Kundapra.com ಕುಂದಾಪ್ರ ಡಾಟ್ ಕಾಂ

ಸರ್ಕಾರಿ ಕಾರ್ಯಕ್ರಮದ ಹೆಸರಿನಲ್ಲಿ ಆಡಳಿತ ಯಂತ್ರದ ದುರ್ಬಳಕೆ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ನ.7:
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸರಕಾರಿ ಕಾರ್ಯಕ್ರಮ ಆಯೋಜನೆಯ ಹೆಸರಿನಲ್ಲಿ ಆಡಳಿತ ಯಂತ್ರವನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಲಾಗುತ್ತಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಆರೋಪಿಸಿದ್ದಾರೆ.

ಅವರು ಸೋಮವಾರ ಕುಂದಾಪುರದಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಬೈಂದೂರು ಕ್ಷೇತ್ರ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಜನ ಸೇರಿಸುವ ಉದ್ದೇಶದಿಂದ ಶಾಲಾ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಬಿಇಓ ಮೂಲಕ ಸೂಚನೆ ನೀಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೂ ಜನರನ್ನು ಕರೆತರುವಂತೆ ಸೂಚಿಸಲಾಗಿದೆ. ಬಹುಪಾಲು ಸರಕಾರಿ ಬಸ್ಸುಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಸಂಚಾರಕ್ಕೂ ತೊಡಕುಂಟುಮಾಡಲಾಗಿದೆ. ಜನ ಸೇರಿಸುವುದಕ್ಕಾಗಿ ಇಂತಹ ಗಿಮಿಕ್ ಮಾಡುತ್ತಿರುವುದು ದುರದೃಷ್ಟಕರ ಎಂದು ಲೇವಡಿ ಮಾಡಿದರು.

ಎರಡೆರದು ಭಾರಿ ಗುದ್ದಲಿ ಪೂಜೆ:
ನಾನು ಶಾಸಕನಾಗಿದ್ದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು. ಸೌಡ ಶಂಕರನಾರಾಯಣ ಸೇತುವೆ, ಕಬ್ಬಿನಾಲೆ ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ನನ್ನ ಅವಧಿಯಲ್ಲಿಯೇ ಅನುಮೋದನೆ ದೊರೆತು ಗುದ್ದಲಿಪೂಜೆ ನೆರವೇರಿಸಲಾಗಿತ್ತು. ಚುನಾವಣೆಯ ಬಳಿಕ ನೂತನ ಶಾಸಕರು ಅದರ ಫಾಲೋ ಅಪ್ ಮಾಡದೇ ಕಾಮಗಾರಿ ವಿಳಂಬವಾಗಿತ್ತು. ಈಗ ಮತ್ತೆ ಅದೇ ಕಾಮಗಾರಿಗೆ ಶಂಕುಸ್ಥಾಪನೆ ಮಾಡುತ್ತಿರುವುದು ಹಾಸ್ಯಾಸ್ಪದ ಎಂದ ಅವರು, ಬೈಂದೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಎರಡನೇ ಭಾರಿ ಗುದ್ದಲಿ ಪೂಜೆ ಮಾಡಿ ನಾಲ್ಕೂವರೆ ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಇದು ಯಾರ ವೈಫಲ್ಯ ಎಂದು ಅವರು ಪ್ರಶ್ನಿಸಿದರು.

ಆಡಳಿತ ಯಂತ್ರದ ದುರ್ಬಳಕೆ:
ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ಜಿಲ್ಲಾಡಳಿತದಿಂದ ನಡೆಯುತ್ತಿದ್ದರೂ, ಹೊರಗಡೆ ಸಂಪೂರ್ಣವಾಗಿ ಬಿಜೆಪಿ ಪಕ್ಷದ ಕಾರ್ಯಕ್ರಮ ಎಂಬಂತೆ ಬಿಂಬಿಸಲಾಗುತ್ತಿದೆ. ನಾಲ್ಕೂವರೆ ವರ್ಷದಿಂದ ಹೇಳುತ್ತಾ ಬರಲಾಗಿದ್ದ ಕಾಮಗಾರಿಗಳನ್ನೇ ಸಿಎಂ ಉದ್ಘಾಟನೆ ಮಾಡುವ ಕಾರ್ಯಕ್ರಮದಲ್ಲಿಯೂ ಸೇರಿಸಲಾಗಿದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿರುವ ಜೊತೆಗೆ ವಿವಿಧ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ಸರಕಾರಿ ಕಾರ್ಯಕ್ರಮದ ಹೆಸರಿನಲ್ಲಿ ಪಕ್ಷದ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಪರೇಶ್ ಮೇಸ್ತನ ಕುಟುಂಬಿಕರನ್ನು ಬೈಂದೂರು ಕ್ಷೇತ್ರಕ್ಕೆ ಸಂಬಂಧವಿಲ್ಲದಿದ್ದರೂ ಕರೆತಂದು ರಾಜಕೀಯ ಮಾಡಿದವರು ಈಗ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಾರೆ. ಬೈಂದೂರು ಅಭಿವೃದ್ಧಿ ಹೆಸರಿನಲ್ಲಿಯೂ ಹಾಲಿ ಶಾಸಕರು ಇದೇ ಮಾರ್ಗ ಅನುಸರಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಕಾಂಗ್ರೆಸ್ ಮುಖಂಡ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಮೊದಲಾದವರು ಉಪಸ್ಥಿತರಿದ್ದರು.

Exit mobile version