Kundapra.com ಕುಂದಾಪ್ರ ಡಾಟ್ ಕಾಂ

ಕಾಂಗ್ರೆಸ್ ಪಕ್ಷ ಯು.ಬಿ. ಶೆಟ್ಟಿ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಲಿ – ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ಒಡನಾಡಿ ಯು. ಬಿ. ಶೆಟ್ಟಿ ಅವರ ಶ್ರಮ ವಿಶೇಷವಾದದ್ದು. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದ ಪಕ್ಷ ಸಂಘಟನೆ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯು.ಬಿ. ಶೆಟ್ಟಿ ಅವರಿಗೆ ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಮೂಲಕ ಆಗ್ರಹಿಸಿದ್ದಾರೆ.

ಹಲವಾರು ವರ್ಷಗಳಿಂದ ಯಾವುದೇ ಫಲಾಪೇಕ್ಷೆ ಇಲ್ಲದೆ ತೆರೆಮರೆಯಲ್ಲೇ ಪಕ್ಷ ಸಂಘಟನೆ ಮಾಡುತ್ತಿರುವ ಯು.ಬಿ ಶೆಟ್ಟಿ ಅವರು, ಸಾಮಾಜಿಕ ಕಾರ್ಯಗಳಲ್ಲಿಯೂ ಅವಿರತವಾಗಿ ತೊಡಗಿಸಿಕೊಂಡವರು. ತನ್ನ ದುಡಿಮೆಯ ಒಂದು ಭಾಗವನ್ನು ಶಿಕ್ಷಣ, ಆರೋಗ್ಯ, ವಸತಿ, ಧಾರ್ಮಿಕ ಇನ್ನಿತರ ಸಮಾಜಮುಖಿ ಕಾರ್ಯಗಳಿಗೆ ಯಾವುದೇ ಪ್ರಚಾರ ಬಯಸದೆ ನೀಡುತ್ತಿದ್ದಾರೆ.

ಪ್ರಸಕ್ತ ಉಡುಪಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡ ಯಾವುದೇ ವಿಧಾನ ಪರಿಷತ್ ಸದಸ್ಯರುಗಳು ಕಾಂಗ್ರೆಸ್ ಪಕ್ಷದಲ್ಲಿ ಇಲ್ಲದ ಕಾರಣ ಸರ್ಕಾರ ಮಟ್ಟದಲ್ಲಿ ಅತ್ಯಂತ ಪ್ರಭಾವಶಾಲಿಗಳಾಗಿರುವ ಯು.ಬಿ. ಶೆಟ್ಟರನ್ನು ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದರೆ ಜಿಲ್ಲೆಯಲ್ಲಿ ಅಭಿವೃದ್ಧಿಯ ಮಹಾಪೂರ ಹರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಯಾವುದೇ ಫಲಾಪೇಕ್ಷೆ ಇಲ್ಲದೇ ನಿಸ್ವಾರ್ಥ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯು.ಬಿ. ಶೆಟ್ಟಿ ಅವರನ್ನು ಪಕ್ಷ ಅತೀ ಶೀಘ್ರ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

Exit mobile version