Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲಾ ಪ್ರತಿಭಾ ಕಾರಂಜಿ: ಶಿಕ್ಷಣದೊಂದಿಗೆ ಶಿಕ್ಷಣೇತರ ಚಟುವಟಿಕೆಗೂ ಆದ್ಯತೆ ನೀಡಿ- ಸವಿತಾ ಕೋಟ್ಯಾನ್

ಬೈಂದೂರು: ಪ್ರತಿಯೊಂದು ಮಗುವಿನಲ್ಲೂ ತನ್ನದೇ ಆದ ಪ್ರತಿಭೆ ಇದೆ. ಅದನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಉತ್ತಮ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುವ ಕೆಲಸ ಪಾಲಕರು ಹಾಗೂ ಶಿಕ್ಷಕರಿಂದ ನಿರಂತರವಾಗಿ ಆಗಬೇಕಿದೆ. ಇದು ಮಕ್ಕಳ ಉಜ್ವಲ ಭವಿಷ್ಯಕ್ಕೆ ನಾಂದಿನಾಗಲಿದೆ ಎಂದು ಉಡುಪಿ ಜಿ.ಪಂ ಅಧ್ಯಕ್ಷೆ ಸವಿತಾ ಶಿವಾನಂದ ಕೋಟ್ಯಾನ್ ಹೇಳಿದರು.

ಅವರು ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣದಲ್ಲಿ ಕ್ರಾಂತಿಯನ್ನೇ ಮಾಡಿ ರಾಜ್ಯದಲ್ಲಿ ಗುರುತಿಸಿಕೊಂಡ ಉಡುಪಿ ಜಿಲ್ಲೆಯ ಮಕ್ಕಳು ಶಿಕ್ಷಣ ಶಿಕ್ಷಣದೊಂದಿಗೆ ಶಿಕ್ಷಣೇತರ ಚಟುವಟಿಕೆಗಳಲ್ಲಿಯೂ ಸಾಧನೆಗೈದಿದ್ದಾರೆ. ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳ ಆಯೋಜನೆಗೆ ಪ್ರತಿಯೊಬ್ಬರ ಶ್ರಮ, ಪಾಲುದಾರಿಕೆ ಇದ್ದರೇ ಮಾತ್ರ ಅದು ಯಶಸ್ಸು ಕಾಣಲು ಸಾಧ್ಯ ಎಂದರು.

ಕಿರಿಮಂಜೇಶ್ವರ ಗ್ರಾ.ಪಂ ಅಧ್ಯಕ್ಷೆ ಲಲಿತಾ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ನಾಗೂರು ಆಂಜನೇಯ ದೇವಸ್ಥಾನದಿಂದ ಆರಂಭಗೊಂಡ ಪುರಮೆರವಣಿಗೆಗೆ ಜಿ.ಪಂ ಸದಸ್ಯ ಬಾಬು ಶೆಟ್ಟಿ ಚಾಲನೆ ನೀಡಿದರು. ಜಿ.ಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ಜಿ.ಪಂ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷೆ ಇಂದಿರಾ ಶೆಟ್ಟಿ, ಸಂದೀಪನ್ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕೆ.ಎಸ್. ಪ್ರಕಾಶ್ ರಾವ್, ಮುಖ್ಯ ಶಿಕ್ಷಕ ವಿಶ್ವೇಶ್ವರ ಅಡಿಗ, ಸರ್ವಶಿಕ್ಷಣ ಅಭಿಯಾನದ ಉಪಯೋಜನಾಧಿಕಾರಿ ನಾಗರಾಜ, ಅಕ್ಷರದಾಸೋಹದ ವಸಂತ್ ಶೆಟ್ಟಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ, ಬೈಂದೂರು ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಬೈಂದೂರು ವಲಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಕೇಶವ ನಾಯ್ಕ್, ಬೈಂದೂರು ವಲಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರವಿಶಂಕರ ಹೆಗ್ಡೆ, ಸಂದೀಪನ್ ಶಾಲೆ ಪಾಲಕರ ಸಮಿತಿ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಉಪಸ್ಥಿತರಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ನಿದೇಶಕ ದಿವಾಕರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ವೆಂಕಪ್ಪ ವಂದಿಸಿದರು. ಶಿಕ್ಷಕರುಗಳಾದ ಸತ್ಯಾನಾ ಕೊಡೇರಿ, ಗಣಪತಿ ಹೋಬಳಿದಾರ್, ವಿಶ್ವನಾಥ ಶೆಟ್ಟಿ ನಿರೂಪಿಸಿದರು.

Dist level Pratibha Karanji (1)

Exit mobile version