Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಉತ್ಸವ 2024ರ ಲಾಂಛನ ಬಿಡುಗಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಕ್ರಿಯಾಶೀಲ  ಜನಪ್ರತಿನಿಧಿಗಳಿಂದ ಬದಲಾವಣೆ ಸಾಧ್ಯ ಎನ್ನುವುದಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವ ಸಾಕ್ಷಿಯಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

ಅವರು ಸೋಮವಾರ ನವೆಂಬರ್ 1ರಿಂದ 3ರವರೆಗೆ ಬೈಂದೂರು ಗಾಂಧಿ ಮೈದಾನದಲ್ಲಿ ಆಯೋಜಿಸಿರುವ ಬೈಂದೂರು ಉತ್ಸವ 2024ರ ಅಧಿಕೃತ ಲಾಂಛನವನ್ನು ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನದ ಆವರಣದಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮೃದ್ದ ಬೈಂದೂರು ಮೂಲಕ ಬೈಂದೂರು ಕ್ಷೇತ್ರದ ಭಾಷೆ, ಕಲೆ ಸಂಸ್ಕೃತಿಯನ್ನು ಇಡೀ ಜಗತ್ತು ನೋಡಬೇಕು ಎನ್ನುವ ಕಾರಣಕ್ಕೆ ನಡೆಯುವ ಬೈಂದೂರು ಉತ್ಸವಕ್ಕೆ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ ಎಂದರು.

ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಬೈಂದೂರು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವ ಕ್ಷೇತ್ರ. ಬೈಂದೂರು ಉತ್ಸವದಲ್ಲಿ ರಾಜ್ಯದಲ್ಲಿಯೇ ಕುಗ್ರಾಮವಾಗಿದ್ದ ಬೈಂದೂರು ಕ್ಷೇತ್ರ ಕಳೆದ ಹದಿನೈದು ವರ್ಷಗಳಿಂದ ಅಭಿವೃದ್ಧಿಯತ್ತ ಸಾಗುತ್ತಿದೆ. ಕುಂದಾಪ್ರ ಭಾಷೆಗೆ ಕಿರೀಟವಿಟ್ಟಂತೆ ನಮ್ಮ ಗ್ರಾಮೀಣ ಕಲೆ, ಸಂಸ್ಕೃತಿಗಳನ್ನು ಪ್ರತಿಬಿಂಬಿಸುವುದಕ್ಕಾಗಿ ಬೈಂದೂರು ಉತ್ಸವ ಸಜ್ಜಾಗುತ್ತಿದೆ ಎಂದರು.

ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ಬೈಂದೂರು ಇದರ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಮಾತನಾಡಿ, ಬೈಂದೂರು ಮೂಲದ ಹೊರದೇಶ ಹಾಗೂ ಹೊರರಾಜ್ಯ, ಜಿಲ್ಲೆಗಳಲ್ಲಿ ಇರುವ ನಮ್ಮ ಜನರನ್ನು ಒಟ್ಟುಗೂಡಿಸಿಕೊಂಡು ಬೈಂದೂರು ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆಗೆ, ನಮ್ಮೂರಿನ ಕಲೆ, ಸಂಸ್ಕೃತಿ, ಕೃಷಿ, ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಿಕೊಳ್ಳುತ್ತಾ ಇಡೀ ಜಗತ್ತಿಗೇ ಸಾರುವ ಕೆಲಸವನ್ನು ಬೈಂದೂರು ಉತ್ಸವ ಮಾಡಲಿದೆ ಎಂದರು.

ಬೈಂದೂರು ಉತ್ಸವದ ಸಂಚಾಲಕ ಗಣೇಶ್ ಗಾಣಿಗ, ಲಾಂಛನ ವಿನ್ಯಾಸಕಾರ ಪುರಂದರ ಉಪ್ಪುಂದ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಕೃಷ್ಣಪ್ರಸಾದ್ ಅಡ್ಯಂತಾಯ, ಲಾವಣ್ಯ ಬೈಂದೂರು ಅಧ್ಯಕ್ಷ ಬಿ. ನರಸಿಂಹ ನಾಯಕ್, ಸಾಹಿತಿಗಳಾದ ಪುಂಡಲೀಕ ನಾಯಕ್, ಶರತ್ ಶೆಟ್ಟಿ ಬಿಜೂರು ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಸುರಭಿ ಬೈಂದೂರು ಇದರ ನಿರ್ದೇಶಕ ಸುಧಾಕರ ಪಿ. ಬೈಂದೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ವಂದಿಸಿದರು.

Exit mobile version