ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ಎಂಎಸ್ಡಿಸಿ, ಮಣಿಪಾಲ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರಾಜೆಕ್ಟ್ ಎಕ್ಸ್ಪೋ – ಸೃಜನಶೀಲತೆ ಮತ್ತು ತಂತ್ರಜ್ಞಾನದ ಸಂಗಮ” ಕಾರ್ಯಕ್ರಮವು ಜೂನ್ 2ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಯು. ಸಿ. ನಿರಂಜನ್, ಡಾ. ಮುರಳಿಕೃಷ್ಣ ಎಸ್. ಎನ್., ಶಶಿಧರ್ ಶೆಟ್ಟಿ, ಡಾ. ಅಂಜಯ್ಯ ದೇವಿನೇನಿ ಹಾಗೂ ರಾಜಲಕ್ಷ್ಮಿ ಆನಂದನ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಅತಿಥಿಗಳು ತಂತ್ರಜ್ಞಾನದ ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸೃಜನಶೀಲತೆ, ನವೀನತೆ ಹಾಗೂ ಪರಿಣಾಮಕಾರಿ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯತೆಯನ್ನು ತಿಳಿಸಿದರು. ನಿರಂತರವಾಗಿ ತಮ್ಮ ಜ್ಞಾನವನ್ನು ನವೀಕರಿಸಿಕೊಂಡು ತಂತ್ರಜ್ಞಾನ ಕ್ಷೇತ್ರದ ಹೊಸ ಬೆಳವಣಿಗೆಗಳಿಗೆ ಹೊಂದಿಕೊಳ್ಳುವ ಮೂಲಕ ಯಶಸ್ಸು ಸಾಧಿಸಬಹುದು ಎಂದರು. ವಿದ್ಯಾರ್ಥಿಗಳು ನವೀನ ಯೋಜನೆಗಳ ಮೂಲಕ ಸಮಾಜಕ್ಕೆ ಉಪಯುಕ್ತವಾದ ಪರಿಹಾರಗಳನ್ನು ನೀಡುವಂತೆ ಕರೆ ನೀಡಿದರು.
ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿನಿಯರಾದ ರಶ್ಮಿತಾ, ಅಪೂರ್ವ, ಸಿಂಚನಾ, ನಾಗಶ್ರೀ, ಅನುಶ್ರೀ ಶೆಟ್ಟಿ ಹಾಗೂ ಸ್ಮಿತಾ ಅತಿಥಿಗಳನ್ನು ಪರಿಚಯಿಸಿದರು. ಸಾನಿಕಾ ವಂದಿಸಿದರು. ನಿರೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ನವೀನ ಯೋಜನೆಗಳ ಪ್ರಸ್ತುತಿ ಗಮನ ಸೆಳೆಯಿತು.










