ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಮುಂಬರುವ ದಿನಗಳಲ್ಲಿ ಬರಬಹುದಾದ ಮೇವಿನ ಕೊರತೆಯನ್ನು ನೀಗಿಸಲು ಅಲ್ಪಾವಧಿ ಹಾಗೂ ಧೀರ್ಘಾವಧಿ ತಳಿಯ ಮೇವು ಉತ್ಪಾದನೆಯನ್ನು ಬೇಡಿಕೆಗೆ ಅನುಗುಣವಾಗಿ ರೈತರು ಹುಲ್ಲನ್ನು ಬೆಳೆಯಲು ಅನುಕೂಲವಾಗುವಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮೇವು ಅಭಿವೃದ್ಧಿ ಕಾರ್ಯಪಡೆ ಸಮಿತಿ ಸಭೆ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಡಿದರು.
ಪ್ರಸ್ತುತ ಮಾನ್ಸೂನ್ ಮಳೆಗಾಲದಲ್ಲಿ ಹವಾಮಾನ ವೈಪರಿತ್ಯದಿಂದಾಗಿ ವಾಡಿಕೆಗಿಂತ ಕಡಿಮೆ ಬೀಳುತ್ತಿದ್ದು, ಮುಂದಿನ ದಿನಗಳಲ್ಲಿ ಬರಪರಿಸ್ಥಿತಿ ಉಂಟಾಗುವ ಸಾಧ್ಯತೆಗಳು ಇವೆ. ಜಿಲ್ಲೆಯಲ್ಲಿ ಪ್ರಸ್ತುತ ಮುಂಬರುವ 42 ವಾರಗಳಿಗೆ ಆಗುವಷ್ಟು ಮೇವು ಲಭ್ಯವಿದೆ. ಆದರೆ ಕುಂದಾಪುರ ಹಾಗೂ ಬೈಂದೂರು ತಾಲೂಕುಗಳಲ್ಲಿ ಮೇವಿನ ಪ್ರಮಾಣ ಇತರೆ ತಾಲೂಕುಗಳಿಗೆ ಹೋಲಿಸಿದ್ದಲ್ಲಿ ಕಡಿಮೆ ಇದೆ. ಕುಂದಾಪುರ ತಾಲೂಕಿನಲ್ಲಿಯೇ ಹೆಚ್ಚು ರಾಸುಗಳು ಇವೆ. ಈ ಭಾಗದಲ್ಲಿ ಮೇವಿನ ಬೇಡಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಹಾಗೂ ಸುಸ್ಥಿರ ಮೇವು ಉತ್ಪಾದನೆಗೆ ಮೇವು ಬೆಳೆ ಪ್ರದೇಶವನ್ನು ವಿಸ್ತರಿಸಲು ಹಾಗೂ ವಿವಿಧ ಮೂಲಗಳಿಂದ ಮೇವಿನ ಉತ್ಪಾದನೆಯನ್ನು ಹೆಚ್ಚಿಸಲು ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಇತ್ತೀಚಿನ ಜಾನುವಾರು ಗಣತಿಯಂತೆ 1,96,905 ರಾಸುಗಳು, 3178 ಆಡು ಕುರಿಗಳಿವೆ. ಮುಂಬರುವ ದಿನಗಳಲ್ಲಿ ಬರ ಘೋಷಣೆಯಾದ ತಾಲೂಕುಗಳಲ್ಲಿ ಮೇವಿನ ಕಿಟ್ಗಳನ್ನು ವಿತರಿಸುವಾಗ ಜಾನುವಾರುಗಳ ಸಂಖ್ಯೆ, ನೀರಾವರಿ ಸೌಲಭ್ಯಗಳನ್ನು ಪರಿಗಣಿಸಿ, ಸಣ್ಣ, ಅತೀ ಸಣ್ಣ ರೈತರಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳಿಗೆ ಉಚಿತವಾಗಿ ವಿತರಿಸಲು ಮುಂದಾಗಬೇಕು ಎಂದರು.
ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಕೆ.ಎಂ.ಎಫ್ ವತಿಯಿಂದ 22670 ಕೆ.ಜಿ ಯಷ್ಟು ಹೈಬ್ರಿಡ್ ಜೋಳವನ್ನು ಸಹಾಯಧನದೊಂದಿಗೆ, 3778 ಮಿನಿ ಕಿಟ್ಗಳು ಹಾಗೂ 3991.57 ಮೆ.ಟನ್ ಗಳನ್ನು ರಾಸುಮೇವುಗಳನ್ನು ವಿತರಿಸಲಾಗಿತ್ತು ಎಂದರು.
ಜಾನುವಾರುಗಳಿಗೆ ದಪ್ಪ ದಂಟಿನ ಮೇವುಗಳನ್ನು ಕತ್ತರಿಸಿ, ತಿನಿಸಿದ್ದಲ್ಲಿ ಮೇವುಗಳೂ ಪೋಲಾಗದಂತೆ ಸಂರಕ್ಷಿಸಿ, ಉಪಯೋಗಿಸಬಹುದು. ಇಲಾಖೆ ವತಿಯಿಂದ ಸಹಾಯಧನದ ಮೇಲೆ ಮೇವು ಕತ್ತರಿಸುವ ಯಂತ್ರವನ್ನು ವಿತರಿಸುವ ಕುರಿತು ರೈತರುಗಳಿಗೆ ಪಶುಸಖಿಯರಿಂದ ಅರಿವು ಮೂಡಿಸಿ, ಹೆಚ್ಚು ಜನ ರೈತರು ಇದರ ಉಪಯೋಗ ಪಡೆದುಕೊಳ್ಳುವಂತೆ ಕ್ರಮವಹಿಸಬೇಕು ಎಂದರು.
ಸಾಮಾಜಿಕ ಅರಣ್ಯ ಪ್ರದೇಶ, ಮೀಸಲು ಅರಣ್ಯಗಳ ಅಂಚಿನಲ್ಲಿ ಗೋಮಾಳ ಪಾಳು ಬಿದ್ದ ಭೂಮಿಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳಲ್ಲಿ ನೀರಿನ ಲಭ್ಯತೆಗೆ ಅನುಗುಣವಾಗಿ ಮೇವುಗಳನ್ನು ಬೆಳೆಯಲು ಗುರುತಿಸಿ, ಸೊಸೈಟಿಗಳ ಮೂಲಕ ರೈತರಿಗೆ ನೀಡಲು ಕ್ರಮವಹಿಸಬೇಕು ಎಂದರು.
ಜಿಲ್ಲೆಯಲ್ಲಿನ ಹೆನ್ರಿ ತಾಲೂಕಿನ ಕೆರೆಬೆಟ್ಟುವಿನಲ್ಲಿ ಹಾಗೂ ಕಾಪು ತಾಲೂಕು ಎಲ್ಲೂರಿನಲ್ಲಿ ಗೋಶಾಲೆಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತ ಪಡೆದು ಮಾತನಾಡಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಆಧ್ಯತೆಯ ಮೇಲೆ ಪೂರ್ಣಗೊಳಿಸಲು ಸೂಚನೆ ನೀಡಿದರು.
ಜಿಲ್ಲೆಯ ಕಾಪು, ಉಡುಪಿ, ಬೈಂದೂರು, ಹೆಬ್ರಿ, ಕುಂದಾಪುರ, ಕಾರ್ಕಳ ಹಾಗೂ ಬ್ರಹ್ಮಾವರ ತಾಲೂಕು ಮತ್ತು ಉಡುಪಿ ಪಾಲಿಕ್ಲಿನಿಕ್ ನಲ್ಲಿ ತಲಾ ಒಂದರಂತೆ ಒಟ್ಟು 8 ಪಶು ಸಂಜೀವಿನಿ 1962 ಆಂಬುಲೆನ್ಸ್ಗಳಿದ್ದು, ಈ ವಾಹನಗಳ ಮೂಲಕ 2026 ರ ಏಪ್ರಿಲ್ ನಿಂದ ಜೂನ್ ವರೆಗೆ ಒಟ್ಟು 2500 ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿರುತ್ತದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ತೊಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್, ಕೃಷಿ ಇಲಾಖೆಯ ಉಪನಿರ್ದೇಶಕ ಚಂದ್ರಶೇಕರ್ ನಾಯ್ಕ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
















