ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿದ್ಯಾರ್ಥಿಗಳು ಪಾಠದ ಜೊತೆಗೆ ಪಾಠೇತರ ಚಟುವಟಿಕೆಗಳಲ್ಲಿ ಕೂಡ ಹೆಚ್ಚು ತೊಡಗಿಸಿಕೊಳ್ಳಬೇಕು. ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಆಗಿ ವಿದ್ಯಾರ್ಥಿ ಜೀವನ ಉಜ್ವಲವಾಗಲು ಸಹಾಯಕವಾಗುತ್ತದೆ. ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳಲ್ಲಿ ಅತ್ಯುತ್ತಮ ವಿದ್ಯಾಭ್ಯಾಸ ದೊರೆಯುತ್ತಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯುವಲ್ಲಿ ಸಫಲರಾಗಿದ್ದಾರೆ ಎಂದು ಉದ್ಯಮಿ ಶಿವಾನಂದ ಗಾಣಿಗ ಹೇಳಿದರು.
ಅವರು ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಜರಗಿದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಗಾಣಿಗ ಬಹುಮಾನ ವಿತರಿಸಿದರು. ಶಾಲೆಯ ಹಳೆ ವಿದ್ಯಾರ್ಥಿ ಶ್ರೀದೇವಿ ಮಧ್ಯಸ್ಥ ಸ್ವಸ್ತಿ ವಾಚನಗೈದರು. ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ. ವಿಠಲ ಶೆಣೈ, ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಶುಭ ಹಾರೈಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟ, ಕನ್ನಡ ಮಾಧ್ಯಮ ಶಾಲೆಯ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಶಾಲಾ ವಿದ್ಯಾರ್ಥಿ ನಾಯಕ ಕಾರ್ತಿಕ್ ಉಪಸ್ಥಿತರಿದ್ದರು.
ಇದೇ ಸಂದರ್ಭ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದ ಸುಶ್ಮಿತಾ ಎಸ್. ಗಾಣಿಗ ಮತ್ತು 7ನೇ ರ್ಯಾಂಕ್ ಪಡೆದ ಮನಾಲಿ ಎಂ. ಮತ್ತು ಕೊಳಲು ವಾದನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಾಮ್ ಜಿ.ಎನ್. ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಶಾಲೆಯ ಸಂಚಾಲಕ ಎನ್. ಸದಾಶಿವ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಶ್ರೀನಿವಾಸ ಪೈ ಸಂದೇಶ ವಾಚಿಸಿದರು. ಕೃತಿ ಎನ್.ಕೆ. ಅತಿಥಿಗಳನ್ನು ಪರಿಚಯಿಸಿದರು. ಪ್ರಥ್ವಿ ಆರ್. ಚಿತ್ತಾಲ್ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿಯರಾದ ದಿವ್ಯಶ್ರೀ, ಜ್ಯೋತಿ ಮತ್ತು ಸುಜಾತಾ ಮಕ್ಕಳ ಪಟ್ಟಿ ವಾಚಿಸಿದರು. ಶಿಕ್ಷಕಿಯರಾದ ಶಾಂತಿ ಡಿಕೋಸ್ಟ ಮತ್ತು ರೇಷ್ಮಾ ನಾಯಕ್ ಸಹಕರಿಸಿದರು. ವಿದ್ಯಾರ್ಥಿನಿ ಜಿ. ವರ್ಷಾ, ವಿ. ಶೆಣೈ ವಂದಿಸಿದರು.