Kundapra.com ಕುಂದಾಪ್ರ ಡಾಟ್ ಕಾಂ

ಜ.14ರಂದು ಕೋಡಿಯಲ್ಲಿ ‘ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್’ ಉದ್ಘಾಟನೆ, ಸಂಸ್ಥಾಪಕರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವವನ್ನು ಜನವರಿ 14ರ ಭಾನುವಾರದಂದು ಸಂಸ್ಥೆಯ ಆವರಣದಲ್ಲಿ ಜರುಗಲಿದೆ. ಈ ಸುಸಂದರ್ಭದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್’ ಉದ್ಘಾಟನೆ ಹಾಗೂ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಲಾಂಛನ ಅನಾವರಣಗೊಳ್ಳಲಿದೆ. ವಿಶ್ವಶಾಂತಿ ಸಂದೇಶ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ಹೇಳಿದರು.

ಅವರು ಕುಂದಾಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್, ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್, ಶಾಸಕ ಕಿರಣ್ ಕುಮಾರ್ ಕೊಡ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ಹೆಸರಾಂತ ಪರಿಸರವಾದಿಗಳಾದ ಪದ್ಮಶ್ರೀ ತುಳಸಿ ಗೌಡ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂಇಐಎಫ್ ಸಂಸ್ಥೆಯ ಅಧ್ಯಕ್ಷರಾದ ಮೂಸಬ್ಬ.ಪಿ. ಬ್ಯಾರಿ ಇವರು ಸನ್ಮಾನಿತಗೊಳ್ಳಲಿದ್ದಾರೆ ಎಂದರು.

1906ರಲ್ಲಿ ಶಿಕ್ಷಣದ ಮೊಳಕೆ ಎಂಬಂತೆ ಕೋಡಿಯಲ್ಲಿ ಸಣ್ಣ ಶಾಲೆಯೊಂದು ಹುಲ್ಲಿನ ಹೊದಿಕೆಯಿಂದ ಕೂಡಿದ ಚಪ್ಪರದಡಿಯಲ್ಲಿ ಅಕ್ಷರಪ್ರಪಂಚವನ್ನು ಪರಿಚಯಿಸಿತು. ಕೀರ್ತಿ ಶೇಷರಾದ ದಿವಂಗತ ಹಾಜಿ ಮಾಸ್ಟರ್ ಮಹಮೂದ್ ಅವರ ಅಧ್ಯಕ್ಷತೆಯಲ್ಲಿ ವಿವಿಧ ಅಂಗಸಂಸ್ಥೆಗಳು ಊರ ಪರವೂರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದಾರಿಯಾಯಿತು.

ಪ್ರಸ್ತುತ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ಅವರ ನೇತೃತ್ವದಲ್ಲಿ ಸಂಚಾಲಕರಾದ ಸಯ್ಯದ್ ಮೊಹಮ್ಮದ್ ಬ್ಯಾರಿ ಅವರ ಮಾರ್ಗದರ್ಶನದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಅತ್ಯುತ್ತಮ ಶೈಕ್ಷಣಿಕ ಸಾಧನೆಗಳ ಜೊತೆಗೆ ಪರಿಸರ ಮುಖಿ ಚಿಂತನೆಯೊಂದಿಗೆ ಪ್ರತಿ ತಿಂಗಳು ನಡೆಸುತ್ತಿರುವ ‘ಸ್ವಚ್ಛ ಕಡಲತೀರ-ಹಸಿರು ಕೋಡಿ’ ಅಭಿಯಾನವು 28 ಹಂತವನ್ನು ಯಶಸ್ವಿಯಾಗಿ ಪೂರೈಸಿದೆ.

ಪತ್ರಿಕಾಗೋಷ್ಠಿಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ್ ಉಜಿರೆ, ಡಿಇಡ್‌ ಕಾಲೇಜು ಪ್ರಾಂಶುಪಾಲರಾದ ಸಿದ್ದಪ್ಪ, ಉಪನ್ಯಾಸಕರಾದ ಹಯವದನ್ ಮೊದಲಾದವರು ಉಪಸ್ಥಿತರಿದ್ದರು.

Exit mobile version