Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಮಳೆಗಾಲದ ಅವಧಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2025 ರ ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧವನ್ನು ಹೊರಡಿ ಆದೇಶವನ್ನು ಹೊರಡಿಸಿರುತ್ತದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ ಹಾಗೂ ಹವಾಮಾನದ ವೈರ‍್ಯತೆಯ ಮುನ್ಸೂಚನೆ ನೀಡಿದಲ್ಲಿ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಪಾಲಿಸಬೇಕು.

ಮೀನುಗಾರಿಕೆ ನಿಷೇಧ ಹಿನ್ನೆಲೆ, ಕಡ್ಡಾಯವಾಗಿ ಎಲ್ಲಾ ಬೋಟುಗಳು ಮೇ 31 ರ ಒಳಗಾಗಿ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡುವ ದೋಣಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು.

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version