ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯನ್ನು ಆಚರಿಸಲಾಯಿತು.
ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾದ ಶಿವಕುಮಾರ್ ಅವರು ಮಾತನಾಡಿ, ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ/ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯ ನುಡಿ ಗಳೊಂದಿಗೆ, ಅದನ್ನು ಹೋಗಲಾಡಿಸುವಲ್ಲಿ ಯುವಜನತೆಯ ಜವಾಬ್ದಾರಿ ಮಹತ್ತರವಾದುದು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾನೂನಿನ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಕಾನೂನಿನ ಅರಿವನ್ನು ಮೂಡಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಪೋಕ್ಸೋ ಕಾನೂನು, ಸಂಚಾರ ನಿಯಮಗಳ ಬಗ್ಗೆ ಅರಿವು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಆಗುವ ಸಮಸ್ಯೆಗಳ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅವರು “ದೇಶದ ಕಾನೂನಿಗೆ ನಾವೆಲ್ಲರೂ ತಲೆಬಾಗಿ ಅದನ್ನು ಪರಿಪಾಲಿಸಿದಾಗ ನಮಗೆ ಆತಂಕಗಳಿಲ್ಲ ನಾವೆಲ್ಲರೂ ಸುರಕ್ಷಿತ” ಎಂದು ನುಡಿದರು.
ವೇದಿಕೆಯಲ್ಲಿ ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್, ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಸಂತೋಷ್ ನಿರೂಪಿಸಿ, ವಂದಿಸಿದರು.










