Kundapra.com ಕುಂದಾಪ್ರ ಡಾಟ್ ಕಾಂ

ಬಸ್ರೂರು: ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವಿಚಿತ್ರವಾಗಿ ವರ್ತಿಸುತ್ತಿದ್ದ ಪತಿಯ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ಬಸ್ರೂರಿನಲ್ಲಿ ಶನಿವಾರ ನಡೆದಿದೆ. ಮನೆಯ ಬಾಗಿಲು ಲಾಕ್ ಮಾಡಿಕೊಂಡು ಪತ್ನಿಗೆ ಹಲ್ಲೆ ಮಾಡಿ ಹುಟ್ಟಾಟವಾಡುತ್ತಿದ್ದ ವ್ಯಕ್ತಿಯನ್ನು ಸೆರೆಹಿಡಿಯಲು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸಪಟ್ಟಿದ್ದಾರೆ.

ಘಟನೆಯಲ್ಲಿ ಗಂಡನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಪತ್ನಿ ಅನಿತಾ (38) ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿ ಲಕ್ಷ್ಮಣ (40) ಎಂಬಾತನನ್ನು ಬಂಧಿಸಲಾಗಿದೆ.

ಸೊರಬ ಮೂಲದರಾದ ಅನಿತಾ – ಲಕ್ಷ್ಮಣ ದಂಪತಿ ಬಸ್ರೂರಿನ ರೆಸಿಡೆನ್ಶಿಯಲ್ ಬ್ಲಾಕ್ʼನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಾಶಿ ಮಠದ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ನಿನ್ನೆ ಯಾವುದೋ ವಿಚಾರಕ್ಕೆ ಇವರಿಬ್ಬರ ನಡುವೆ ನಡೆದ ಜಗಳವು ವಿಕೋಪಕ್ಕೆ ತಿರುಗಿದೆ. ಬಳಿಕ ಆರೋಪಿ ಪತಿಯು, ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ. ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ ಬಳಿಕ ಆರೋಪಿಯು ಮನೆಯ ಒಳಗಿನಿಂದ ಬಾಗಿಲನ್ನು ಭದ್ರವಾಗಿ ಹಾಕಿಕೊಂಡಿದ್ದಾನೆ. ಅಡುಗೆ ಮನೆಯಲ್ಲಿ ಪತ್ನಿ ಅನಿತಾ (38) ರಕ್ತದ ಮಡುವಿನಲ್ಲಿ ಬಿದ್ದಿದ್ದರು. ವಿಷಯ ತಿಳಿದ ಸ್ಥಳೀಯರು ಅಡುಗೆ ಮನೆಯ ಕಿಟಕಿ ಬಾಗಿಲು ಒಡೆದು ಕೋಣೆಯ ಒಳಗೆ ತೆರಳಿ ಆಕೆಯನ್ನು ಹೊರಗೆ ಕರೆತಂದಿದ್ದಾರೆ. ಮಾರಣಾಂತಿಕ ಹಲ್ಲೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅನಿತಾರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಬಳಿಕವೂ ಪತಿ ಮಾತ್ರ ಬಾಗಿಲು ತೆಗೆಯದೇ ಕತ್ತಿ ಹಿಡಿದು ನೃತ್ಯ ಮಾಡುತ್ತಿದ್ದ.

ಘಟನಾ ಸ್ಥಳಕ್ಕೆ ತೆರಳಿದ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಗ್ನಿ ಶಾಮಕ ಸಿಬಂದಿ ಆರೋಪಿಯನ್ನು ಹಿಡಿಯಲು ಹರಸಾಹಸ ಪಟ್ಟಿದ್ದಾರೆ. ಆರೋಪಿಯು ಕೈಯಲ್ಲಿ ಕತ್ತಿ ಹಿಡಿದು ಹೆದರಿಸುತ್ತಿದ್ದುದರಿಂದ ಎದುರಿನ ಬಾಗಿಲು ಮುರಿದು ಒಳಗೆ ಹೋಗಲು ಸಾಧ್ಯವಾಗಲಿಲ್ಲ. ಬಳಿಕ ಪೊಲೀಸರು ಆತನಿದ್ದ ರೂಮಿನ ಕಿಟಕಿ ಮೂಲಕ ಖಾರದ ಪುಡಿ ಎರಚಿದ್ದು, ಅದರಿಂದ ಆತ ತಪ್ಪಿಸಿಕೊಂಡಿದ್ದಾನೆ. ಬಳಿಕ ಏರ್‌ಗನ್ ಮೂಲಕ ಗ್ಯಾಸ್ ಸಿಂಪಡಿಸಿದ್ದು, ಅದರಿಂದಲೂ ತಪ್ಪಿಸಿಕೊಂಡಿದ್ದಾನೆ. ಬಳಿಕ ಪೊಲೀಸರು ಎದುರಿನ ಬಾಗಿಲನ್ನು ಒಡೆಯಲು ಪ್ರಯತ್ನಿಸುತ್ತಿರುವಂತೆ ಮಾಡಿ, ಮತ್ತೊಂದು ತಂಡ ಕಿಟಕಿ ಮೂಲಕ ಮನೆ ಒಳಗೆ ಪ್ರವೇಶಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಪತ್ನಿಯ ಮೇಲೆ ಹಲ್ಲೆ ನಡೆಸಿ ಒಂದೂವರೆ ಗಂಟೆಗಳ ಮನೆಯೊಳಕ್ಕೆ ನುಗ್ಗಿ ಆರೋಪಿಯನ್ನು ಬಂಧಿಸಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Exit mobile version