Site icon Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಬೃಹತ್ ಶೈಕ್ಷಣಿಕ ಮಾಹಿತಿ ಮತ್ತು ವಸ್ತು ಪ್ರದರ್ಶನದ ಬಗ್ಗೆ ಪೂರ್ವಭಾವಿ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡಿಸೆಂಬರ್ 2ರಿಂದ 5ರ ತನಕ ನಡೆಯಲಿರುವ ಬೃಹತ್ ಶೈಕ್ಷಣಿಕ ಮಾಹಿತಿ ಮತ್ತು ವಸ್ತು ಪ್ರದರ್ಶನದ  ಬಗ್ಗೆ ಪೂರ್ವಭಾವಿ ಸಭೆಯು  ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 19ರಂದು ಕಾಲೇಜಿನ ಆರ್.ಎನ್. ಶೆಟ್ಟಿ ಸಬಾಂಗಣದಲ್ಲಿ ನಡೆಯಿತು.

ಕುಂದಾಪುರ –ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಶೈಕ್ಷಣಿಕ ಮಾಹಿತಿ , ವಸ್ತು ಪ್ರದರ್ಶನ ವೃತ್ತಿ ಮಾರ್ಗದರ್ಶನ ನೀಡಲು ನಿರ್ಧರಿಸಲಾಗಿದ್ದು, ಸರ್ವ ಸರಕಾರಿ ಇಲಾಖೆಗಳ ಸಹಭಾಗಿತ್ವದಲ್ಲಿ ಈ ಬ್ರಹತ್ ಶೈಕ್ಷಣಿಕ ಮತ್ತು ವಸ್ತು ಪ್ರದರ್ಶನ ನಡೆಯಲಿದೆ.

ವಿದ್ಯಾರ್ಥಿಗಳಿಗೆ ಬಹಳಷ್ಟು ವಿಷಯಗಳ ಬಗ್ಗೆ ಮಾಹಿತಿಗಳ ಕೊರತೆ ಇದ್ದು, ಅವರ ಭವಿಷ್ಯದ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಈ ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಸಂಗೋಪನೆ ಇಲಾಖೆ, ಅರಣ್ಯ ಇಲಾಖೆ, ಕಾರ್ಮಿಕ ಇಲಾಖೆ, ವಿದ್ಯುತ್ ಇಲಾಖೆ, ಕ್ರೀಡಾ ಇಲಾಖೆ, ಮೀನುಗಾರಿಕೆ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ,  ಕೈಗಾರಿಕಾ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಸಹಕಾರ ಇಲಾಖೆ, ಶಿಕ್ಷಣ ಇಲಾಖೆಗಳ ಅಧಿಕಾರಿಗಳು  ಸಲಹೆ ಸೂಚನೆ ನೀಡಿದರು. ಅಗತ್ಯವುಳ್ಳ ಇಲಾಖೆಗಳ ವಸ್ತು ಪ್ರದರ್ಶನ ಏರ್ಪಡಿಸುವ  ನಿರ್ಧಾರ ಕೈಗೊಳ್ಳಲಾಯಿತು.

ಅಲ್ಲದೇ ವಿವಿಧ ಇಲಾಖೆಗಳಿಂದ ಪ್ರಾತ್ಯಕ್ಷಿಕೆ ತರಬೇತಿ, ಮಾಹಿತಿ ಮತ್ತು ಅವಕಾಶಗಳ ಕುರಿತು  ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ವಿದ್ಯಾರ್ಥಿಗಳಿಗಾಗಿ ಮತ್ತು ಸಾರ್ವಜನಿಕರಿಗೆ  ಮಾಹಿತಿ ನೀಡಲಿದ್ದಾರೆ. 

ಭಂಡಾರ್ಕಾರ್ಸ್ ಕಾಲೇಜಿನ ವಿವಿಧ ವಿಭಾಗಗಳಿಂದ ವಸ್ತು ಪ್ರದರ್ಶನ ನಡೆಸಲು ನಿರ್ಧರಿಸಲಾಗಿದೆ ಎಂದು ಯು.ಎಸ್. ಶೆಣೈ ಮಾಹಿತಿ ನೀಡಿದರು.

ಸಾರ್ವಜನಿಕ ವಲಯದಲ್ಲಿರುವ ಬ್ಯಾಂಕ್‍ಗಳು, ವಾಣಿಜ್ಯ, ಕೈಗಾರಿಕೆ, ಕುಶಲ ಕಲೆ ಮುಂತಾದ ವಿಷಯಗಳ ಕುರಿತು ಮಳಿಗೆಗಳನ್ನು ತೆರೆಯಲು ಅವಕಾಶವಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕಿನ ತಹಶೀಲ್ದಾರ್ ಶೋಭಿಲಕ್ಷ್ಮಿ, ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಶಾಂತಾರಾಮ ಪ್ರಭು, ಪ್ರಕಾಶ್ ಸೋನ್ಸ್, ವಿಶ್ವಸ್ಥ ಮಂಡಳಿಯ ಸದಸ್ಯರಾದ ಸದಾನಂದ ಚಾತ್ರ, ರಾಜೇಂದ್ರ ತೋಳಾರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್.ಗೊಂಡ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಸದಾನಂದ ಕಾಮತ್, ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀಹರಿ ಚಾತ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಸಂಗೋಪನೆ ಇಲಾಖೆ, ಅರಣ್ಯ ಇಲಾಖೆ, ಕಾರ್ಮಿಕ ಇಲಾಖೆ, ವಿದ್ಯುತ್ ಇಲಾಖೆ, ಕ್ರೀಡಾ ಇಲಾಖೆ, ಮೀನುಗಾರಿಕೆ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ,  ಕೈಗಾರಿಕಾ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಸಹಕಾರ ಇಲಾಖೆ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಕಂದಾಯ ಇಲಾಖೆಗಳ ಅಧಿಕಾರಿಗಳು ಭಂಡಾರ್ಕಾರ್ಸ್ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಕಾಲೇಜಿನ ಕಛೇರಿ ವ್ಯವಸ್ಥಾಪಕರಾದ ಗೋಪಾಲ ನಾಯ್ಕ ಉಪಸ್ಥಿತರಿದ್ದರು.

Exit mobile version