Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜು: ಶ್ರೀ ರಾಮಾಯಣ ದರ್ಶನಂ – ಉಪನ್ಯಾಸ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಮನುಷ್ಯನ ಬದುಕಿನಲ್ಲಿ ನೈತಿಕ ಮೌಲ್ಯಗಳು ಪ್ರಧಾನ ಭೂಮಿಕೆಯನ್ನು ವಹಿಸುತ್ತವೆ. ಮಾನವೀಯ ಮೌಲ್ಯಗಳಾದ ಶಾಂತಿ, ಪ್ರೀತಿ, ಪ್ರೇಮ, ಕರುಣೆ, ಅಹಿಂಸೆ, ಸಹಿಷ್ಣುತೆ ಮುಂತಾದ ಉತೃಷ್ಠ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜವನ್ನು ಕಟ್ಟಬಹುದಾಗಿದೆ. ವಿದ್ಯಾರ್ಥಿಗಳು ನೈತಿಕ ಮೌಲ್ಯಗಳ ಮಹಾಮೇರುಗಳಾಗಿ ಭವಿಷ್ಯದಲ್ಲಿ ವಿಜೃಂಭಿಸಲು ಕುವೆಂಪು ಸೃಜಿಸಿದ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯದ ಓದು ಸಹಕಾರಿಯಾಗುತ್ತದೆಂದು ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರವಿರಾಜ ಶೆಟ್ಟಿ ಹೇಳಿದರು.

ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ, ಕಾಲೇಜಿನ ಐಕ್ಯೂಎಸಿ ಮತ್ತು ಕನ್ನಡ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಕುವೆಂಪುರವರ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯದ ಅನಲೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಯುಗದ ಕವಿ ಜಗದ ಕವಿಯಾದ ಕುವೆಂಪು ಅವರ ಕೊಡುಗೆಗಳನ್ನು ಸ್ಮರಿಸಿ ವಿದ್ಯಾರ್ಥಿಗಳು ಕುವೆಂಪು ಅವರ ಸಾಹಿತ್ಯದ ಓದಿನಿಂದ ತಮ್ಮ ಆತ್ಮಶ್ರೀಯನ್ನು ವೃದ್ಧಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ಕೃಷ್ಣ ಸಾಸ್ತಾನ ಕುವೆಂಪು ಅವರ ಆಯ್ದ ಭಾವಗೀತೆಗಳನ್ನು ತಮ್ಮ ಸುಮಧುರ ಕಂಠಸಿರಿಯಲ್ಲಿ ಪ್ರಸ್ತುತಪಡಿಸಿದರು.

ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ಚಕೋರ ಉಡುಪಿ ಜಿಲ್ಲಾ ಸಂಚಾಲಕರಾದ ತಿಮ್ಮಪ್ಪ ಗುಲ್ವಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಜಯಪ್ರಕಾಶ ಶೆಟ್ಟಿ ಹೆಚ್. ಪ್ರಸ್ತಾವನೆ ಗೈದರು. ಚಕೋರ ಉಡುಪಿ ಜಿಲ್ಲಾ ಸಂಚಾಲಕರಾದ ಶಾಲಿನಿ ಯು.ಬಿ. ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ಕನ್ನಡ ಸಂಘದ ಅಧ್ಯಕ್ಷ ನಾಗರಾಜ ವೈದ್ಯ ಎಂ. ಸ್ವಾಗತಿಸಿ, ಕಾಲೆಜಿನ ಕನ್ನಡ ಸಂಘದ ಕಾರ್ಯದರ್ಶಿ ರಶ್ಮಿ ಉಡುಪ ವಂದಿಸಿದರು.

Exit mobile version