕಾರದ ವತಿಯಿಂದ ಸಿಗುವ ಸವಲತ್ತುಗಳ ಉಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಚೇರ್ಕಾಡಿ ಸಮೃದ್ಧಿ ಮಹಿಳಾ ಮಂಡಳಿಯ ಅಧ್ಯಕ್ಷ ಪ್ರಸನ್ನ ಪ್ರಸಾದ್ ಭಟ್, ಉತ್ತಮ ಆಹಾರ ಪದ್ಧತಿಯನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಆರೋಗ್ಯವನ್ನು ಪಡೆಯಬಹುದು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಬಾಯಿ, ತಾಯಿ ಮಕ್ಕಳ ಆರೋಗ್ಯದ ಬಗ್ಗೆ ಹಾಗೂ ರಾಷ್ಟ್ರೀಯ ಕಾರ್ಯಕ್ರಮ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗಾರ್, ಸಾಂಕ್ರಮಿಕ ಹಾಗೂ ಅಸಾಂಕ್ರಮಿಕ ರೋಗಗಳ ಬಗ್ಗೆ ಹಾಗೂ ಪ್ರಸ್ತುತ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ -19 ಕುರಿತು ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರು, ಸಮೃದ್ಧಿ ಮಹಿಳಾ ಮಂಡಳಿಯ ಸದಸ್ಯೆ ವನಿತಾ ಶೆಟ್ಟಿ ಸ್ವಾಗತಿಸಿದರು, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಂಜಿತ್ ವಂದಿಸಿದರು.

Exit mobile version