Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಕೋಸ್ಟಲ್ ಬರ್ತ್ ಅಭಿವೃದ್ಧಿಪಡಿಸುವ ಕುರಿತು ಪರಿಸರ ಸಾರ್ವಜನಿಕ ಅಲಿಕೆ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಂಗಾರಕಟ್ಟೆಯಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿ, ಬಂದರು ಮತ್ತು ಮೀನುಗಾರಿಕೆ ವಿಭಾಗ, ಉಡುಪಿ ಇವರು ಸಾಗರಮಾಲ ಯೋಜನೆಯಡಿಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಸಂಚರಿಸುವ ವಾಣಿಜ್ಯ ಹಡಗುಗಳಿಗೆ ಸುರಕ್ಷಿತವಾಗಿ ತಂಗಲು ಆಶ್ರಯ ಕಲ್ಪಿಸಲು ಸಿಮೆಂಟ್, ಖಾದ್ಯತೈಲ ಮತ್ತು ಕೃಷಿ ಉತ್ಪನ್ನಗಳು ಮತ್ತು ಇತರ ವಾಣಿಜ್ಯ ಸರಕುಗಳನ್ನು ನಿರ್ವಹಿಸಲು, ಸುರಕ್ಷಿತ ಆಶ್ರಯ ಮತ್ತು ಸಂಗ್ರಹಣೆಗಾಗಿ ಬೇಡಿಕೆಗಳಿರುವುದರಿಂದ, ಸರಕು ಸಾಗಣೆಯ ಅನುಕೂಲಕ್ಕಾಗಿ 1.62 ಹೆಕ್ಟೇರ್ ಪ್ರದೇಶದಲ್ಲಿ ಕೋಸ್ಟಲ್ ಬರ್ತ್ ಅನ್ನು ಅಭಿವೃದ್ಧಿಪಡಿಸುವ ಕುರಿತು ಪರಿಸರ ಸಾರ್ವಜನಿಕ ಆಲಿಕೆ ಸಭೆಯು ಅಂದು ಹಂಗಾರಕಟ್ಟೆ ಫಿಶ್‌ರೀಸ್‌ನ ಜೆಟ್ಟಿ ಸಮೀಪದ ಹರಾಜು ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಜಿಲ್ಲಾಧಿಕಾರಿಗಳು ಪ್ರಸ್ತಾವಿತ ಯೋಜನೆಯ ಉದ್ದೇಶದ ಕುರಿತು ಸಾರ್ವಜನಿಕರಿಗೆ ತಿಳಿಸಿದರು. ನಂತರ ಯೋಜನಾದಾರರು ಯೋಜನೆಯ ಬಗ್ಗೆ ಶಕ್ತಿ ಬಿಂದು ಪ್ರದರ್ಶನ ನೀಡಿದರು. ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರ ಅಭಿಪ್ರಾಯ, ಅನಿಸಿಕೆ ಹಾಗೂ ಅಹವಾಲುಗಳನ್ನು ಸ್ವೀಕರಿಸಲಾಯಿತು.

ಸಭೆಯಲ್ಲಿ ಮೀನುಗಾರರ ಸಂಘದವರು ಹಾಗೂ ಬಂದರು ಅಭಿವೃದ್ಧಿ ಸಮಿತಿಯ ಸಂಘದವರು ಪ್ರಸ್ತಾಪಿತ ಯೋಜನೆಯ ಅಭಿವೃದ್ಧಿಗೆ ಯಾವುದೇ ಅಭ್ಯಂತರವಿರುವುದಿಲ್ಲ ಆದರೆ ಸದರಿ ಪ್ರಸ್ತಾಪಿತ ಸ್ಥಳದಲ್ಲಿ ಮೀನುಗಾರರ ದೋಣಿಯನ್ನು ಸಹ ನಿಲುಗಡೆ ಮಾಡಲು ಅವಕಾಶ ಮಾಡಕೊಡುವಂತೆ, ಅಳಿವೆಯಲ್ಲಿ 3.5ಮೀಟರ್ ಗಿಂತ ಹೆಚ್ಚಿನ ಹೂಳನ್ನು ತೆಗೆಯದಂತೆ, ಬ್ರೇಕ್ ವಾಟರ್ ನಿರ್ಮಿಸಲು ಹಾಗೂ ಸುತ್ತಮುತ್ತ ವಾಸದ ಕುಟುಂಬಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದ ರೀತಿಯಲ್ಲಿ ಯೋಜನೆಯನ್ನು ಮಾಡಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ ಪ್ರಾದೇಶಿಕ ಕಛೇರಿಯ ಪರಿಸರ ಅಧಿಕಾರಿ ಕೆ. ಕೀರ್ತೀ ಕುಮಾರ್, ಹಂಗಾರಕಟ್ಟೆ ಬೇಂಗ್ರೆ ಮೀನುಗಾರರ ಸಂಘದ ಅಧ್ಯಕ್ಷ ರಾಜು ಬಂಗೇರ, ಹಂಗಾರಕಟ್ಟೆ ಬೇಂಗ್ರೆ ಬಂದರು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೇಂದ್ರ ಸುವರ್ಣ, ಸಮಿತಿಯ ಸಲಹೆಗಾರರಾದ ಕೇಶವ್ ಕುಂದರ್, ಶಂಕರ್ ಬಂಗೇಜ್‌ ಹಾಗೂ ಉತ್ತರ ಕರ್ಕೇರ ಉಪಸ್ಥಿತರಿದ್ದರು.

Exit mobile version