ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಗ್ರಾಮೀಣ ಒಳಭಾಗದಲ್ಲಿ ಆರೋಗ್ಯ ಕೇಂದ್ರಗಳ ಅಗತ್ಯತೆ ಇದ್ದು ಈ ನಿಟ್ಟಿನಲ್ಲಿ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿವೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಕೋಟತಟ್ಟು ಪಡುಕರೆಯಲ್ಲಿ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಆಯುಷ್ಮಾನ್ ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸಗೈದು ಮಾತನಾಡಿದರು. ಜನಸಾಮಾನ್ಯರ ಆರೋಗ್ಯದ ಬಗ್ಗೆ ಸರಕಾರ ಸದಾ ಕಾಳಜಿ ವಹಿಸುತ್ತಿದ್ದು, ಸ್ಥಳೀಯಾಡಳಿತ ಮುತುವರ್ಜಿಯಲ್ಲಿ ಉಪಕೇಂದ್ರ ನಿರ್ವಹಣೆ ನಮ್ಮ ಕ್ಲಿನಿಕ್ ಆಗಿ ಪರಿವರ್ತನೆಗೊಳ್ಳಲಿ ಎಂದು ಹಾರೈಸಿದರು.

ಕೋಟತಟ್ಟು ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ್ ಸಿ. ಕುಂದರ್, ಮನೋವೈದ್ಯ ಡಾ. ಪ್ರಕಾಶ್ ಸಿ. ತೋಳಾರ್, ಕೋಟ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ, ಕೋಟತಟ್ಟು ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ ಪೂಜಾರಿ, ಸ್ಥಳೀಯರಾದ ಅಬ್ದುಲ್ ಖಾದರ್, ಪಂಚಾಯತ್ ಸದಸ್ಯರು, ಮಾಜಿ ಅಧ್ಯಕ್ಷ, ಉಪಾಧ್ಯಕ್ಷರು, ಸ್ಥಳೀಯ ಗ್ರಾಮದ ಗಣ್ಯರು ಉಪಸ್ಥಿತರಿದ್ದರು.
ವಾರ್ಡ್ ಸದಸ್ಯರಾದ ರವೀಂದ್ರ ತಿಂಗಳಾಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಾಡ್೯ ಸದಸ್ಯೆ ವಿದ್ಯಾ ಎಸ್ ಸಾಲಿಯಾನ್ ನಿರೂಪಿಸಿ, ವಂದಿಸಿದರು. ಧಾರ್ಮಿಕ ವಿಧಿವಿಧಾನಗಳನ್ನು ಅಕ್ಷಯ ಹಂದೆ ನಿರ್ವಹಿಸಿದರು.