ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟೇಶ್ವರ: ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರೌಢಶಾಲಾ ವಿಭಾಗ, ಕೋಟೇಶ್ವರ ಇಲ್ಲಿನ ಪ್ರತಿಭಾವಂತ ವಿದ್ಯಾರ್ಥಿನಿ ಮಹಾಲಕ್ಷ್ಮಿ ಸಿ.ಜೆ. ಅವರು ದೆಹಲಿಯ ಮಹತ್ವದ ಸಂಸತ್ ಭವನದಲ್ಲಿ ನಡೆಯಲಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾಗಿರುವುದು ಶಾಲೆಗೆ ಹಾಗೂ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ.
ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ ಕೇವಲ 11 ವಿದ್ಯಾರ್ಥಿಗಳಲ್ಲಿ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಏಕೈಕ ವಿದ್ಯಾರ್ಥಿನಿಯಾಗಿ ಮಹಾಲಕ್ಷ್ಮಿ ಆಯ್ಕೆಯಾಗಿರುವುದು ವಿಶೇಷ ಸಾಧನೆಯಾಗಿದೆ. ಇವಳು ಎ.13ರಂದು ವಿಮಾನದ ಮೂಲಕ ದೆಹಲಿಗೆ ಪ್ರಯಾಣಿಸಲಿದ್ದಾರೆ.
ಇವರ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕರು ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಸಾಧಿಸಲಿ ಎಂದು ಹಾರೈಸಿದ್ದಾರೆ.
ಸಮಾಜ ಸೇವಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು, ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರೇರಣೆಯಾಗಿ ಈ ಅವಕಾಶ ಪರಿಣಮಿಸಲಿ ಎಂದು ಆಶಿಸಿದ್ದಾರೆ.










