Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲೆಯಲ್ಲಿ ಜಲಜೀವನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ: ದಿನಕರ ಬಾಬು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಲ ಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಕುರಿತಂತೆ ಸ್ಥಳೀಯ ಜನಪ್ರತಿನಿಧಿಗಳಿಗೆ ಹಾಗೂ ಗ್ರಾಮದ ಜನತೆಯೊಂದಿಗೆ ಚರ್ಚಿಸಿ ಕಾಮಗಾರಿಗಳನ್ನು ಕೈಗೊಳ್ಳಿ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮಗಳಲ್ಲಿನ ಸ್ಥಳೀಯ ಜಲ ಮೂಲಗಳನ್ನು ಗುರುತಿಸಲು ಗ್ರಾಮಸ್ಥರ ಮತ್ತು ಜನಪ್ರತಿನಿಧಿಗಳ ನೆರವು ಅಗತ್ಯವಿದ್ದು, ಯಾವ ಕಾಮಗಾರಿಗಳು ತುರ್ತು ಅತ್ಯಗತ್ಯವಾಗಿವೆ ಎಂಬುದನ್ನು ತಿಳಿದು ಅಂತಹ ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ಸೂಚಿಸಿದ ಅಧ್ಯಕ್ಷ ದಿನಕರ ಬಾಬು, ಕಾಮಗಾರಿ ಆರಂಭಕ್ಕೆ ಮುನ್ನ ಸ್ಥಳೀಯವಾಗಿ ಸಭೆ ಕರೆದು ಅಭಿಪ್ರಾಯಗಳನ್ನು ಸಂಗ್ರಹಿಸಿ, ಯೋಜನೆಯನ್ನು ಅತ್ಯಂತ ಪಾರದರ್ಶಕವಾಗಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ವಿವಿಧ ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಮಾನದಂಡದಲ್ಲಿ ಆದಾಯಮಿತಿಯನ್ನು ವಸತಿ ನಿಗಮದಿಂದ ರೂ.32000 ಕ್ಕೆ ನಿಗಧಿಪಡಿಸಿದ್ದು, ಇದರಿಂದ ಬಿ.ಪಿಎಲ್ ಕಾರ್ಡ್ ಹೊಂದಲು ಆಧಾಯಮಿತಿ ರೂ.120000 ಇದೆ, ಇದರಿಂದ ರೂ. 32000 ಕ್ಕಿಂತ ಹೆಚ್ಚು
ಆದಾಯ ಹೊಂದಿರುವ ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಅಸಾಧ್ಯವಾಗಿದೆ ಅದ್ದರಿಂದ ರೂ. 32000 ಕ್ಕಿಂತ ಹೆಚ್ಚು ಆದಾಯವಿರುವ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಫಲಾನುಭವಿಗೆ , ವಸತಿ ಯೋಜನೆ ಪಡೆಯಲು ಆದಾಯಮಿತಿಯನ್ನು ಕಡಿಮೆ ಮಾಡುವ ಕುರಿತಂತೆ ರಾಜೀವ್ ಗಾಂಧೀ ವಸತಿ ನಿಗಮಕ್ಕೆ ಪತ್ರ ಬರೆಯುವಂತೆ ದಿನಕರ ಬಾಬು ತಿಳಿಸಿದರು.

ವಸತಿ ಯೋಜನೆಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿಯೇ ಎಲ್ಲಾ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳುವದುರಿಂದ , ದಾಖಲೆಗಳ ಕೊರೆತೆಯಿಂದ ಅನಗತ್ಯವಾಗಿ ಮನೆಗಳು ಬ್ಲಾಕ್ ಆಗುವುದು ತಪ್ಪಿ, ಸಕಾಲದಲ್ಲಿ ಫಲಾನುಭವಿಗೆ ಯೋಜನೆಯ ಪ್ರಯೋಜನ ದೊರೆಯಲಿದೆ , ಈ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೇಟ್ಟಿ ಹಾಗೂ ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ ತಿಳಿಸಿದರು.

ಕೋವಿಡ್ ಲಸಿಕೆಯನ್ನು ಜಿಲ್ಲೆಯಲ್ಲಿ ಪ್ರಾರಂಭಿಕ ಹಂಥದಲ್ಲಿ 22230 ಮಂದಿ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ನೀಡಲು ಗುರಿ ಹೊಂದಿದ್ದು, ಇದುವರೆಗೆ 60% ಸಾಧನೆ ಆಗಿದ್ದು, 5 ದಿನದಲ್ಲಿ ಸಂಪೂರ್ಣ ಗುರಿ ಸಾಧಿಸಲಾಗುವುದು ಎಂದು ಡಿ,ಹೆಚ್.ಓ. ಡಾ.ಸುದೀರ್ ಚಂದ್ರ ಸೂಡಾ ತಿಳಿಸಿದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಮನೆಗಳಿಂದ ಹಸಿ ಕಸ ಸಂಗ್ರಹಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದ್ದು, ವಾರದಲ್ಲಿ ಒಂದು ದಿನ ಒಣ ಕಸ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version