ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮುಂಗಾರು ಮಳೆಗಾಲದಲ್ಲಿ ಅತಿವೃಷ್ಠಿಯಿಂದಾಗಿ ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಅಗತ್ಯ ರೀತಿಯ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಮಾನವ ಹಾಗೂ ಜಾನುವಾರುಗಳಿಗೆ ಪ್ರಾಣಾಪಾಯಗಳು ಹಾಗೂ ಇತರೆ ಯಾವುದೇ ರೀತಿಯ ಹಾನಿಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಬರುವ ಮುಂಗಾರು ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಜನಸಾಮಾನ್ಯರ ದೈನಂದಿನ ಚಟುವಟಿಕೆಗಳಿಗೆ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಮಳೆಯಿಂದ ರಸ್ತೆಗಳು, ಹಾಳಾಗಿ ಜನರ ಸುಗಮ ಸಂಚಾರಕ್ಕೆ ವ್ಯತ್ಯಯ ವಾಗದಂತೆ ಕ್ರಮವಹಿಸಬೇಕು. ಕಾಲುಸಂಕಗಳ ಬಳಕೆಯ ಸಂದರ್ಭದಲ್ಲಿ ಜಾರಿಬಿದ್ದು, ಅನಾಹುತಗಳು ಆಗದಂತೆ ಕ್ರಮವಹಿಸಬೇಕು. ಈಗಿನಿಂದಲೇ ಜಂಗಲ್ ಕ್ಲಿಯರೆನ್ಸ್ ಮಾಡುವುದರೊಂದಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಕಂಬಗಳು ಬಿದ್ದು ವಿದ್ಯುಚ್ಛಕ್ತಿಯಲ್ಲಿ ಅಡಚಣೆಯಾದಾಗ ಶೀಘ್ರದಲ್ಲಿಯೇ ಮರು ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾಗಬೇಕು ಅಪಾಯಕಾರಿ ಮರಗಳ ತೆರವಿಗೆ ಕ್ರಮವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಯಾವುದೇ ರೀತಿಯ ಸರಕಾರಿ ಸಭೆ, ಸಮಾರಂಭಗಳು ಆಯೋಜಿಸಿ, ಆಹ್ವಾನ ಪತ್ರಿಕೆ ಮುದ್ರಿಸುವಾಗ ಸರಕಾರ ಸೂಚಿಸಿರುವ ಹಾಗೆ ಶಿಷ್ಠಾಚಾರದ ಪ್ರಕಾರ ಜನಪ್ರತಿನಿಧಿಗಳ ಹೆಸರನ್ನು ನಮೂದಿಸಬೇಕು. ಕಾರ್ಯಕ್ರಮ ಮಾಡುವಾಗ ಸ್ಥಳೀಯ ಶಾಸಕರುಗಳ ಗಮನಕ್ಕೆ ತರಬೇಕು. ಈ ಬಗ್ಗೆ ಕಳೆದ ಸಭೆಯಲ್ಲಿ ಸೂಚಿಸಿದ್ದರೂ ಸಹ ಪಾಲನೆ ಆಗುತ್ತಿಲ್ಲ ಎಂಬ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಕಾರ್ಕಳ ತಹಶೀಲ್ದಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಶಿಷ್ಠಾಚಾರ ಉಲ್ಲಂಘಿಸಿದ ಬಗ್ಗೆ ಕಾರಣ ಕೇಳಿ ನೋಟೀಸ್ ನೀಡುವಂತೆ ಸೂಚಿಸಿದ ಅವರು, ಮುಂಬರುವ ದಿನಗಳಲ್ಲಿ ಇದು ಪುನರಾವರ್ತಿತ ಆದಲ್ಲಿ ಅಂತಹ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಶಾಲಾ-ಕಾಲೇಜುಗಳ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲು 430 ಕೋಟಿ ರೂ. ವೆಚ್ಚದಲ್ಲಿ 186 ವಿವಿಧ ರೀತಿಯ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಆದರೆ ಈವರೆಗೂ ಸಹ 45 ಕಾಮಗಾರಿಗಳು ಪೂರ್ಣಪ್ರಮಾಣದಲ್ಲಿ ಆಗಿರುವುದಿಲ್ಲ. ಮಳೆಗಾಲ ಪ್ರಾರಂಭಕ್ಕೂ ಮುನ್ನ ಇವುಗಳನ್ನು ಪೂರ್ಣಗೊಳಿಸಬೇಕು ಎಂದ ಅವರು, ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ಬಿಸಿಯೂಟದ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಅಪಘಾತ ಸೇರಿದಂತೆ ಮತ್ತಿತರ ತುರ್ತು ಸಂದರ್ಭಗಳಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸರಕಾರ 108 ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದು, ಜಿಲ್ಲೆಯಲ್ಲಿ 18 ಇದ್ದು, ಅವುಗಳಲ್ಲಿ 16 ಆಂಬುಲೆನ್ಸ್ಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಅವು ಸಕಾಲದಲ್ಲಿ ಸೇವೆಗಳನ್ನು ಒದಗಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಚಾಲಕರು, ಶುಶೂಷ್ರಕರು ಸೇರಿದಂತೆ ಮತ್ತಿತರ ಸಿಬ್ಬಂದಿಗಳ ಕೊರತೆ ಇದೆ. ಆದರೆ ಈ ಬಗ್ಗೆ ನನ್ನ ಗಮನಕ್ಕೆ ತಂದಿಲ್ಲ. ಸರಕಾರದಿಂದ ಅನುಮತಿ ಪಡೆದು ಹೊರಗುತ್ತಿಗೆ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು.
