Kundapra.com ಕುಂದಾಪ್ರ ಡಾಟ್ ಕಾಂ

ಸರಕಾರಿ ಜಮೀನು ಅತಿಕ್ರಮಣ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತು ಆಯಾ ತಾಲೂಕು ತಹಶೀಲ್ದಾರರುಗಳು ವೈಯಕ್ತಿಕ ಗಮನಹರಿಸಿ ತಮ್ಮ ತಾಲೂಕು ವ್ಯಾಪ್ತಿಯ ಎಲ್ಲಾ ಸ್ಥಳಗಳಿಗೆ ಭೇಟಿ ನೀಡಿ, ಸರಕಾರಿ ಜಮೀನುಗಳು ಅತಿಕ್ರಮಣವಾಗಿರುವ ಪ್ರಕರಣಗಳನ್ನು ಪತ್ತೆಹಚ್ಚಿ, ಅತಿಕ್ರಮಣವನ್ನು ತೆರವುಗೊಳಿಸಬೇಕು.

ಸದ್ರಿ ಜಮೀನನ್ನು ಸರಕಾರದ ವಶಕ್ಕೆ ಪಡೆದು ಸೂಚನಾ ಬೋರ್ಡ್ ಹಾಗೂ ತಡೆಬೇಲಿಯನ್ನು ಅಳವಡಿಸಿ, ಸರ್ಕಾರಿ ಜಮೀನನ್ನು ಅತಿಕ್ರಮಣ ಮಾಡಿದವರ ಮೇಲೆ ಕಾನೂನು ಕ್ರಮ ವಹಿಸಲು ಹಾಗೂ ಇದಕ್ಕೆ ಸಹಕಾರ ನೀಡಿ ಅತಿಕ್ರಮಣಕ್ಕೆ ಕಾರಣರಾದ ಕಂದಾಯ ಇಲಾಖಾ ನೌಕರರ ವಿರುದ್ಧ ಶಿಸ್ತು ಕ್ರಮ ವಹಿಸಲು ಪ್ರಸ್ತಾವನೆ ಸಲ್ಲಿಸಬೇಕು.

ಈ ಕುರಿತು ತಹಶೀಲ್ದಾರರುಗಳು ಪ್ರತಿದಿನ ಕೈಗೊಂಡ ಕ್ರಮದ ಬಗ್ಗೆ ವಿಸ್ತೃತ ವರದಿಯನ್ನು ಜೂನ್ 11 ರ ಸಂಜೆ 4 ಗಂಟೆಯ ಒಳಗೆ ಜಿಲ್ಲಾಧಿಕಾರಿ ಕಚೇರಿಗೆ, ಕುಂದಾಪುರ ಸಹಾಯಕ ಕಮೀಷನರ್ ಮೂಲಕ ಇ-ಮೇಲ್ನಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version