Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಹಾನವರಾತ್ರಿ ರಥೋತ್ಸವಕ್ಕೆ ಸಾಕ್ಷಿಯಾದ ಭಕ್ತ ಸಮೂಹ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾ ನವರಾತ್ರಿ ಉತ್ಸವದ ಅಂಗವಾಗಿ ಮಂಗಳವಾರ ನಡೆದ ಶ್ರೀ ದೇವಿಯ ವೈಭವದ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.

ನವರಾತ್ರಿ ಒಂಬತ್ತು ದಿನಗಳ ಕಾಲ ವಿವಿಧ ಪೂಜೆ ಹಾಗೂ ಧಾರ್ಮಿಕ ಆಚರಣೆಗಳು ಸಾಂಗವಾಗಿ ನೆರವೇರಿದ್ದು, ಮಹಾನವಮಿಯ ಮಧ್ಯಾಹ್ನ ಬಲಿ ಸೇವೆ ಹಾಗೂ ಪ್ರದಕ್ಷಿಣಿ ನಡೆಸಿದ ಬಳಿಕ ಶ್ರೀ ದೇವಿಯ ಉತ್ಸವ ಮೂರ್ತಿಯನ್ನು ಅಲಂಕರಿಸಿದ ಮರದ ಪುಷ್ಪ ರಥದಲ್ಲಿ ಕುಳ್ಳಿರಿಸಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕ, ತಂತ್ರಿ ನಿತ್ಯಾನಂದ ಅಡಿಗ ಅವರು ರಥಾರೋಹಣಳಾದ ಶ್ರೀ ದೇವಿಗೆ ಪೂಜೆ ನೆರವೇರಿಸಿ, ಮಂಗಳಾರತಿ ಎತ್ತಿದ ಬಳಿಕ, ರಥ ಪೂಜೆಯ ನಡೆಸಲಾಯಿತು. ನಂತರ ಸೇರಿದ್ದ ಸಾವಿರಾರು ಜನರು ಶ್ರೀ ದೇವಿಯ ಜಯ ಘೋಷದೊಂದಿಗೆ ರಥವನ್ನು ಎಳೆದರು. ದೇವಳದ ಒಳ ಪ್ರಾಂಗಣದಲ್ಲಿ ಒಂದು ಸುತ್ತು ಬಂದ ಬಳಿಕ ರಥದ ಮೇಲಿನಿಂದ ಅರ್ಚಕರು ಎಸೆದ ನಾಣ್ಯವನ್ನು ಪಡೆಯಲು ಭಕ್ತರು ಮುಗಿಬಿದ್ದರು. ಉತ್ಸವ ಮೂರ್ತಿಯನ್ನು ರಥದಿಂದ ಕೆಳಕ್ಕೆ ತರುವ ಕ್ಷಣಗಳಿಗಾಗಿ ಕಾಯುತ್ತಿದ್ದ ಭಕ್ತ ವರ್ಗ, ಕ್ಷಣ ಮಾತ್ರದಲ್ಲಿ ರಥಕ್ಕೆ ಅಲಂಕರಿಸಿದ್ದ ಹೂಗಳನ್ನು ಕಿತ್ತು ಪ್ರಸಾದವಾಗಿ ಸ್ವೀಕರಿಸಿದರು.

ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ದೇವಸ್ಥಾನದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಸಮಿತಿ ಸದಸ್ಯರಾದ ಡಾ. ರಾಮಚಂದ್ರ ಅಡಿಗ, ಜಯಾನಂದ ಹೋಬಳಿದಾರ್, ಡಾ.ಅತುಲಕುಮಾರ ಶೆಟ್ಟಿ, ಗಣೇಶ್ ಕಿಣಿ ಬೆಳ್ವೆ, ಗೋಪಾಲಕೃಷ್ಣ ನಾಡ, ಸಂಧ್ಯಾ ರಮೇಶ್, ಕೆ.ಪಿ. ಶೇಖರ, ರತ್ನಾ ಕುಂದರ್, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಪ್ಪಲತಾ ಮೊದಲಾದವರು ಉಪಸ್ಥಿತರಿದ್ದರು.

Exit mobile version