Site icon Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾ ಸುದ್ದಿ.
ಉಡುಪಿ:
ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲು ಬಾಯಿ ಜ್ವರ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಸೋಮವಾರ ನೀಲಾವರ ಗೋಶಾಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.  

ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅ. 21 ರಿಂದ ನ. 20 ರ ವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಜಿಲ್ಲೆಯ ಎಲ್ಲಾ ಹೈನುಗಾರರು ಪಶು ಸಂಗೋಪನಾ ಇಲಾಖೆಯ ಅಧಿಕಾರಿ / ಸಿಬ್ಬಂದಿಗಳು ಮತ್ತು ಕೆ.ಎಂ.ಎಫ್. ಸಿಬ್ಬಂದಿಗಳು ಹಾಗೂ ಗ್ರಾಮ ಮಟ್ಟದಲ್ಲಿ ಪಶು ಸಖಿಯರು ಜಾನುವಾರುಗಳಿಗೆ ಲಸಿಕೆ ನೀಡಲು ಮನೆ ಭೇಟಿ ಮಾಡಿದ ಸಂದರ್ಭದಲ್ಲಿ ಅವರುಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವ ಮೂಲಕ ಅವರುಗಳಿಗೆ ಸಹಕಾರ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮಿಜಿ ಅವರು ಜಿಲ್ಲೆ, ರಾಜ್ಯ ಹಾಗೂ ದೇಶಾದ್ಯಂತ ನಡೆಯುತ್ತಿರುವ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವು ಯಶಸ್ವಿಯಾಗುವಂತೆ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಎಂ.ಸಿ.ರೆಡ್ಡಪ್ಪ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ಶಿವಯೋಗಿ. ಬಿ, ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಂದೀಪ ಕುಮಾರ್, ಡಾ. ಉದಯಕುಮಾರ್ ಶೆಟ್ಟಿ ನೀಲಾವರ ಗೋಶಾಲೆಯ ಟ್ರಸ್ಟಿಗಳಾದ ಡಾ.ಸರ್ವೋತ್ತಮ ಉಡುಪ, ನಾಗರಾಜ ರಾವ್, ಕೆ.ಎಂ.ಎಫ್.ನ ಸಹಾಯಕ ವ್ಯವಸ್ಥಾಪಕ ಡಾ.ನಿಜಾಮ್ ಪಟೇಲ್, ಬ್ರಹ್ಮಾವರ ತಾಲ್ಲೂಕಿನ ಪಶುಪಾಲನಾ ಇಲಾಖೆಯ ಮತ್ತು ಕೆ.ಎಂ.ಎಫ್.ನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಗೋವರ್ಧನ ಗಿರಿ ಟ್ರಸ್ಟ್‍ನ ಸದಸ್ಯರು, ಸಿಬ್ಬಂದಿಯವರು, ಪಶುಸಖಿಯರು ಉಪಸ್ಥಿತರಿದ್ದರು.

Exit mobile version