Kundapra.com ಕುಂದಾಪ್ರ ಡಾಟ್ ಕಾಂ

ಚುನಾವಣಾ ಆಯೋಗದ ನಿರ್ದೇಶನವನ್ನು ಅಧಿಕಾರಿಗಳು ಚಾಚುತಪ್ಪದೇ ಪಾಲಿಸಿ: ಡಿಸಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಚುನಾವಣಾ ಆಯೋಗ ನೀಡಿರುವ ಮಾರ್ಗದರ್ಶನವನ್ನು ಏಪ್ರಿಲ್ 26ರಂದು ನಡೆಯುವ ಮತದಾನ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಚಾಚು ತಪ್ಪದೇ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿಗೆ ಅವರು ತಿಳಿಸಿದರು.

ಅವರು ಉಡುಪಿ ನಗರದ ಸೇಂಟ್ ಸಿಸಿಲಿ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಲೋಕಸಭಾ ಚುನಾವಣಾ ದಿನದಂದು ಕರ್ತವ್ಯಕ್ಕೆ ಆಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮೊದಲನೇ ಸುತ್ತಿನ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಲೋಕಸಭಾ ಚುನಾವಣೆಯು ಪಾರದರ್ಶಕವಾಗಿ ಮತ್ತು ಮುಕ್ತ, ನ್ಯಾಯಸಮ್ಮತವಾಗಿ ನಡೆಯಬೇಕು ಜಿಲ್ಲೆಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಚಾಚು ತಪ್ಪದೆ ತಮಗೆ ವಹಿಸಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಚುನಾವಣಾ ಕರ್ತವ್ಯದಲ್ಲಿ ಯಾವುದೇ ಒಂದು ಸಣ್ಣ ದೋಷ ವಾಗದಂತೆ, ಜಾಗರೂಕತೆಯಿಂದ ತಮ್ಮ ಕಾರ್ಯಗಳನ್ನು ನಿರ್ವಹಿಸಬೇಕು.ಮತದಾನ ಕೇಂದ್ರದಲ್ಲಿ ಅಳವಡಿಸಿರುವ ವೆಬ್ ಕಾಸ್ಟ್ ನಿಂದ ವಿಡಿಯೋ ಚಿತ್ರೀಕರಣವನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ವೀಕ್ಷಣೆ ಮಾಡುತ್ತಿರುತ್ತಾರೆ . ಎಚ್ಚರದಿಂದ ಕಾರ್ಯನಿರ್ವಹಿಸಬೇಕು ಎಂದರು.

ರಾಜ್ಯಮಟ್ಟದ ಚುನಾವಣಾ ತರಬೇತಿದರಾದ ಅಶೋಕ್ ಕಾಮತ್ ಅವರು ಮಾತನಾಡಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ವಿಶ್ವದಲ್ಲಿ ಅತ್ಯಂತ ಶ್ರೇಷ್ಠ ಮುಂದಾಗಿದ್ದು ,ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲ ತೊಡಗಿ ಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಹೀಗಾಗಿ ಚುನಾವಣಾ ಕರ್ತವ್ಯದಲ್ಲಿ ತೊಡಗಿಕೊಂಡಿರುವ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಬದ್ಧತೆಯೊಂದಿಗೆ ನಿರ್ವಹಿಸಬೇಕೆಂದರು.

ಸಭೆಯಲ್ಲಿ ಸಹಾಯಕ ಚುನಾವಣಾ ಅಧಿಕಾರಿ ಗಾಂವ್ಕರ್, ಡಿ ಡಿ ಪಿ ಐ ಗಣಪತಿ ಕೆ., ತಹಸೀಲ್ದಾರ್ ಗುರುರಾಜ್, ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version