Kundapra.com ಕುಂದಾಪ್ರ ಡಾಟ್ ಕಾಂ

ಜೂ.1ರಿಂದ 61 ದಿ‌ನ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ.

ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version