ಮಳೆಗಾಲದಲ್ಲಿ ಅನೇಕ ರೋಗ- ರುಜಿನಗಳು ಹರಡುವ ಸಾಧ್ಯತೆಗಳು ಹೆಚ್ಚು ಇರುತ್ತವೆ. ಈ ಬಗ್ಗೆ ಜನರಲ್ಲಿ ಆರೋಗ್ಯ ಶಿಕ್ಷಣದ ಬಗ್ಗೆ ಅರಿವು ಮೂಡಿಸಬೇಕು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯಕ್ಕನುಗುಣವಾಗಿ ಔಷಧಿಗಳ ದಾಸ್ತಾನುಗಳನ್ನು ಇಟ್ಟುಕೊಳ್ಳಬೇಕು ಎಂದ ಅವರು, ಕಾರ್ಕಳದ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ತಜ್ಞ ವೈದ್ಯರ ಕೊರತೆಯಿಂದಾಗಿ ಈ ಹಿಂದೆ 126 ಕ್ಕೂ ಹೆಚ್ಚು ಹೆರಿಗೆ ಆಗುತ್ತಿದ್ದವು. ಆದರೆ ಈಗ 5-6 ಗೆ ಇಳಿದಿವೆ. ತಜ್ಞ ವೈದ್ಯರ ನೇಮಕಕ್ಕೆ ಮುಂದಾಗಬೇಕು ತಪ್ಪಿದ್ದಲ್ಲಿ ಖಾಸಗಿ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಆರೋಗ್ಯ ಸೇವೆಗಳನ್ನು ಒದಗಿಸಬೇಕು. ಸ್ಕಾö್ಯನಿಂಗ್ ಸೇರಿದಂತೆ ಮತ್ತಿತರ ಔಷಧಿಗಳಿಗಾಗಿ ಚೀಟಿ ಬರೆದುಕೊಟ್ಟು ಖಾಸಗಿಯಲ್ಲಿ ಪಡೆಯುವಂತೆ ಸೂಚಿಸಲಾಗುತ್ತಿದೆ. ಬಡಜನರು ಹೆಚ್ಚಾಗಿ ಸರಕಾರಿ ಆಸ್ಪತ್ರೆಗಳಿಗೆ ಬರುವುದರಿಂದ ಅವರಿಗೆ ಹಣದ ಕೊರತೆ ಇರುತ್ತದೆ. ಹೀಗಾಗದಂತೆ ನೋಡಿಕೊಳ್ಳಬೇಕು. ಶಾಲಾ ಹಾಗೂ ಅಂಗನವಾಡಿ ಮಕ್ಕಳಿಗೆ ನಿಗಧಿಪಡಿಸಿದಂತೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಕೈಗೊಳ್ಳಬೇಕು ಎಂದರು.
ಮುಂಬರುವ ಮಂಗಾರು ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಲಿವೆ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ತೊಂದರೆ ಆಗದಂತೆ ಸಾಕಷ್ಟು ದಾಸ್ತಾನು ಇಟ್ಟುಕೊಂಡು ರೈತರ ಬೇಡಿಕೆಗೆ ಅನುಗುಣವಾಗಿ ಇವುಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದ ಅವರು, ಸರಕಾರ ರೈತರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪುಸ್ತಕದಲ್ಲಿ ಅಂಕಿ-ಸಂಖ್ಯೆಗಳನ್ನು ತೋರಿಸುವ ಬದಲು ರೈತರ ಮನೆ ಬಾಗಿಲಿಗೆ ಹೋಗಿ, ಸೌಕರ್ಯಗಳನ್ನು ನೀಡಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು.
