Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲೆಯಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ ಜಿ. ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಖಾಸಗಿ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಅವರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ , ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ಕನ್ನಡ ಕಾಯಕ ವರ್ಷವನ್ನು ಆಚರಿಸಲಾಗುತ್ತಿದ್ದು, ಈ ಕುರಿತು ಸರ್ಕಾರದಿಂದ ನೀಡಿರುವ ಅಧಿಕೃತ ಚಿಹ್ನೆಯನ್ನು ಎಲ್ಲಾ ಸರ್ಕಾರಿ ಇಲಾಖೆಗಳು ತಮ್ಮ ದೈನಂದಿನ ಪತ್ರ ವ್ಯವಹಾರಗಳಲ್ಲಿ ಕಡ್ಡಾಯವಾಗಿ ಬಳಸುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇಲಾಖೆಗಳು ತಮ್ಮ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟ್ವಿಟರ್, ನಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು, ಗಣಕಯಂತ್ರದಲ್ಲಿ ಸಂಪೂರ್ಣವಾಗಿ ಕನ್ನಡ ತಂತ್ರಾಶವನ್ನು ಅಳವಡಿಸಬೇಕು, ವಾಹನಗಳಲ್ಲಿ ಸಂಖ್ಯಾಫಲಕ, ಸರ್ಕಾರಿ ವಾಹನಗಳ ನಾಮಫಲಕಗಳಲ್ಲಿ , ಮೈಲುಗಳಲ್ಲಿ, ಹೆದ್ದಾರಿ ಫಲಕಗಳಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು , ಜಿಲ್ಲಾ ಪಂಚಾಯತ್ ನ ಕೆ.ಡಿ.ಪಿ ಸಭೆಗಳಲ್ಲಿ ಕನ್ನಡವನ್ನು ಒಂದು ಅಂಶವಾಗಿ ಚರ್ಚೆ ಮಾಡಬೇಕು ಎಂದರು.

ಜಿಲ್ಲೆಯ ಎಲ್ಲಾ ಅಂಗಡಿಗಳು ಕಂಪೆನಿ-ಕಚೇರಿ, ಹೋಟೆಲ್ಗಳು, ವಾಣಿಜ್ಯ ಸಂಕೀರ್ಣಗಳು, ಚಿತ್ರಮಂದಿರಗಳ ನಾಮಫಲಕಗಳಲ್ಲಿ ಶೇಕಡ 60 ರಷ್ಟು ಭಾಗ ಕಡ್ಡಾಯವಾಗಿ ಕನ್ನಡವನ್ನು ಹೊಂದಿರಬೇಕು. ಸರ್ಕಾರಿ ಇಲಾಖೆಗಳು ಆಂಗ್ಲಭಾಷೆಯಲ್ಲಿ ವಾರ್ಷಿಕದರಪಟ್ಟಿ, ಅಂದಾಜು ಪಟ್ಟಿ, ಟೆಂಡರ್ಗಳನ್ನು ಪತ್ರಿಕೆಗಳಿಗೆ ನೀಡುತ್ತಿರುವ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರಿ ಶಾಲೆಗಳಲ್ಲಿ ಶಾಲೆಗಳ ದುರಸ್ತಿ, ಗ್ರಂಥಾಲಯ, ಗುಣಮಟ್ಟದ ಶಿಕ್ಷಣ, ಮೂಲಸೌಲಭ್ಯ ಅಭಿವೃದ್ಧಿಗೊಳಿಸಬೇಕು ಎಂದ ಅವರು , ಜಿಲ್ಲೆಯ ಎಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳು ಒಳಗೊಂಡಂತೆ ಮತ್ತು ಕೇಂದ್ರೀಯ ವಿದ್ಯಾಲಯಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುತ್ತಿರುವ ಬಗ್ಗೆ ಪರಿಶೀಲಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರಸಭೆ ವ್ಯಾಪ್ತಿಯ ಗೋಡೆಗಳಲ್ಲಿ ಕನ್ನಡ ಕವಿಗಳ ಚಿತ್ರಗಳನ್ನು ಹಾಗೂ ಕನ್ನಡ ಅಕ್ಷರ ಮಾಲೆಗಳನ್ನು ರಚಿಸುವ ಮೂಲಕ ಕನ್ನಡ ಜಾಗೃತಿ ಮೂಡಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ ಡಿಸಿ, ಎಲ್ಲಾ ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿ ಮುದ್ರಿಸುವ ಕುರಿತಂತೆ ಲೀಡ್ ಬ್ಯಾಂಕ್ ಮೆನೇಜರ್ ಗೆ ಸೂಚನೆ ನೀಡಿದರು..

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇರ್ಶಕಕುಮಾರ ಬೇಕ್ಕೆರಿ ಮಾತನಾಡಿ ಕನ್ನಡವನ್ನು ಉಳಿಸಿ ಬೆಳೆಸುವ ದೃಷ್ಟಿಯಿಂದ ಆಡಳಿತದ ಎಲ್ಲಾ ವಲಯಗಳಲ್ಲಿ ಕನ್ನಡಪರ ಆದೇಶಗಳನ್ನು ಸಮರ್ಪಕವಾಗಿ ಕಾರ್ಯಗತಗೊಳಿಸುವುದು ಕನ್ನಡ ಪರ ಆದೇಶ ಮತ್ತು ಸುತ್ತೋಲೆಗಳ ಸಂಕಲನವು ಕನ್ನಡ ಅಭಿವೃದ್ಧಿ ಪ್ರಾಧಿಕಾರದಜಾಲತಾಣದಲ್ಲಿ ಲಭ್ಯವಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ರಂಗಭೂಮಿ (ರಿ) ನ ಪ್ರದೀಪ್ಚಂದ್ರ ಕುತ್ಪಾಡಿ, ಡಾ.ಕಾತ್ಯಾಯಿನಿ ಕುಂಜಿಬೆಟ್ಟು, ದೀಪಿಕಾ ಭಟ್, ಶಿಲ್ಪಾ ಜೋಶಿ ಆತ್ರಾಡಿ ಮತ್ತಿತರರು ಉಪಸ್ಥಿತರಿದ್ದರು.

Exit mobile version