Site icon Kundapra.com ಕುಂದಾಪ್ರ ಡಾಟ್ ಕಾಂ

ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ವೃತ್ತಿಯನ್ನು ಈ ಹಿಂದೆ ನಿರ್ವಹಿಸುತ್ತಿದ್ದವರಿಗೆ ಪುನರ್ವಸತಿ ಕಲ್ಪಿಸಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.   
ಉಡುಪಿ:
ಮಾನ್ಯುಯಲ್ ಸ್ಕ್ಯಾವೆಂಜರ್ಸ್ ವೃತ್ತಿಯನ್ನು ಈ ಹಿಂದೆ ನಿರ್ವಹಿಸುತ್ತಿದ್ದವರಿಗೆ ಸರಕಾರದ ವಿವಿಧ ಸೌಲಭ್ಯಗಳು ಸೇರಿದಂತೆ ಪುನರ್ವಸತಿ ಯೋಜನೆಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ದ್ವಿತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಯು ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಅನ್ನು ನೇಮಿಸಿಕೊಂಡು ಕೆಲಸ ಕಾರ್ಯವನ್ನು ಮಾಡಿಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದರು.

ಮಾನ್ಯುಯಲ್ ಸ್ಕ್ಯಾವೆಂಜರ್ ನಿಷೇಧ ವಿರುವ ಹಿನ್ನೆಲೆ, ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಹಾಗೂ ಜೆಟ್ಟಿಂಗ್ ಯಂತ್ರಗಳ ಬಳಕೆಯೊಂದಿಗೆ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು. ಮಲ ತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕ ರೀತಿಯಲ್ಲಿ ಎಫ್.ಎಸ್.ಎಂ.ಎಸ್ ಘಟಕಗಳಲ್ಲಿ ವಿಲೇವಾರಿ ಮಾಡಬೇಕು ಎಂದ ಅವರು, ಜಿಲ್ಲೆಯಲ್ಲಿ ಕೈಗೊಂಡಿರುವ ಎಫ್.ಎಸ್.ಎಂ.ಎಸ್ ಘಟಕ ಯೋಜನೆಗಳ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ ಅವುಗಳ ಬಳಕೆಯಾಗಲು ಸ್ಥಳೀಯ ಸಂಸ್ಥೆಗಳು ಕ್ರಮವಹಿಸಬೇಕು ಎಂದರು.

ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರುಗಳಿಗೆ ಪ್ರತೀ ಮಾಹೆಯ ವೇತನವನ್ನು ಸಕಾಲದಲ್ಲಿ ಪಾವತಿಸಬೇಕು. ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೇತನ ಪಾವತಿ, ಇ.ಎಸ್.ಐ ಹಾಗೂ ಪಿ.ಎಫ್ ಪಾವತಿ ಆಗುತ್ತಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು ಎಂದರು.

ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಅರ್ಹರಿಗೆ ವಸತಿ ಸೌಲಭ್ಯಗಳನ್ನು ಆದ್ಯತೆಯ ಮೇಲೆ ನೀಡಬೇಕು. ಜಿಲ್ಲೆಯಲ್ಲಿ ಕೆಲ ಪೌರಕಾರ್ಮಿಕರು ನಗರ ವ್ಯಾಪ್ತಿಯಿಂದ ಹೊರ ಭಾಗದಲ್ಲಿ ನಿವೇಶನವನ್ನು ಹೊಂದಿದ್ದಾರೆ. ಇವರುಗಳಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲು ನಿಯಮಾವಳಿಗಳಲ್ಲಿ ಬದಲಾವಣೆ ಅವಶ್ಯವಿದ್ದು, ಈ ಬಗ್ಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿ, ಅನುಮತಿ ಪಡೆದು ಅವರುಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೌರ ಕಾರ್ಮಿಕರು ದೈನಂದಿನ ಸ್ವಚ್ಛತಾ ಕಾರ್ಯದ ಕರ್ತವ್ಯ ನಿರ್ವಹಿಸುವಾಗ ತಪ್ಪದೆ ಸುರಕ್ಷತಾ ಪರಿಕರಗಳನ್ನು ಧರಿಸಿ, ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ತಪ್ಪಿದ್ದಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಇವುಗಳ ಬಗ್ಗೆ ಮೇಲುಸ್ತುವಾರಿಯನ್ನು ಅಧಿಕಾರಿಗಳು ವಹಿಸಬೇಕು ಎಂದರು.

ಸಫಾಯಿ ಕರ್ಮಚಾರಿಗಳಿಗೆ ವಿಶ್ರಾಂತಿ ಪಡೆಯಲು ಅನುಕೂಲವಾಗುವಂತೆ ವಿಶ್ರಾಂತಿ ಗೃಹಗಳ ನಿರ್ಮಾಣ ಹಾಗೂ ಅವುಗಳ ಬಳಕೆಯ ಬಗ್ಗೆ ಮಾಹಿತಿ ಪಡೆದ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್‌ಅಪ್ ಮಾಡಿಸಬೇಕು. ಅವರುಗಳಿಗೆ ವಿತರಿಸುವ ಉಪಾಹಾರವು ಪೌಷ್ಟಿಕತೆಯಿಂದ ಕೂಡಿರಬೇಕು ಎಂದರು.

ಪೌರಕಾರ್ಮಿಕರುಗಳ ಮಕ್ಕಳು ಉತ್ತಮ ಶಿಕ್ಷಣ ಹೊಂದಿ ಉನ್ನತ ಸ್ಥಾನಗಳನ್ನು ಹೊಂದಲು ಅನುಕೂಲವಾಗಲು ವಸತಿ ಶಾಲೆಗಳಿಗೆ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಪೌರಕಾರ್ಮಿಕರಲ್ಲಿ ಅರಿವು ಮೂಡಿಸಿ, ಇದರ ಸದ್ಬಳಕೆ ಆಗುವಂತೆ ಕ್ರಮವಹಿಸಬೇಕು. ಮುಂದಿನ ಸಭೆಯಲ್ಲಿ ಎಷ್ಟು ಜನ ವಿದ್ಯಾರ್ಥಿಗಳು ಇದರ ಸದ್ಭಳಕೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಪ್ರತಿಯೊಬ್ಬ ಪೌರಕಾರ್ಮಿಕರು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಅನುಕೂಲವಾಗಲಿದೆ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಸಮಿತಿಯ ಸದಸ್ಯರುಗಳಾದ ಪ್ರಶಾಂತಿ ಕೋಂ ವಸಂತ, ನಾಗರಾಜ ಬಿನ್ ರಮಾನಾಥ, ಕೊಟ್ರಿಬಾಯಿ ಹಾಗೂ ಶಂಕರ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Exit mobile version