Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಸುವರ್ಣ ಮಹೋತ್ಸವ ಸಮಾರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ :
ಕೆಲವೊಂದು ಸಂಘ ಸಂಸ್ಥೆಗಳು ಬೇರೆ ಬೇರೆ ಉದ್ದೇಶಗಳನ್ನು ಇಟ್ಟುಕೊಂಡು ಕಾರ್ಯಕ್ರಮ ಆಯೋಜಿಸಿ ಹಣ ಸಂಗ್ರಹಿಸುವ ಕೆಲಸ ಮಾಡುತ್ತಿದ್ದರೆ, ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಸದಸ್ಯರು ತಾವೇ ಹಣವನ್ನು ಹಾಕಿ ಉತ್ತಮ ಕಾರ್ಯಕ್ರಮಗಳನ್ನು ಸಮಾಜಕ್ಕೆ ನೀಡುವ ಮೂಲಕ, ತಾವೂ ಬೆಳೆದು ಸಮಾಜಕ್ಕೂ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ. ಬಾಬು ಹೆಗ್ಡೆ ಹೇಳಿದರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗುರುವಾರ ಜರಗಿದ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಉಮೇಶ ಪುತ್ರನ್ ಮಾತನಾಡಿ, ಕ್ರೀಡೆಯಲ್ಲಿ ಅಭಿವೃದ್ಧಿ ಹೊಂದಬೇಕಿದ್ದರೆ ದೇಶ ಅಭಿವೃದ್ಧಿ ಹೊಂದಬೇಕು. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ. ಆದರೆ ದೇಶದಲ್ಲಿ ಕ್ರೀಡೆಯ ಯಶಸ್ಸು ಕಾಣುತ್ತಿರುವುದು ಕಡಿಮೆ ಇದೆ ಎಂದರು.

ಕುಂದಾಪುರದ ಉದ್ಯಮಿ ವಿನಾಯಕ ಪೈ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ದೀಕ್ಷಿತ್ ಮೇಸ್ತ ಶುಭ ಹಾರೈಸಿದರು. ಸಂಸ್ಥೆಯ ಸ್ಥಾಪಕ ಸದಸ್ಯರಾದ ಎಂ. ಜಿ. ಜಗದೀಶ ಭಂಡಾರ್‌ಕಾರ್, ಕೆ. ಗೋಪಾಲಕೃಷ್ಣ ನಾಯಕ್, ಯು. ಸುರೇಶ ಪೈ, ಉದಯಶಂಕರ ರಾವ್, ಗಣಪತಿ ಖಾರ್ವಿ, ಮಾಲತಿ ನಾರಾಯಣ ಪೈ ಉಪಸ್ಥಿತರಿದ್ದರು.

ಇದೇ ಸಂದರ್ಭ ಸಾಧಕ ಕ್ರೀಡಾಪಟುಗಳಾದ ಗುರುದೀಪಕ್ ಕಾಮತ್ ಮತ್ತು ವೈಷ್ಣವಿ ಖಾರ್ವಿ ಅವರನ್ನು ಸಮ್ಮಾನಿಸಲಾಯಿತು. ಸಂಸ್ಥೆಯ ಸ್ಥಾಪಕ ಸದಸ್ಯರನ್ನು ಹಾಗೂ ಮಾಜಿ ಅಧ್ಯಕ್ಷರನ್ನು ಮತ್ತು ದಾನಿಗಳನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್‌ನ್ನು ಕೊಡುಗೆಯಾಗಿ ನೀಡಲಾಯಿತು.

ಮಾಜಿ ಅಧ್ಯಕ್ಷ ಜಿ.ಕೆ. ಶೀನ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್. ನಾಗರಾಜ ನಾಯಕ್ ಮತ್ತು ವಿಜೇಶ ಪಡಿಯಾರ್ ಸನ್ಮಾನಿತರನ್ನು ಪರಿಚಯಿಸಿದರು. ಎಂ. ಅನಂತ ಪೈ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸಂಘದ ಅಧ್ಯಕ್ಷ ಜಿ. ವೆಂಕಟೇಶ ಶೆಣೈ ಸ್ವಾಗತಿಸಿ, ಮಾಜಿ ಅಧ್ಯಕ್ಷ ಬಿ. ರಾಘವೇಂದ್ರ ಪೈ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಕೆ. ಹರೀಶ ನಾಯಕ್ ವಂದಿಸಿದರು.

Exit mobile version