Kundapra.com ಕುಂದಾಪ್ರ ಡಾಟ್ ಕಾಂ

ಅಪರಾಧ ತಡೆ ಜಾಗೃತಿ ಶಾಲಾ ಪಠ್ಯಗಳಲ್ಲೂ ಅಳವಡಿಸಿಕೊಳ್ಳಬೇಕಿದೆ: ರಾಜಶೇಖರ ವಿ. ಪಾಟೀಲ್

ಕುಂದಾಪುರ: ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಶಿಕ್ಷಣದೊಂದಿಗೆ ಅಪರಾಧ ತಡೆಯ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸುವುದು ಅತ್ಯಗತ್ಯ. ಪಠ್ಯಪುಸ್ತಕಗಳಲ್ಲಿ ಈ ಬಗ್ಗೆ ಒಂದು ಪಠ್ಯವನ್ನು ಮೀಸಲಿಡುವತ್ತ ಶಿಕ್ಷಣ ತಜ್ಞರು ಹಾಗೂ ಸರಕಾರ ಮನಸ್ಸು ಮಾಡಬೇಕಿದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ ವಿ. ಪಾಟೀಲ್ ಹೇಳಿದರು.

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಇಲ್ಲಿನ ಜ್ಯೂನಿಯರ್ ಕಾಲೇಜು ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಅಪರಾಧ ತಡೆ ಮಾಸಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ವ್ಯಕ್ತಿ, ವಿಚಾರ, ವ್ಯಕ್ತಿತ್ವದಲ್ಲಿ ವೈವಿಧ್ಯತೆ ವ್ಯತ್ಯಾಸ ಇದ್ದೇ ಇರುತ್ತದೆ. ವ್ಯತ್ಯಾಸವಿದ್ದಲ್ಲಿ ಸಂಘರ್ಷ ಸಾಮಾನ್ಯ. ಇದನ್ನು ಹೊರತಾದ ಸಮಾಜವನ್ನು ಕಾಣಲು ಸಾಧ್ಯವಿಲ್ಲ. ಸಂಪೂರ್ಣ ಅಪರಾಧರಹಿತ ಸಮಾಜವನ್ನು ನಿರೀಕ್ಷಿಸುವುದು ಸಾಧ್ಯವಿಲ್ಲ. ಆದರೆ ಅಪರಾಧ ನಿಯಂತ್ರಣ ಸಾಧ್ಯವಿದೆ. ಈ ಬಗ್ಗೆ ಅರಿವು ಮೂಡಿಸುವುದು ಜಾಗೃತಿ ಮೂಡಿಸುವುದು ಅಗತ್ಯ ಎಂದವರು ಹೇಳಿದರು.

ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷೆ ಡಾ| ಭವಾನಿ, ಜ್ಯೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ಸುಬ್ರಮಣ್ಯ ಜೋಷಿ ಅತಿಥಿಗಳಾಗಿ ಉಪಸ್ಥಿತರಿದ್ದರು. ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ ವೇದಿಕೆಯಲ್ಲಿದ್ದರು. ಕುಂದಾಪುರ ಪೊಲೀಸ್ ಉಪಾಧೀಕ್ಷಕ ಎಂ. ಮಂಜುನಾಥ ಶೆಟ್ಟಿ ಸ್ವಾಗತಿಸಿದರು. ಶಂಕರನಾರಾಯಣ ಪೊಲೀಸ್ ಠಾಣಾಧಿಕಾರಿ ದೇಜಪ್ಪ ಧನ್ಯವಾದಗೈದರು. ಕುಂದಾಪುರ ವೃತ್ತ ನಿರೀಕ್ಷಕ ದಿವಾಕರ ಕಾರ್ಯಕ್ರಮ ನಿರೂಪಿಸಿದರು.

Exit mobile version