Kundapra.com ಕುಂದಾಪ್ರ ಡಾಟ್ ಕಾಂ

ಜುಲೈ 06ರಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಜು.4
: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇವರಿಂದ ಬೈಂದೂರು ಜನಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ 350 ಸರ್ಕಾರಿ / ಅನುದಾನಿತ ಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಸಮಾರಂಭವನ್ನು ಬೈಂದೂರಿನ ಜೆ.ಎನ್.ಆರ್ ಸಭಾಂಗಣದಲ್ಲಿ ಜುಲೈ 6ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಅವರು ಬೈಂದೂರು ಪ್ರಸ್‍ ಕ್ಲಬ್‍ನ್‍ನಲ್ಲಿ ಗುರುವಾರ ಆಯೋಜಿಸಲಾಗಿದ್ದ ಮಾದ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಮೈಸೂರು ಮರ್ಕಂಟೈಲ್ ಕಂಪನಿ ಲಿಮಿಟೆಡ್ [ಎಂ.ಎಂ.ಸಿ.ಎಲ್) ನೆರವಿನೊಂದಿಗೆ ಹೆಗ್ಗುಂಚೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಾಲಾ ಕಟ್ಟಡಗಳ ನಿರ್ಮಾಣ, ವಿದ್ಯಾರ್ಥಿಗಳಿಗೆ ನಿರಂತರವಾಗಿ ಉಚಿತ ಸಮವಸ್ತ್ರ ವಿತರಣೆ, ವಿದ್ಯಾರ್ಥಿ ವೇತನ, ಮಧ್ಯಾಹ್ನ ಊಟಕ್ಕೆ ದೇಣಿಗೆ, ಶಾಲಾ ಕಂಪ್ಯೂಟರ್ ಲ್ಯಾಬ್‌ಗಳ ವ್ಯವಸ್ಥೆ, ಸಾರ್ವಜನಿಕ ಶೌಚಾಲಯಗಳ ನಿರ್ಮಾಣ, ಬಡ ಮತ್ತು ನಿರ್ಗತಿಕರಿಗೆ ವೈದ್ಯಕೀಯ ನೆರವು ನೀಡುವುದು, ಯಕ್ಷಗಾನ ಕಲಾವಿದರಿಗೆ ಮನೆ ನಿರ್ಮಿಸಿ ಕೊಡುವುದು, ಕರೋನಾ ಸಾಂಕ್ರಾಮಿಕ ಸಂಕಷ್ಟದ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ಉಪಕರಣಗಳ ದಾನ, ಇತ್ಯಾದಿ ಶೈಕ್ಷಣಿಕ ದಿನದಲಿತರಿಗೆ ಮನೆ ನಿರ್ಮಾಣ ಕಾರ್ಯ ಹಾಗೂ ಸಾಮಾಜಿಕ ಸೇವೆ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ ಎಂದರು.

ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಬ್ರಹ್ಮಾವಾರ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಇಲಾಖೆಯೊಂದಿಗೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ ಒಡಂಬಡಿಕೆ ಮಾಡಿಕೊಂಡಿದೆ. ಈ ಸಂಬಂಧ ಸಂಸ್ಥೆಯು ಸುಮಾರು ಮೂರು ಕೋಟಿ ರೂಪಾಯಿಗಳ ಆರ್ಥಿಕ ಸಹಾಯದೊಂದಿಗೆ ಈಗಾಗಲೇ ಮೂಲಭೂತ ಸೌಕರ್ಯವನ್ನು ಒದಗಿಸಿದೆ.  

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಪ್ರಸ್ತುತ 2023-24ನೇ ಸಾಲಿನಲ್ಲಿ ವಿದ್ಯಾರ್ಥಿ ಸಮುದಾಯ ಅಭ್ಯುದಯದ ಹಲವಾರು ಚಟುವಟಿಕೆಗಳಿಗೆ ಈಗಾಗಲೇ ಏಳು ಕೋಟಿ ರೂಪಾಯಿಗಳ ದೇಣಿಗೆಯನ್ನು ನೀಡಿದೆ. ಉಡುಪಿ ಜಿಲ್ಲೆಯ 350 ಶಾಲೆಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿಗೆ ಉಚಿತ ಸಮವಸ್ತ್ರಗಳನ್ನು ವಿತರಿಸಿದೆ ಎಂದರು.

