ಕುಂದಾಪ್ರ ಡಾಟ್ ಕಾಂ ಸುದ್ದಿ.
ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಕೃತಕ ಆಭರಣಗಳ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುನಿಯಾಲು ನಿವೃತ್ತ ಪ್ರೈಮರಿ ಶಾಲೆಯ ಶಿಕ್ಷಕರಾದ ಸುಬ್ರಹ್ಮಣ್ಯ ವಿ. ರಾವ್ ಅವರು ಮಹಿಳೆಯರ ಕೃತಕ ಆಭರಣಗಳ ತಯಾರಿಕೆ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲೂ ಒಂದೊಂದು ರೀತಿಯ ಕಲೆ ಇರುತ್ತದೆ. ವಿಭಿನ್ನವಾಗಿ ಯೋಚಿಸುವ ಸಾಮರ್ಥ್ಯವಿರುತ್ತದೆ. ಸಾಕಷ್ಟು ಜನ ಅವರ ಸಾಮರ್ಥ್ಯವನ್ನು ಹುಡುಕಲು, ಯೋಚಿಸಲು ಕೂಡ ಮುಂದೆ ಬರುವುದಿಲ್ಲ. ಹಾಗಾಗಿ ಅಂಥವರು ಏನನ್ನು ಸಾಧಿಸಲು ಸಾಧ್ಯವಾಗುವುದಿಲ್ಲ. ನಾವು ಯಶಸ್ಸನ್ನು ಏರಬೇಕೆಂದರೆ ಈಗಾಗಲೇ ಇರುವ ವಿಷಯಗಳನ್ನು ಕೈಗೆತ್ತಿಕೊಳ್ಳುವ ಬದಲು, ಹೊಸತನ ಹಾಗೂ ವಿಭಿನ್ನವಾಗಿ ಯೋಚಿಸುವುದು ತುಂಬ ಅಗತ್ಯವಾಗಿರುತ್ತದೆ.

ಹಾಗೆಯೇ, ತರಬೇತಿ ಅವಧಿಯಲ್ಲಿ ಶಿಬಿರಾರ್ಥಿಗಳು ತಯಾರಿಸಿದ ಕೃತಕ ಆಭರಣಗಳನ್ನು ಗಮನಿಸಿ, ಸಂತೋಷ ವ್ಯಕ್ತಪಡಿಸಿದರು. ಹಾಗೆಯೇ ಇದೇ ರೀತಿ ನಿಮ್ಮಲ್ಲಿರುವ ಹೊಸ ಆಲೋಚನೆಗಳನ್ನು ಹೊಸತನಕ್ಕೆ ಪೂರಕವಾಗಿ, ಕನಸಿನ ಬೆನ್ನತ್ತಿ, ಸಮಾಜದಲ್ಲಿ ಯಶಸ್ವಿ ಉದ್ಯಮಿಗಳಾಗಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಅದೇ ರೀತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ. ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ತಳಮಟ್ಟದ ತರಬೇತಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ನಿಮ್ಮಲ್ಲಿರುವ ಆಸಕ್ತಿಯನ್ನು ಇನ್ನೂ ಹೆಚ್ಚಿನ ಮಟ್ಟಿಗೆ ಅಭಿವೃದ್ಧಿ ಪಡಿಸಿಕೊಳ್ಳಿ, ಅವಕಾಶವನ್ನು ಉಪಯೋಗಿಸಿಕೊಳ್ಳಿ ಹಾಗೂ ಸಾಧ್ಯವಾದಲ್ಲಿ ನಿರ್ಮಿಸಿಕೊಳ್ಳಿ.
ಸಂಸ್ಥೆಯೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಿ. ಮುಂದಿನ ದಿನಗಳಲ್ಲಿ ಸಂಸ್ಥೆಯಲ್ಲಿ ಹೆಚ್ಚಿನ ತರಬೇತಿಗಳು ನಡೆಯುತ್ತವೆ. ಅವುಗಳ ಬಗೆ ನಿಮ್ಮ ಪ್ರೀತಿ ಪಾತ್ರರಲ್ಲಿ ವಿಷಯವನ್ನು ಹಂಚಿಕೊಳ್ಳಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಕಛೇರಿ ಸಹಾಯಕರಾದ ಚೈತ್ರ ಕೆ. ನಿರೂಪಿಸಿ, ಸ್ವಾಗತಿಸಿದರು. ಹಿರಿಯ ಉಪನ್ಯಾಸಕರಾದ ಸಂತೋಷ್ ಶೆಟ್ಟಿ ವಂದಿಸಿದರು.