Kundapra.com ಕುಂದಾಪ್ರ ಡಾಟ್ ಕಾಂ

ಗುಜ್ಜಾಡಿ: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಹಾಗೂ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಗ್ರಾಮ ಪಂಚಾಯತ್ ಗುಜ್ಜಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ಗುಜ್ಜಾಡಿ ಗ್ರಾಪಂ. ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಕಾರದೊಂದಿಗೆ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಹಾಗೂ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರವು ಇಲ್ಲಿನ ಗುಜ್ಜಾಡಿ ಗ್ರಾಮ ಪಂಚಾಯತ್‌ನ ಸಭಾಭವನದಲ್ಲಿ ಶನಿವಾರ ನಡೆಯಿತು.

ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರವು ಹಮ್ಮಿಕೊಂಡಿರುವ ಒಂದು ಪ್ರಮುಖ ಕಾರ್ಯಕ್ರಮವಾಗಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಬೆಳವಣಿಗೆಯ ಕುಂಠಿತವನ್ನು ಕಡಿಮೆ ಮಾಡುವುದು. ಗರ್ಭಿಣಿಯರು, ಹದಿಹರೆಯದ ಹೆಣ್ಣುಮಕ್ಕಳು ಮತ್ತು ಮಕ್ಕಳಲ್ಲಿ ರಕ್ತಹೀನತೆಯನ್ನು ಕಡಿಮೆ ಮಾಡುವುದು. ಪೌಷ್ಟಿಕ ಆಹಾರದ ಬಗ್ಗೆ ಮತ್ತು ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮ ಮುಖ್ಯ ಉದ್ದೇಶ ಎಂದು ಹೇಳಿದರು.

ಆರೋಗ್ಯ ಶಿಕ್ಷಣ ಅಧಿಕಾರಿ ಭಾಗ್ಯಲಕ್ಷ್ಮೀ ಮಾಹಿತಿ ನೀಡಿದರು. ಗರ್ಭಿಣಿಯರಿಗೆ ಸೀಮಂತ ಪೂಜೆ ನೆರವೇರಿಸಲಾಯಿತು. ಪೌಷ್ಟಿಕಾಂಶಭರಿತ ತಿಂಡಿಗಳ ಪ್ರದರ್ಶನ ನಡೆಯಿತು.

ಗ್ರಾ.ಪಂ. ಸದಸ್ಯರಾದ ವಿಹರೀಶ ಮೇಸ್ತ, ರಾಜು ಪೂಜಾರಿ, ತುಂಗಾ ಪೂಜಾರ‍್ತಿ, ಭಾರತಿ, ಲೋಲಾಕ್ಷಿ ಪಂಡಿತ್, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ದಾನಿ ಮಂಜುನಾಥ, ತಾಲೂಕು ಸಂಯೋಜಕ ಮಂಜು ಮಾವಿನಕಟ್ಟೆ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

ಅಂಗನವಾಡಿ ವಲಯ ಮೇಲ್ವಿಚಾರಕಿ ರೇಖಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಂಗನವಾಡಿ ಕಾರ್ಯಕರ್ತೆ ಸಾವಿತ್ರಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ನಿರೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Exit mobile version