Kundapra.com ಕುಂದಾಪ್ರ ಡಾಟ್ ಕಾಂ

ಆತ್ಮವಿಶ್ವಾಸದಿಂದ ಮುನ್ನಡೆದಾಗಲೇ ಗುರಿ ತಲುಪಲು ಸಾಧ್ಯ: ದೇವರಾಯ ಶೇರುಗಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಕಠಿಣ ಪರಿಶ್ರಮ ಪಡಬೇಕು. ಆತ್ಮವಿಶ್ವಾಸದಿಂದ ಯಶಸ್ಸಿನ ಕಡೆಗೆ ಗಮನಹರಿಸಿ ಉತ್ತಮ ಸಾಧನೆ ಮಾಡುವ ಗುರಿ ಹೊಂದಬೇಕು ಎಂದು ಮುಂಬೈನ ಉದ್ಯಮಿ ಹೊಸ್ಮನೆ ದೇವರಾಯ ಶೇರುಗಾರ್ ಹೇಳಿದರು.

ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ವತಿಯಿಂದ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ ನಮಗೆ ಶಿಕ್ಷಣ ನೀಡಿದ ವಿದ್ಯಾಸಂಸ್ಥೆ ಹಾಗೂ ಗುರುಗಳಿಗೆ ಗೌರವ ನೀಡುತ್ತಾ, ವಿದ್ಯಾಸಂಸ್ಥೆಯ ಪ್ರಗತಿಗೆ ಸಹಕರಿಸಬೇಕು. ವಿದ್ಯಾರ್ಥಿವೇತನ ಪಡೆದುಕೊಂಡ ವಿದ್ಯಾರ್ಥಿಗಳು ಸಂಸ್ಥೆಗೆ ಚಿರಋಣಿಗಳಾಗಿ ಮುಂದಿನ ದಿನಗಳಲ್ಲಿ ಶಾಲೆಯ ಮೇಲಿನ ಋಣವನ್ನು ತೀರಿಸುವ ಪ್ರಯತ್ನ ನಡೆಸಬೇಕು ಎಂದರು.

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಆಯ್ದ ಅರ್ಹ 56 ವಿದ್ಯಾರ್ಥಿಗಳಿಗೆ ಸುಮಾರು 3.81 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಅವರು ವಿತರಿಸಿದರು.

2021ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಪ್ರಸನ್ನಾ ಪೈ ಅವರಿಗೆ ಬಾಂಡ್ಯ ರಾಮರಾಯ ಪೈ ಸ್ಮರಣಾರ್ಥ ಬಾಂಡ್ಯ ಪಾಂಡುರಂಗ ಪೈ ಮತ್ತು ಸಹೋದರರು ಕೊಡಮಾಡಿದ ಚಿನ್ನದ ಪದಕ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಉದ್ಯಮಿ ಹೊಸ್ಮನೆ ದೇವರಾಯ ಶೇರುಗಾರ್ ಅವರನ್ನು ಜಿಎಸ್‌ವಿಎಸ್ ಅಸೋಸಿಯೇಶನ್ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಉಪಸ್ಥಿತರಿದ್ದರು.

ಕಾಲೇಜಿನ ಸಂಚಾಲಕ ಎನ್. ಸದಾಶಿವ ನಾಯಕ್ ಸ್ವಾಗತಿಸಿದರು. ಜಿಎಸ್‌ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಥೋಮಸ್ ಪಿ.ಎ. ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ವಿದ್ಯಾರ್ಥಿನಿ ಅಮೀಕ್ಷಾ ಡಿ. ನಾಯ್ಕ್ ಅತಿಥಿಯನ್ನು ಪರಿಚಯಿಸಿದರು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಆಡಳಿತ ಮಂಡಳಿ ಸದಸ್ಯ ಕೆ. ರಾಮನಾಥ ನಾಯಕ್ ವಂದಿಸಿದರು.

Exit mobile version