ಟ್ರಸ್ಟ್‍ನ ಸದಸ್ಯ ವಕೀಲರಾದ ರವಿರಾಜ್ ಶೆಟ್ಟಿ ಮಾತನಾಡಿ, ಸಮವಸ್ತ್ರ ವಿತರಣ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಸಮವಸ್ತ್ರ ವಿತರಣೆ ನಡೆಯಲಿದ್ದು, ಸಮವಸ್ತ್ರ ಪಡೆಯುಲು ಅರ್ಹವಿರುವ ಎಲ್ಲಾ ಮಕ್ಕಳಿಗೆ ಆಯಾ ಶಾಲೆಗಳಿಗೆ ಸಮವಸ್ತ್ರ ವಿತರಿಸಲಾಗುತ್ತದೆ ಎಂದರು.

ಇದೇ ಸಂದರ್ಭ ಹಿರಿಯ ನಿವೃತ್ತ ಶಿಕ್ಷಕ ಹಾಗೂ ಯಕ್ಷಗಾನ ಪ್ರಸಂಗಕರ್ತ  ಕಂದಾವರ ರಘುರಾಮ ಶೆಟ್ಟಿ ಅವರಿಗೆ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ. ಸದ್ರಿ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಮೌಲ್ಯದ ಚೆಕ್ ಹಾಗೂ ತಾಮ್ರಪತ್ರವನ್ನು ಒಳಗೊಂಡಿದೆ. ಕಾರ್ಯಕ್ರಮಕ್ಕೆ ಮುನ್ನ ಭಾವಗೀತೆಗಳ ಗಾಯನ ಕಾರ್ಯಕ್ರಮವೂ ನಡೆಯಲಿದೆ.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರದ ಸಭಾಪತಿಗಳಾಗಿರುವ ಮಾನ್ಯ ಯು. ಖಾದರ್ ಅವರು ಉದ್ಘಾಟಿಸಲಿದ್ದಾರೆ. ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಅವರು ಸಮವಸ್ತ್ರವನ್ನು ಸಾಂಕೇತಿಕವಾಗಿ ವಿತರಿಸಲಿದ್ದಾರೆ. ಶಿವಮೊಗ್ಗ ಸಂಸದರಾದ  ಬಿ.ವೈ.ರಾಘವೇಂದ್ರ ಅವರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ. ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಶೂಭಾಶಂಸನೆಗೈಯಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಶ್ರೀ ಬ್ರಿಜೆಶ್ ಚೌಟ, ಕುಂದಾಪುರ ಶಾಸಕರಾದ  ಎ. ಕಿರಣ್ ಕುಮಾರ್ ಕೊಡ್ಡಿ, ಉಡುಪಿ ಶಾಸಕರಾದ ಶ ಯಶಪಾಲ್ ಸುವರ್ಣ, ಬೈಂದೂರು ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್(ರಿ) ಇದರ ಅಧ್ಯಕ್ಷರಾದ ಬಿ.ಎಸ್. ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ  ಕೆ.ಗಣಪತಿ ಇನ್ನಿತರು ಉಪಸ್ಥಿತರಿರಲಿದ್ದಾರೆ ಎಂದರು.

ಮಾದ್ಯಮಗೋಷ್ಠಿಯಲ್ಲಿ  ಟ್ರಸ್ಟ್‍ನ ಉಪಾಧ್ಯಕ್ಷ ಎಚ್. ನಾಗರಾಜ ಶೆಟ್ಟಿ, ಕಾರ್ಯದರ್ಶಿ ಡಾ| ಸುಮನ ಶೆಟ್ಟಿ, ಸಮೃದ್ಧ ಜನಸೇವಾ ಚಾರಿಟೇಬಲ್‍ನ ಟ್ರಸ್ಟ್‍ನ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ, ಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

Exit mobile version