ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಪಾಧ್ಯಕ್ಷ ಕಾರ್ಮಿಕ ಸಂಘಟನೆಗಳ ಮುಖಂಡ ಕೋಣಿ ವೆಂಕಟೇಶ ನಾಯಕ್ (74) ಗುರುವಾರ ನಿಧನರಾದರು.
ತಾಲ್ಲೂಕಿನ ಕೋಣಿ ಗ್ರಾಮದವರಾದ ವೆಂಕಟೇಶ ನಾಯಕ್, ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದೇಹದಾನದ ಘೋಷಣೆ ಮಾಡಿದ್ದರಿಂದ ಅವರ ಮೃತದೇಹವನ್ನು ಕೆಎಂಸಿ ಆಸ್ಪತ್ರೆಗೆ ನೀಡಲಾಗುತ್ತಿದೆ.
ವೆಂಕಟೇಶ ನಾಯಕ್ ಕಮ್ಯುನಿಸ್ಟ್ ಚಳವಳಿಗಾಗಿ ತಮ್ಮ ಜೀವನವನ್ನು ಮುಡುಪಾಗಿರಿಸಿದ್ದರು. ಉಡುಪಿ ಜಿಲ್ಲಾ ಸಿಪಿಐ (ಎಂ) ಕಾರ್ಯದರ್ಶಿ ಮಂಡಳಿಯ ಸದಸ್ಯರಾಗಿಯೂ ಕೆಲಸ ನಿರ್ವಹಿಸಿದ್ದರು. ವಿದ್ಯಾರ್ಥಿ ದಿಶೆಯಲ್ಲಿ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದರು. ಭೂ ಮಾಲೀಕರ ದೌರ್ಜನ್ಯಗಳ ವಿರುದ್ಧ ನಡೆದ ಹೋರಾಟದ ಸಂದರ್ಭದಲ್ಲಿ ಅವರ ಮೇಲೆ ಆ್ಯಸಿಡ್ ದಾಳಿ ನಡೆದಿತ್ತು.










