ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಈ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷಿನ್ ಯೋಜನೆಯಡಿ ಹೈಬ್ರಿಡ್ ತರಕಾರಿ ಪ್ರದೇಶ ವಿಸ್ತರಣೆ ಕೈಗೊಂಡ ರೈತರಿಗೆ ಶೇ. 50 ರ ಸಹಾಯಧನ, ಕೃಷಿ ಯಾಂತ್ರೀಕರಣ ಉಪ ಅಭಿಯಾನ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಡಿ ತೋಟಗಾರಿಕೆ ಯಾಂತ್ರಿಕರಣ ಕಾರ್ಯಕ್ರಮದಡಿ ಅನುಮೋದಿತ ವಿವಿಧ ಯಂತ್ರೋಪಕರಣಗಳಿಗೆ ಶೇ. 40/50 ರ ಸಹಾಯಧನ, ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ/ತುಂತುರು ನೀರಾವರಿ ಅಳವಡಿಕೆಗೆ ಶೇ. 90 ರಷ್ಟು ಸಹಾಯಧನ ಲಭ್ಯವಿದ್ದು, ಸಹಾಯಧನ ಪಡೆಯಲು ಕಛೇರಿಯಲ್ಲಿ ಅರ್ಜಿ ಸಲ್ಲಿಸಿ ಕಾರ್ಯಾದೇಶ ಪಡೆದು ಇಲಾಖೆಯಿಂದ ಅನುಮೋದಿತ ಡೀಲರ್ ಗಳ ಮೂಲಕ ರೈತರು ಹನಿ ನೀರಾವರಿ ಅಳವಡಿಸಿಕೊಂಡು ಸಹಾಯಧನ ಪಡೆಯಬಹುದಾಗಿದೆ.
ಭವಿಷ್ಯದ ಬೆಳೆಯಾದ ತಾಳೆ ಬೆಳೆಗಾಗಿ ತಾಳೆಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಉಚಿತ ವಿತರಣೆಯೊಂದಿಗೆ 4 ವರ್ಷಗಳ ಕಾಲ ನಿರ್ವಹಣಾ ವೆಚ್ಚ ಪಾವತಿ ಹಾಗೂ ತಾಳೆ ಬೆಳೆ ಬೆಳೆಯುವ ರೈತರಿಗೆ ಬೋರ್ವೆಲ್, ಬಾವಿ ನಿರ್ಮಿಸಿಕೊಳ್ಳಲು, ವಿದ್ಯುತ್/ಡೀಸೆಲ್ ಪಂಪ್ ಮತ್ತು ಯಂತ್ರೋಪಕರಣ ಖರೀದಿಗೆ ಸಹಾಯಧನ ಹಾಗೂ ಮಹಾತ್ಮ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಹಾಗೂ ಪೌಷ್ಠಿಕ ತೋಟಗಳ ನಿರ್ಮಾಣಕ್ಕೆ ಅವಕಾಶವಿರುತ್ತದೆ.
ಈ ಎಲ್ಲಾ ಯೋಜನೆಗಳ ಪ್ರಯೋಜನೆ ಪಡೆಯಲು ಆಸಕ್ತ ರೈತರು ಪ್ರಥಮ ಹಂತದಲ್ಲಿ ನೋಂದಣಿ ಅರ್ಜಿಯೊಂದಿಗೆ ಬೆಳೆ ನಮೂದಿಸಿರುವ ಇತ್ತೀಚಿನ ಪಹಣಿ ಪತ್ರ ಮತ್ತು ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಇಲಾಖಾ ಮಾರ್ಗಸೂಚಿಯನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರದ ಅಧಿಕಾರಿಗಳನ್ನು ಹಾಗೂ ತೋಟಗಾರಿಕೆ ಇಲಾಖೆ, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