ಕಂದಾಯ ಇಲಾಖೆಯಲ್ಲಿ ಜಾಗ ಮಂಜೂರು ಮಾಡಿದರೂ ದಾಖಲಾತಿ ನೀಡಲು ಅನುಕೂಲವಾಗುವಂತೆ 1-5 ಡಾಟಾ ಎಂಟ್ರಿ ಮಾಡಲು 3652 ಕಡತಗಳು ಬಾಕಿ ಇವೆ. ಇವುಗಳನ್ನು ಆದ್ಯತೆಯ ಮೇಲೆ ಮಾಡಬೇಕು. ಜಾಗ ಕೋರಿ 53-54 ಹಾಗೂ 94 ಸಿ ಗಳಲ್ಲಿ ಅತ್ಯಂತ ಬಡಜನರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಈವರೆಗೂ ಅವುಗಳ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಜಿಲ್ಲಾಧಿಕಾರಿಗಳು ಪ್ರತೀ ವಾರ ತಹಶೀಲ್ದಾರರುಗಳ ಸಭೆ ಕರೆದು ಹಕ್ಕು ಪತ್ರಗಳನ್ನು ನೀಡಲು ಮುಂದಾಗಬೇಕು. ಮುಂದಿನ ಬಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಾಗ 500 ಕ್ಕೂ ಹೆಚ್ಚು ಜನರಿಗೆ ಹಕ್ಕುಪತ್ರ ವಿತರಣೆ ಆಗುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ ಅವರು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು 680 ಕ್ಕೂ ಹೆಚ್ಚು 54-55 ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು, ಇವು ಇ-ಪೋರ್ಟಲ್ನಲ್ಲಿ ದಾಖಲಿಸದೇ ಇರುವ ಬಗ್ಗೆ ಕ್ರಮ ಕೈಗೊಳ್ಳಲು ತಿಳಿಸಿದ್ದರೂ ಸಹ ಈವರೆಗೆ ಯಾವುದೇ ರೀತಿಯ ಕ್ರಮವಾಗಿಲ್ಲ. ಈ ಬಗ್ಗೆ ಗಮನಹರಿಸಬೇಕು ಎಂದರು.
ಜಿಲ್ಲೆಯಲ್ಲಿ ಡೀಮ್ಡ್ ಫಾರೆಸ್ಟ್ ಭೂಮಿಯು ಅರಣ್ಯ ಅಥವಾ ಕಂದಾಯ ಇಲಾಖೆ ಸೇರಿದೆಯೇ ಎಂಬ ಬಗ್ಗೆ ವರ್ಗೀಕರಿಸಲು ಈಗಾಗಲೇ ಜಂಟಿ ಸರ್ವೆಯನ್ನು ಕೈಗೊಳ್ಳಬೇಕಿತ್ತು. ಸರ್ವೇ ಮಾಡುವುದರಿಂದ ಭೂಮಿಯು ಅರಣ್ಯ ಅಥವಾ ಕಂದಾಯ ಇಲಾಖೆಗೆ ಸೇರಿದೆ ಎಂದು ಗುರುತಿಸಲು ಅವಕಾಶವಿದೆ. ಡೀಮ್ಡ್ ಫಾರೆಸ್ಟ ವ್ಯಾಪ್ತಿಯಲ್ಲಿ ಕೆಲವು ಸರಕಾರಿ ಕಟ್ಟಡಗಳು, ಶಾಲೆಗಳು, ಆಸ್ಪತ್ರೆಗಳು ಸೇರಿವೆ. ಈ ಸರ್ವೇ ಕಾರ್ಯವನ್ನು ಕೈಗೊಳ್ಳಲು ಇರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ, ಕೂಡಲೇ ಸರ್ವೇ ಕಾರ್ಯವನ್ನು ಕೈಗೊಳ್ಳಬೇಕು ಎಂದರು.
ಸಾಮಾಜಿಕ ಭದ್ರತೆಯನ್ನು ಒದಗಿಸುವ ಪಿಂಚಣಿ ಸರ್ವೇ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಅರ್ಹ ಯಾವುದೇ ಒಬ್ಬ ಫಲಾನುಭವಿಗಳು ಕೈತಪ್ಪಿ ಹೋಗದಂತೆ ನೋಡಿಕೊಳ್ಳಬೇಕು. ತಪ್ಪು ದಾಖಲೆಗಳನ್ನು ಪಡೆದು ಲಾಭ ಪಡೆಯುತ್ತಿದ್ದರೆ ಅವರನ್ನು ಕೈಬಿಡಬೇಕು ಎಂದರು.
ಸಭೆಯಲ್ಲಿ ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಡಾ.ಮಂಜುನಾಥ್ ಭಂಡಾರಿ, ಕಿಶೋರ್ ಕುಮಾರ್ ಪುತ್ತೂರು, ಶಾಸಕರುಗಳಾದ ವಿ.ಸುನಿಲ್ ಕುಮಾರ್, ಯಶ್ಪಾಲ್ ಎ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ.ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಖಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಡಿ.ಎಫ್.ಓ ರುಥ್ರೇನ್ ಪಿ, ವೈಲ್ಡ್ಲೈಫ್ ಡಿ.ಎಫ್.ಓ ಶಿವರಾಮ್ ಎಂ. ಬಾಬು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
















