Kundapra.com ಕುಂದಾಪ್ರ ಡಾಟ್ ಕಾಂ

ಸದ್ಭಾವನೆ ಉತ್ತೇಜಿಸುವ ಹಬ್ಬ – ಕೃಷ್ಣ ಜನ್ಮಾಷ್ಟಮಿ

ಚಾಂದ್ರಮಾನ ಪಂಚಾಗ ರೀತ್ಯಾ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ರೋಹಿಣಿ ನಕ್ಷತ್ರದಲ್ಲಿ ಶ್ರೀ ಕೃಷ್ಣನ ಜನ್ಮವಾಯಿತು. ಸೌರಮಾನ ಪಂಚಾಗ ರೀತ್ಯಾ ಸಿಂಹಮಾಸದಲ್ಲಿ ಶ್ರೀ ಕೃಷ್ಣನ ಜನ್ಮವಾಯಿತು. ಇದಲ್ಲದೇ ವರಾಹ ಪುರಾಣದ ಪ್ರಕಾರ ಶ್ರೀ ಕೃಷ್ಣ ಜನ್ಮವು ಆಷಾಢ ಮಾಸದ ಶುಕ್ಲಪಕ್ಷದ ದ್ವಾದಶಿಯಂದು ಆಯಿತು. ಆ ಸಂದರ್ಭದಲ್ಲಿ ಚಾಂದ್ರಮಾನದ ಶ್ರಾವಣ ಮಾಸವೇ ಸೌರಮಾನದ ಸಿಂಹಮಾಸವಾಗಿತ್ತು. ಸಾಮಾನ್ಯವಾಗಿ ಶ್ರಾವಣ ಮಾಸದಲ್ಲಿಯೇ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುವುದು ವಾಡಿಕೆ. ದೇಶದ ವಿವಿಧ ಪ್ರದೇಶಗಳಲ್ಲಿ ತಮ್ಮದೇ ವೈಖರಿಯಲ್ಲಿ ಶ್ರೀಕೃಷ್ಣನನ್ನು ಆರಾಧಿಸುವರು, ಪೂಜಿಸುವರು. ಇದೇ ದಿನವನ್ನು ಗೋಕುಲಾಷ್ಟಮಿಯೆಂದೂ, ಶ್ರೀ ಕೃಷ್ಣ ಜಯಂತಿಯೆಂದೂ, ಜನ್ಮಾಷ್ಟಮಿಯೆಂದೂ ಕರೆಯುವರು.

ಶ್ರೀಮನ್ನಾರಾಯಣನ ದಶಾವತಾರಗಳಲ್ಲಿ ಒಂಭತ್ತನೆಯ ಅವತಾರವೇ ಶ್ರೀ ಕೃಷ್ಣ. ಮನುಷ್ಯರಂತೆ ವ್ಯವಹರಿಸಿದರೂ, ಕಾಲಕ್ಕೆ ತಕ್ಕ ಹಾಗೆ ತನ್ನ ಅಪ್ರತಿಮ ಮತ್ತು ಅಮೋಘವಾದ ಜ್ಞಾನ, ಬಲ, ಶಕ್ತಿ, ತೇಜಸ್ಸುಗಳನ್ನೂ ಮತ್ತು ಆತ್ಮ ಗುಣ ಸಂಪತ್ತನ್ನೂ ಪ್ರದರ್ಶಿಸಿದ ಪರಮ ಪುರುಷ.

ವರಾಹ ಪುರಾಣದಲ್ಲಿ ಉಲ್ಲೇಖಿಸಿದಂತೆ, ಅಂದು ರಾತ್ರಿ ಸ್ತ್ರೀಯು ಪತಿಯೊಡನೆ ಉಪವಾಸವಿದ್ದು ವ್ರತವನ್ನಾಚರಿಸಿದರೆ ಅವಳ ಹೃದಯದಲ್ಲಿ ಭಗವಂತನು ಕಾಣಿಸಿಕೊಳ್ಳುವನು. ಅಂತಹವರಿಗೆ ಒಳ್ಳೆಯ ಸಂತಾನ ಮತ್ತು ಸಂಪತ್ತು ದೊರೆಯುತ್ತದೆ ಎಂದು ಹೇಳಿದೆ. ‘ತಿಥಿತತ್ವ’ ಎಂಬ ಗ್ರಂಥದಲ್ಲಿ ಜಯಂತಿಯ ಆಚರಣೆಯ ಬಗ್ಗೆ ಹೀಗೆ ಹೇಳಿದೆ – ‘ಜಯಂತಿ ಯೋಗವು ಒಂದು ದಿವಸ ಮಾತ್ರವಿದ್ದರೆ ಅಂದೇ ಉಪವಾಸ ಪೂಜೆಯನ್ನು ಮಾಡಬೇಕು. ಆ ಯೋಗವು ಎರಡು ದಿವಸ ಇದ್ದರೆ, ಎರಡನೆಯ ದಿನದಲ್ಲಿ ವ್ರತದ ಆಚರಣೆ ಮಾಡಬೇಕು.

ಜನ್ಮಾಷ್ಟಮಿ ಹಬ್ಬ ಒಂದು ಆಚರಣೆಯಾದರೆ ಮನುಷ್ಯನ ವ್ಯಕ್ತಿತ್ವದ ದೃಷ್ಟಿಯಿಂದ ನೋಡುವುದಾದರೆ ತುಂಬಾನೇ ಮಹತ್ವದ ಆಚರಣೆಯಾಗಿದೆ. ಪ್ರತಿಯೊಬ್ಬ ಮನುಷ್ಯನೊಳಗಿನ ಸದ್ಭಾವನೆಯನ್ನು ಉತ್ತೇಜಿಸುವ ಹಬ್ಬ ಇದಾಗಿದೆ. ಈ ನಂಬಿಕೆಯು ಅದರ ಬೇರುಗಳನ್ನು ಭಗವದ್ಗೀತೆಯಲ್ಲಿ ಕಂಡುಕೊಳ್ಳಬಹುದು. ಧರ್ಮ-ನೀತಿಯ ಮಾರ್ಗದಲ್ಲಿ ನಡೆಯುವಂತೆ ಈ ಆಚರಣೆ ಪ್ರೇರೇಪಿಸಿರುತ್ತದೆ. ಆಗಲೇ ಜೀವನದಲ್ಲಿ ಸದ್ಗತಿ ಹಾಗೂ ಯಶಸ್ಸು ಲಭಿಸುವುದು ಎನ್ನುವ ಜೀವನದ ಸಾರವನ್ನು ಈ ಹಬ್ಬ ತಿಳಿಸುತ್ತದೆ.

Exit mobile version