Kundapra.com ಕುಂದಾಪ್ರ ಡಾಟ್ ಕಾಂ

ಆಂಬ್ಯುಲೆನ್ಸ್‌ನಲ್ಲಿ ಬಂದು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು!

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಕೊಡಪಾಡಿ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಗಳು ಆಂಬ್ಯುಲೆನ್ಸ್ ಮೂಲಕ ಕಾಲೇಜಿಗೆ ಬಂದು ಪರೀಕ್ಷೆಗೆ ಹಾಜರಾದ ಘಟನೆ ನಡೆದಿದೆ. ಗಾಯಗೊಂಡವರನ್ನು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ವಿದ್ಯಾರ್ಥಿಗಳಾದ ಮಸಾಯಿದ್ ಮತ್ತು ವಾಜಿದ್ ಎಂದು ಗುರುತಿಸಲಾಗಿದೆ.

ಪ್ರಥಮ ವರ್ಷದ ಪದವಿ ಪರೀಕ್ಷೆ ಬರೆಯಲು ಶಿರೂರಿನಿಂದ ಬೈಕ್ ಮೂಲಕ ಬಂದಿದ್ದ ಮಸಾಯಿದ್ ಗಂಗೊಳ್ಳಿಗೆ ತೆರಳಿ ಅಲ್ಲಿಂದ ಸ್ನೇಹಿತ ವಾಜಿದ್ ಅವರನ್ನು ಕರೆದುಕೊಂಡು ತೆರಳುತ್ತಿದ್ದ ಸಂದರ್ಭ ಕೊಡಪಾಡಿ ಬಳಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಗೆ ಢಿಕ್ಕಿಯಾಗಿದೆ. ತೀವ್ರ ಗಾಯಗೊಂಡ ವಿದ್ಯಾರ್ಥಿಗಳನ್ನು ಗಂಗೊಳ್ಳಿಯ ಆಪತ್ಬಾಂಧವ ಆಂಬುಲೆನ್ಸ್ ನ ನಿರ್ವಾಹಕ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ವಿದ್ಯಾರ್ಥಿಗಳು ಆಂಬುಲೆನ್ಸ್ ಭಂಡಾರ್ಕಾರ್ಸ್ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದಾರೆ. ಕಾಲೇಜು ಆಡಳಿತ ಅವರಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಟ್ಟಿದೆ. ಅಪಘಾತದಲ್ಲಿ ತೀವ್ರ ಸ್ವರೂಪದ ಗಾಯಗಳಾಗಿರುವುದರಿಂದ ಪರೀಕ್ಷೆ ಬರೆದ ಬಳಿಕ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ.

Exit mobile version