Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಪಲ್ಸ್ ಪೊಲಿಯೋ ಕಾರ್ಯಕ್ರಮವು ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಲಸಿಕಾ ಕೇಂದ್ರಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 5 ರ ವರೆಗೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ತಪ್ಪದೇ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು.

ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟೀಯ ಪಲ್ಸ್ ಪೊಲೀಯೋ ಕಾರ್ಯಕ್ರಮದಡಿಯಲ್ಲಿ ಡಿಸೆಂಬರ್ 21ರ ಭಾನುವಾರದಂದು 0-5 ವರ್ಷದೊಳಗಿನ ಮಕ್ಕಳಿಗೆ ಜಿಲ್ಲೆಯ ಸುಮಾರು 657 ಲಸಿಕಾ ಕೇಂದ್ರಗಳಲ್ಲಿ ಪೊಲೀಯೋ ಹನಿಗಳನ್ನು ಹಾಕಲಾಗುವುದು ಎಂದ ಅವರು, ಎಲ್ಲ ಮಕ್ಕಳಿಗೂ ಪಲ್ಸ್ ಪೊಲೀಯೋ ಲಸಿಕೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಒಟ್ಟು 75,395 ಐದು ವರ್ಷದೊಳಗಿನ ಮಕ್ಕಳನ್ನು ಈಗಾಗಲೇ ಗುರುತಿಸಲಾಗಿದೆ. ಮಕ್ಕಳಿಗೆ ಲಸಿಕೆಗಳನ್ನು ನೀಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳ ಜೊತೆಯಲ್ಲಿ ಟ್ರಾನ್ಸಿಟ್ 16 ಬೂತುಗಳು, 5 ಮೊಬೈಲ್ ಟೀಮ್‌ಗಳಿದ್ದು, 2180 ಲಸಿಕೆದಾರರು ಹಾಗೂ 155 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ನಗರಸಭಾ ವ್ಯಾಪ್ತಿಯಲ್ಲಿ 272 ಸ್ವಯಂ ಸೇವಕರನ್ನು ನಿಯುಕ್ತಿಗೊಳಿಸಲಾಗಿದ್ದು ಲಸಿಕೆದಾರರಿಗೆ ಲಸಿಕೆ ನೀಡುವ ಬಗ್ಗೆ ತರಬೇತಿ ನೀಡಲಾಗಿದೆ ಎಂದರು.

ಲಸಿಕಾ ದಿನದಂದು ಲಸಿಕೆ ನೀಡಲು ಗುರುತಿಸಲಾದ ಶಾಲೆಗಳನ್ನು ತೆರೆದು ಲಸಿಕೆ ನೀಡಲು ಸಜ್ಜುಗೊಳಿಸಲು, ಲಸಿಕೆ ಸಾಗಾಣಿಕೆಗೆ ಅಗತ್ಯವಿರುವ ವಾಹನಗಳನ್ನು ನಿಯುಕ್ತಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಲಸಿಕೆಯ ಸುರಕ್ಷಿತ ದಾಸ್ತಾನಿನ ಬಗ್ಗೆ ಗಮನ ಹರಿಸಿ ಲಸಿಕೆ ಹಾಳಾಗದಂತೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಲಸಿಕೆಯ ಸುರಕ್ಷಿತ ವಿತರಣೆಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ಲಸಿಕಾ ದಿನದಂದು ಲಸಿಕೆಯಿಂದ ಹೊರಗುಳಿದ ಮಕ್ಕಳಿಗೆ ಗ್ರಾಮೀಣ ಭಾಗದಲ್ಲಿ ಡಿಸೆಂಬರ್ 22 ರಿಂದ 23 ರ ವರೆಗೆ ಹಾಗೂ ನಗರ ಭಾಗಗಳಲ್ಲಿ ಡಿ. 22 ರಿಂದ 24 ರ ವರೆಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಮನೆ-ಮನೆಗೆ ತೆರಳಿ ಲಸಿಕೆ ಹಾಕಲಿದ್ದು, ಅವರಿಗೆ ಅಗತ್ಯ ಸಹಕಾರ ನೀಡಬೇಕು ಎಂದ ಇದಕ್ಕಾಗಿ ಒಟ್ಟು 1314 ತಂಡಗಳು 2,94,250 ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡಲಿದ್ದಾರೆ ಎಂದರು.

ವಲಸೆ, ಕಟ್ಟಡ ಹಾಗೂ ಮತ್ತಿತರ ಕೂಲಿ ಕಾರ್ಮಿಕರ ಮಕ್ಕಳು ಲಸಿಕಾ ಕಾರ್ಯಕ್ರಮದಿಂದ ಹೊರಗೆ ಉಳಿಯದಂತೆ ಹೆಚ್ಚು ಜಾಗೃತಿ ಮೂಡಿಸಬೇಕು. ಲಸಿಕಾ ದಿನದಂದು ಮಕ್ಕಳಿಗೆ ಲಸಿಕೆ ತಪ್ಪಿದಲ್ಲಿ ಮರು ದಿನ ಲಸಿಕೆ ಹಾಕಿಸುವಂತೆ ಪೋಷಕರಿಗೆ ಮಾಹಿತಿ ನೀಡಬೇಕು ಎಂದ ಅವರು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಪ್ರಚಾರ ನೀಡಬೇಕು. ಪಲ್ಸ್ ಪೊಲೀಯೋ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ನಿರ್ವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮದ ಕುರಿತು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ. ಲತಾ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Exit mobile version