ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜ.27: ಕುಂದಾಪುರದಲ್ಲಿ ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ವರದಿಗಾಗಿ ತೆರಳಿದ್ದ ಪತ್ರಕರ್ತರನ್ನು ಬಲವಂತವಾಗಿ ಹೊರಕಳುಹಿಸಿದ ಘಟನೆ ನಡೆದಿದ್ದು, ಇದನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ.
ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರುಗಳ ವಿಚಾರದಲ್ಲಿ ಮಾತನಾಡುತ್ತಿದ್ದಾಗ ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಈ ವೇಳೆ ಸಭಾ ವೇದಿಕೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ವೇದಿಕೆಯಿಂದ ಇಳಿದುಬಂದು ಮಾಧ್ಯಮದವರ ಕ್ಯಾಮೆರಾ ಚಿತ್ರೀಕರಣಕ್ಕೆ ಅಡ್ಡಗಟ್ಟಿ ತಳ್ಳಿದ್ದಾರೆ. ಇದರಿಂದ ಕೆಲ ಹೊತ್ತು ಸಂದಿಗ್ಧತೆ ವಾತಾವರಣ ಸೃಷ್ಟಿಯಾಯಿತು.
ಇದೆಲ್ಲಾ ಘಟನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸಹಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಸಹಿತ ಎರಡು ಬ್ಲಾಕ್ ಕಾಂಗ್ರೆಸ್ನ ಮುಖಂಡರುಗಳು ದುರ್ವರ್ತನೆ ತೋರಿದ ಮುಖಂಡನನ್ನು ತಡೆಯುವ ಯಾವುದೇ ಪ್ರಯತ್ನ ಮಾಡದೇ ಮೂಕ ಪ್ರೇಕ್ಷಕರಾಗಿ ವರ್ತಿಸಿದ್ದಾರೆ.
ಬಳಿಕ ಸಚಿವೆ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುವ ಮೊದಲಿಗೆ ಮಾಧ್ಯಮದವರನ್ನು ಹೊರಹೋಗಿ ಎಂದು ನೇರವಾಗಿ ಹೇಳುವ ಮೂಲಕ ಅವಮಾನಪಡಿಸಿ ಪತ್ರಿಕಾ ಸ್ವಾತಂತ್ರ್ಯಕ್ಕೆ ದಕ್ಕೆ ತಂದಿದ್ದಾರೆ ಎಂದು ಸಂಘವು ಆರೋಪಿಸಿದೆ.
ಕುಂದಾಪುರದಲ್ಲಿ ನಡೆಯುವ ವಿವಿಧ ಪಕ್ಷಗಳ ಕಾರ್ಯಕ್ರಮದಲ್ಲಿ ಕುಂದಾಪುರ ಮಾಧ್ಯಮ ಮಿತ್ರರು ಸೌಹಾರ್ದಯುತವಾಗಿ ಭಾಗವಹಿಸಿ ಕಾರ್ಯಕ್ರಮದ ವರದಿ ಮಾಡುತ್ತಾ ಬಂದಿದ್ದು ಕಾಂಗ್ರೆಸ್ ಪಕ್ಷದ ಈ ದುರ್ವರ್ತನೆ ಪತ್ರಕರ್ತರ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಆದ್ದರಿಂದ ಈ ಘಟನೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾ ಕಾರ್ಯಾಧ್ಯಕ್ಷ ಕೊಳ್ಕೆಬೈಲು ಕಿಶನ್ ಹೆಗ್ಡೆ ಹಾಗೂ ಎರಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಆಗ್ರಹಿಸಿದೆ.

